
ಬೆಂಗಳೂರು (ಏ.24): ಕಾಶ್ಮೀರದ ಪಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಆದರೆ, ದೇಶದ ಭದ್ರತೆಗೆ ಧಕ್ಕೆ ತಂದಿರುವ ವಿಚಾರದ ಕುರಿತು ಚರ್ಚಿಸಿ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ಆಘಾತವುಂಟು ಮಾಡಿದೆ. ಈ ದಾಳಿಯನ್ನು ನಾವು ಖಂಡಿಸುತ್ತೇವೆ. ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು.
ಅದರ ಕುರಿತು ಕಾರ್ಯತಂತ್ರ ರೂಪಿಸಲು ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು ಚರ್ಚಿಸಬೇಕು. ದೇಶ ರಕ್ಷಣೆ ನಮ್ಮ ಮೊದಲ ಆದ್ಯತೆ. ಈ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ ಎಂದು ಹೇಳಿದರು. ಉಗ್ರರ ದಾಳಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕಿದೆ. ಇನ್ನು, ಕರ್ನಾಟಕದವರು ಕಾಶ್ಮೀರದಲ್ಲಿ ಸಿಲುಕಿರುವ ವಿಚಾರ ತಿಳಿದ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂತೋಷ್ ಲಾಡ್ ನೇತೃತ್ವದ ತಂಡವನ್ನು ಕಾಶ್ಮೀರಕ್ಕೆ ಕಳುಹಿಸಿದ್ದಾರೆ. ಅಲ್ಲಿರುವವರನ್ನು ಸುರಕ್ಷಿತವಾಗಿ ಕರೆತರಲಾಗುವುದು ಎಂದರು.
ಬಿಜೆಪಿ ಜನಾಕ್ರೋಶ ಕೇಂದ್ರದ ವಿರುದ್ಧ ವ್ಯಕ್ತವಾಗಲಿ: ದೇಶದ ಇಂಧನ, ರಸಗೊಬ್ಬರ, ಪೆಟ್ರೋಲ್ ಸೇರಿ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಕೇಂದ್ರ ಬಿಜೆಪಿ ಸರ್ಕಾರವೇ ಕಾರಣ. ಜನಾಕ್ರೋಶ ಏನಿದ್ದರೂ ಬಿಜೆಪಿ ಸರ್ಕಾರದ ವಿರುದ್ಧ ವ್ಯಕ್ತವಾಗಬೇಕೇ ಹೊರತು ಬೆಲೆ ಏರಿಕೆ ತಗ್ಗಿಸಲು ಗ್ಯಾರಂಟಿ ಯೋಜನೆ ಕೊಟ್ಟ ನಮ್ಮ ವಿರುದ್ಧವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಸ್ವಾತಂತ್ರ್ಯ ಉದ್ಯಾನದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿ, ಬಿಜೆಪಿಯ ರಾಜ್ಯ ನಾಯಕರಿಗೆ ನಾಚಿಕೆಯಾಗಬೇಕು. ಮೋದಿ ಅವರು ಡೀಸೆಲ್ ಬೆಲೆ ಏರಿಕೆ ಮಾಡಿದ್ದರಿಂದ ಸಾರಿಗೆ ವೆಚ್ಚ, ವಿದ್ಯುತ್ ದರ, ಕೃಷಿ ವೆಚ್ಚ, ತರಕಾರಿ ದಿನಸಿ ಬೆಲೆ, ಸಿಮೆಂಟ್, ಕಬ್ಬಿಣ ದರವಿಪರೀತ ಏರಿಕೆಯಾಗಿದೆ.
ಅಧಿಕಾರ ಶಾಶ್ವತವಲ್ಲ, ಭಕ್ತಿ ಶಾಶ್ವತ: ಧರ್ಮಸ್ಥಳದಲ್ಲಿ ಡಿ.ಕೆ ಶಿವಕುಮಾರ್ ಭಾವನಾತ್ಮಕ ಭಾಷಣ
ಬಿಜೆಪಿ ಮತ್ತು ಜೆಡಿಎಸ್ ನಾಯಕರು ನ್ಯಾಯವಾಗಿ ಮೋದಿ ಅವರ ಸರ್ಕಾರದ ವಿರುದ್ಧ ಹೋರಾಡಬೇಕು. ಆದರೆ, ಬಡವರ ಪರವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧವಲ್ಲ ಎಂದರು. ಬಿಜೆಪಿಯಲ್ಲಿ ಹಾಗೂ ಜನತಾದಳದಲ್ಲಿನ ಆಂತರಿಕ ಜಗಳ, ನಾಯಕತ್ವದ ಕೊರತೆ ಮುಚ್ಚಿಡಲು ಇಂದು ರಾಜ್ಯಾದ್ಯಂತ ಹೋರಾಟ ಮಾಡಲು ಮುಂದಾಗಿದ್ದಾರೆ. ನಮ್ಮದು ರೈತಪರ ಸರ್ಕಾರ, ಎಲ್ಲಾ ವರ್ಗದ ಜನರ ಪರವಾದ ಸರ್ಕಾರ. ನಾವು ರೈತರಿಗೆ ನೆರವಾಗಲು ಹಾಲಿನ ಬೆಲೆ 4 ರು. ಹೆಚ್ಚಳ ಮಾಡಿದ್ದೇವೆ. ದನಕರುಗಳ ಮೇವುಗಳಾದ ಇಂಡಿ, ಬೂಸಾ ಬೆಲೆ ಹೆಚ್ಚಾಗಿದೆ. ಹೀಗಾಗಿ ನಾವು ರೈತರಿಗೆ ನೆರವಾಗಲು 4 ರು. ಹೆಚ್ಚಿಗೆ ಸಿಗುವಂತೆ ಮಾಡಿದರೆ ಪ್ರತಿಭಟನೆ ಮಾಡುತ್ತೀರಿ. ಆಮೂಲಕ ನೀವು ರೈತ ವಿರೋಧಿ ಎಂಬುದನ್ನು ಸಾಬೀತುಪಡಿಸಿದ್ದೀರಿ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.