ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

Published : Apr 05, 2023, 10:18 AM IST
ಒಂದೇ ಕ್ಷೇತ್ರಕ್ಕೆ ಸಿದ್ದು ಕಟ್ಟಿಹಾಕಲು ಯತ್ನ: ಕೆಲವು ನಾಯಕರಿಂದ ಹೈಕಮಾಂಡ್‌ ಮೇಲೆ ಒತ್ತಡ

ಸಾರಾಂಶ

ಕಳೆದ ಬಾರಿಯಂತೆ ಈ ಬಾರಿಯೂ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸ ಬಯಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕಟ್ಟಿಹಾಕುವ ಪ್ರಯತ್ನ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಬೆಂಗಳೂರು (ಏ.05): ಕಳೆದ ಬಾರಿಯಂತೆ ಈ ಬಾರಿಯೂ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸ ಬಯಸಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಕಟ್ಟಿಹಾಕುವ ಪ್ರಯತ್ನ ನಡೆದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ವರುಣ ಹಾಗೂ ಕೋಲಾರ ಎರಡೂ ಕ್ಷೇತ್ರದಿಂದಲೂ ಸ್ಪರ್ಧಿಸಲು ಸಿದ್ದರಾಮಯ್ಯ ಅವರು ಬಯಸಿದ್ದು, ಈ ಬಗ್ಗೆ ಬಹಿರಂಗ ಆಕಾಂಕ್ಷೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್‌ ಈಗಾಗಲೇ ಅವರಿಗೆ ವರುಣಾದಿಂದ ಸ್ಪರ್ಧಿಸುವಂತೆ ಸೂಚಿಸಿದ್ದು, ಟಿಕೆಟ್‌ ಕೂಡ ಪ್ರಕಟಿಸಿದೆ. ಆದರೆ, ಕೋಲಾರದಿಂದಲೂ ಸ್ಪರ್ಧಿಸುವಂತೆ ಸ್ಥಳೀಯರಿಂದ ತೀವ್ರ ಒತ್ತಡವಿದೆ.

ಏಕೆಂದರೆ, ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿದರೆ ಸುತ್ತಮುತ್ತಲಿನ ಹಲವು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ನೆರವಾಗಲಿದೆ. ಅಲ್ಲದೆ, ಸಿದ್ದರಾಮಯ್ಯ ಆಪ್ತರು ನಡೆಸಿರುವ ಆತಂರಿಕ ಸರ್ವೇ ಪ್ರಕಾರ ಕೋಲಾರದಲ್ಲಿ ಅವರು ಗೆಲ್ಲುವ ಅವಕಾಶ ಉತ್ತಮವಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದರು.ಆದರೆ, ರಾಜ್ಯ ನಾಯಕರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡಬಾರದು ಎಂದು ಹೈಕಮಾಂಡ್‌ ಮೇಲೆ ಒತ್ತಡ ಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕ ಸಹಮತ ಹೊಂದಿದೆ ಎನ್ನಲಾಗುತ್ತಿದ್ದು, ಇದು ಸಿದ್ದರಾಮಯ್ಯ ಅವರನ್ನು ಬೇಸರ ಉಂಟು ಮಾಡಿದೆ ಎನ್ನಲಾಗಿದೆ.

ಬಿಎಸ್‌ವೈ, ಸಿದ್ದರಾಮಯ್ಯ ಒಳಒಪ್ಪಂದ: ದೇವೇಗೌಡ ಹೊಸ ಬಾಂಬ್‌

ವರುಣ ಕ್ಷೇತ್ರದಲ್ಲಿ ತಮ್ಮ ಪುತ್ರನ ಭವಿಷ್ಯ ಸುರಕ್ಷಿತಗೊಳಿಸಬೇಕು ಎಂಬ ಉದ್ದೇಶ ಹೊಂದಿರುವ ಸಿದ್ದರಾಮಯ್ಯ ಅವರಿಗೆ ಕೋಲಾರದಿಂದ ಸ್ಪರ್ಧಿಸುವ ಬಯಕೆ ಹೊಂದಿದ್ದಾರೆ. ಹೈಕಮಾಂಡ್‌ ಒಪ್ಪಿದರೆ ಕೋಲಾರ ಹಾಗೂ ವರುಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಗೆಲುವು ಕಂಡರೆ ವರುಣ ಕ್ಷೇತ್ರವನ್ನು ಪುತ್ರನಿಗೆ ಬಿಟ್ಟುಕೊಡುವುದು ಸಿದ್ದರಾಮಯ್ಯ ಅವರ ಉದ್ದೇಶ. ಆದರೆ, ಸಿದ್ದರಾಮಯ್ಯ ಅವರನ್ನು ಒಂದೇ ಕ್ಷೇತ್ರಕ್ಕೆ ಕಟ್ಟಿಹಾಕುವ ಮೂಲಕ ಈ ಅವಕಾಶ ನಿರ್ಮಾಣ ಮಾಡದಂತೆ ಆಗುತ್ತಿದೆ.

ಪರಂ ಎರಡು ಸ್ಥಾನ ಬೇಡಿಕೆ ವದಂತಿ!: ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್‌ ಅವರು, ಕೊರಟಗೆರೆ ಮಾತ್ರವಲ್ಲದೆ ತಮಗೆ ಪುಲಕೇಶಿ ನಗರದಿಂದಲೂ ಟಿಕೆಟ್‌ ನೀಡುವಂತೆ ಹೈಕಮಾಂಡ್‌ ಮೇಲೆ ಒತ್ತಡ ನಿರ್ಮಾಣ ಮಾಡುತ್ತಿದ್ದಾರೆ ಎಂಬ ವದಂತಿ ಹುಟ್ಟಹಾಕಲಾಗಿತ್ತು. ಇದನ್ನು ಪರಮೇಶ್ವರ್‌ ಆಪ್ತ ಮೂಲಗಳು ನಿರಾಕರಿಸುತ್ತಿವೆಯಾದರೂ ಇಂತಹದೊಂದು ವದಂತಿ ಹುಟ್ಟುಹಾಕುವ ಮೂಲಕ ಸಿದ್ದರಾಮಯ್ಯ ಅವರ ಎರಡು ಕ್ಷೇತ್ರಗಳ ಬೇಡಿಕೆಗೆ ಪೈಪೋಟಿ ಹುಟ್ಟುಹಾಕುವ ಉದ್ದೇಶ ಇದರ ಹಿಂದೆ ಇದೆ ಎನ್ನಲಾಗಿದೆ. ಮತ್ತೊಂದು ಮೂಲಗಳ ಪ್ರಕಾರ ಹೈಕಮಾಂಡ್‌ ಏನಾದರೂ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಎಂದು ಒತ್ತಡ ಹಾಕಿದರೆ ಅಂತಿಮವಾಗಿ ಸಿದ್ದರಾಮಯ್ಯ ಅವರು ಕೋಲಾರವನ್ನೇ ಆಯ್ಕೆ ಮಾಡಿಕೊಂಡು ಪುತ್ರ ಡಾ. ಯತೀಂದ್ರ ಅವರಿಗೆ ಬಿಟ್ಟುಕೊಡುವ ಸಾಧ್ಯತೆಯಿದೆ. 

ಡಿ.ಕೆ.ಶಿವಕುಮಾರ್‌ಗೆ ಸಿಎಂ ಹುದ್ದೆ ಕೊಡಲ್ಲ ಎಂದಿಲ್ಲ: ಸಿದ್ದರಾಮಯ್ಯ

ಆದರೆ, ಖುದ್ದು ರಾಹುಲ್‌ ಗಾಂಧಿ ಅವರು ಮಧ್ಯಪ್ರವೇಶ ಮಾಡಿ ವರುಣದಿಂದಲೇ ನೀವು ಸ್ಪರ್ಧಿಸಬೇಕು ಎಂದು ಸೂಚಿಸಿದರೆ ಆಗ ಸಿದ್ದರಾಮಯ್ಯ ಅವರು ಏನು ಮಾಡುತ್ತಾರೆ ಎಂಬುದು ಕುತೂಹಲಕರ. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್
Karnataka News Live: ಬೆಂಗಳೂರಿನ ಹಲವೆಡೆ ಇಂದು ಪವರ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?