ಕಳೆದ ಒಂದು ವರ್ಷದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು.
ಬೆಳಗಾವಿ (ಏ.02): ಕಳೆದ ಒಂದು ವರ್ಷದ ರಾಜ್ಯ ಬಿಜೆಪಿಯಲ್ಲಿನ ಬೆಳವಣಿಗೆ ಗಮನಿಸಿ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಂಡಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮದು ರಾಷ್ಟ್ರೀಯ ಪಕ್ಷ. ಯತ್ನಾಳ ವಿಚಾರದಲ್ಲಿ ಪಕ್ಷದಲ್ಲಿನ ಬೆಳವಣಿಗೆ ಗಮನಿಸಿಯೇ ಪಕ್ಷದ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಂಡಿದ್ದಾರೆ ಎಂದರು.
ಸಚಿವ ಕೆ.ಎನ್.ರಾಜಣ್ಣ ಅವರು ಹನಿಟ್ರ್ಯಾಪ್ ವಿಚಾರವನ್ನು ಸದನದಲ್ಲೇ ಪ್ರಸ್ತಾಪಿಸಿದ್ದಾರೆ. ಅಲ್ಲದೇ, ಇನ್ನೂ 48 ಶಾಸಕರು ಹನಿ ಟ್ರ್ಯಾಪ್ಗೆ ಒಳಗಾಗಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ. ಹಾಗಾಗಿ, ಹನಿಟ್ರ್ಯಾಪ್ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಗೃಹಸಚಿವರಿಗೆ ದೂರು ನೀಡುತ್ತಾರೆ. ಜನಸಾಮಾನ್ಯರು ಕೂಡ ಇನ್ನುಮುಂದೆ ಗೃಹ ಸಚಿವರಿಗೆ ದೂರು ನೀಡುವಂತೆ ಕರೆ ನೀಡಿದರು.
ಕಾಂಗ್ರೆಸ್ ನಾಯಕರ ಆಂತರಿಕ ಜಗಳ ಪ್ರಾರಂಭವಾಗಿದೆ. ಸಿದ್ದರಾಮಯ್ಯ ತಾವು ಪೂರ್ಣ ಪ್ರಮಾಣದಲ್ಲಿ ಸಿಎಂ ಆಗಬೇಕೆಂದು ಬಯಸಿದ್ದರೆ, ಡಿಸಿಎಂ ಡಿ.ಕೆ.ಶಿವಕುಮಾರ ಅವರು ಸಿಎಂ ಆಗಲು ದೆಹಲಿ ಯಾತ್ರೆ ನಡೆಸಿದ್ದಾರೆ. ಯಾವುದೇ ಕ್ಷಣದಲ್ಲಿ ಸರ್ಕಾರ ಪತನವಾಗುವ ಭೀತಿ ಕಾಂಗ್ರೆಸ್ನಲ್ಲಿ ಎದುರಾಗಿದೆ ಎಂದರು. ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಯ ಅನುಷ್ಠಾನದಿಂದ ಯಾವುದೇ ಅಭಿವೃದ್ಧಿ ಕೆಲಸವಾಗುತ್ತಿಲ್ಲ. ಹಣಕಾಸಿನ ಪರಿಸ್ಥಿತಿ ಚಿಂತಾಜನಕವಾಗಿದೆ. ಗುತ್ತಿಗೆದಾರರ ₹60 ಸಾವಿರ ಕೋಟಿ ಬಾಕಿ ಬಿಲ್ ಇದೆ. ಇದನ್ನು ಸರಿಪಡಿಸುವ ಬದಲು ಸರ್ಕಾರ ಹಾಲಿನ ದರ ಹಾಗೂ ವಿದ್ಯುತ್ ದರ ಹೆಚ್ಚಳ ಮಾಡಿದ್ದು ಸರಿಯಲ್ಲ ಎಂದು ಟೀಕಿಸಿದರು.
ಶಾಸಕ ಯತ್ನಾಳ್ ಉಚ್ಚಾಟನೆಗೆ ಪ್ರತಿಕ್ರಿಯಿಸಲ್ಲ: ಸಂಸದ ಜಗದೀಶ್ ಶೆಟ್ಟರ್
ಹಾಲಿನ ದರ ₹4 ಹೆಚ್ಚಳ ಮಾಡಿದ್ದು ನೇರವಾಗಿ ಹೈನುಗಾರಿಕೆ ಮಾಡುವವರಿಗೆ ಕೊಡುವುದಾಗಿ ಹೇಳಿರುವ ಸರ್ಕಾರ, ಜನಸಾಮಾನ್ಯರ ಮೇಲೆ ಬರೆ ಹಾಕುವ ಬದಲು ಸರ್ಕಾರದ ಖಜಾನೆಯಿಂದ ಕೊಡಬೇಕು. ರಾಜ್ಯದಲ್ಲಿ ಪ್ರತಿ ನಿತ್ಯ ಬೆಲೆ ಏರಿಕೆಯಿಂದ ಜನರು ಬೇಸತ್ತು ಹೋಗಿದ್ದಾರೆ. ಏ.5 ರಿಂದ ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು. ಸಿದ್ದರಾಮಯ್ಯನವರು ಆಡಳಿತದ ಹಿಡಿತ ಕಳೆದುಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ ಎಂದು ಆರೋಪಿಸಿದರು. ಗೋಷ್ಠಿಯಲ್ಲಿ ಬೆಳಗಾವಿ ಗ್ರಾಮೀಣ ಜಿಲ್ಲಾ ಘಟಕದ ಅಧ್ಯಕ್ಷ ಸುಭಾಷ್ ಪಾಟೀಲ್, ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮಾಜಿ ಶಾಸಕ ಮಹಾಂತೇಶ ದೊಡಗೌಡರ, ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ ಇದ್ದರು.