
ಬೆಂಗಳೂರು(ಮೇ.06): ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟಕ್ಕೆ ಸರ್ಜರಿ ನಡೆಯುವ ಬಗ್ಗೆ ಬಿಜೆಪಿ ಹೈಕಮಾಂಡ್ನಿಂದ ಈಗ ಸಂದೇಶ ಬರಬಹುದು ಆಗ ಸಂದೇಶ ಬರಬಹುದು ಎಂಬ ನಿರೀಕ್ಷೆಯಲ್ಲಿರುವ ರಾಜ್ಯ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸಾದ ಹಿನ್ನೆಲೆಯಲ್ಲಿ ಏನಾದರೂ ನಿರ್ಧಾರ ಹೊರಬೀಳಬಹುದು ಎಂದು ಚಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ.
ಸಂಪುಟ ಕಸರತ್ತಿನ ಚೆಂಡು ಹೈಕಮಾಂಡ್ ಅಂಗಳದಲ್ಲಿರುವುದರಿಂದ ಸಚಿವ ಸ್ಥಾನದ ಆಕಾಂಕ್ಷಿಗಳು ಹಾಗೂ ಸಂಪುಟ ಪುನಾರಚನೆಯಾದರೆ ಸ್ಥಾನ ಕಳೆದುಕೊಳ್ಳಬೇಕಾಗಬಹುದು ಎಂಬ ಆತಂಕದಲ್ಲಿರುವ ಸಚಿವರು ದೆಹಲಿಯತ್ತ ನೋಟ ಹರಿಸಿದ್ದಾರೆ.
ಈ ನಡುವೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹೂಡಿಕೆದಾರರನ್ನು ಆಹ್ವಾನಿಸುವ ಸಂಬಂಧ ಇದೇ ತಿಂಗಳ 10ರಂದು ದೆಹಲಿಗೆ ತೆರಳಲಿದ್ದಾರೆ. ಎರಡು ದಿನಗಳ ಕಾಲ ವಾಸ್ತವ್ಯ ಹೂಡುವ ಸಾಧ್ಯತೆಯಿರುವುದರಿಂದ ಆ ವೇಳೆ ವರಿಷ್ಠರೊಂದಿಗೆ ಮಾತುಕತೆ ನಡೆಯಬಹುದು ಎಂಬ ಮಾತೂ ಕೇಳಿಬರುತ್ತಿದೆ.
ಮಂಗಳವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಪ್ರಧಾನಿ ಮೋದಿ ಅವರು ವಿದೇಶ ಪ್ರವಾಸದಿಂದ ವಾಪಸಾದ ಬಳಿಕ ಮಾತುಕತೆ ನಡೆಸಿ ಸಂಪುಟ ಕುರಿತು ನಿರ್ಣಯ ತಿಳಿಸುವುದಾಗಿ ರಾಜ್ಯ ನಾಯಕರಿಗೆ ಹೇಳಿದ್ದರು ಎನ್ನಲಾಗಿದೆ. ಹೀಗಾಗಿ, ನಿರ್ಣಯ ತಕ್ಷಣಕ್ಕೇ ಕೈಗೊಳ್ಳಲಾಗುತ್ತದೆಯೋ ಅಥವಾ ಇನ್ನಷ್ಟುಕಾಲ ಮುಂದೂಡಲ್ಪಡುತ್ತದೆಯೋ ಎಂಬುದು ಕುತೂಹಲಕರವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.