ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಹಣದ ಕೊರತೆ ಇಲ್ಲ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Mar 14, 2024, 11:18 AM IST
Highlights

ಬಿಜೆಪಿ ಆರೋಪಿಸುವಂತೆ, ರಾಜ್ಯಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹಣಕಾಸಿನ ಯಾವುದೇ ಸಮಸ್ಯೆಗಳಿಲ್ಲ. ಈ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ 36,000 ಕೋಟಿ ರು. ವ್ಯಯಿಸಿದ್ದೇವೆ. ಮುಂದಿನ ಸಾಲಿಗೆ 52,000 ಕೋಟಿ ರು. ಮೀಸಲಿರಿಸಿದ್ದೇವೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 
 

ಉಡುಪಿ (ಮಾ.14): ಬಿಜೆಪಿ ಆರೋಪಿಸುವಂತೆ, ರಾಜ್ಯಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹಣಕಾಸಿನ ಯಾವುದೇ ಸಮಸ್ಯೆಗಳಿಲ್ಲ. ಈ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳಿಗೆ 36,000 ಕೋಟಿ ರು. ವ್ಯಯಿಸಿದ್ದೇವೆ. ಮುಂದಿನ ಸಾಲಿಗೆ 52,000 ಕೋಟಿ ರು. ಮೀಸಲಿರಿಸಿದ್ದೇವೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಉಡುಪಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಉಡುಪಿ ಜಿಲ್ಲೆಯ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ರಾಜ್ಯದ ಬೊಕ್ಕಸ ದಿವಾಳಿಯಾಗಿದೆ, ಅಭಿವೃದ್ಧಿಗೆ ಹಣ ಸಾಕಾಗುತ್ತಿಲ್ಲ ಎಂದು ಬಿಜೆಪಿ ಜನರಲ್ಲಿ ತಪ್ಪು ಅಭಿಪ್ರಾಯ ಮೂಡಿಸುತ್ತಿದೆ. 

ದಿವಾಳಿಯಾಗಿದ್ದರೆ ಉಡುಪಿ ಜಿಲ್ಲೆಯಲ್ಲಿ ಇಷ್ಟು ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ಸಾಧ್ಯವಾಗುತ್ತಿತ್ತೇ ಎಂದವರು ಪ್ರಶ್ನಿಸಿದರು. ಅಭಿವೃದ್ಧಿ ಕಾಮಗಾರಿಗಳಿಗಾಗಿಯೇ 1,20,000 ಕೋಟಿ ರು. ಹಣ ಇಟ್ಟಿದ್ದೇವೆ ಎಂದರು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿಯೇ ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಲಾಗಿದೆ. ಈ ಸಮಿತಿಗಳಿಂದ ಸರ್ಕಾರ ದುಂದುವೆಚ್ಚ ಮಾಡುತ್ತಿದೆ ಎಂದೂ ಬಿಜೆಪಿ ಆರೋಪಿಸಿದೆ. ಯೋಜನೆಗಳು ನಿಜವಾದ ಅರ್ಹರಿಗೆ ತಲುಪಿಸುವುದಕ್ಕಾಗಿಯೇ ಈ ಸಮಿತಿಗಳನ್ನು ರಚಿಸಿದ್ದೇವೆ ಎಂದವರು ಸಮಜಾಯಿಶಿ ನೀಡಿದರು. ಇದೇ ಸಂದರ್ಭ ಮುಖ್ಯಮಂತ್ರಿ ಅವರು ಉಡುಪಿ ಜಿಲ್ಲೆಯಲ್ಲಿ 34.66 ಕೋಟಿ ರು.ಗಳ ಯೋಜನೆಗಳನ್ನು ಉದ್ಘಾಟಿಸಿದರು. ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಿದರು. 

ಮೀನುಗಾರರಿಗೆ ಗ್ಯಾರಂಟಿ ನೆಮ್ಮದಿ: ಮೀನುಗಾರಿಕಾ ಬಂದರು ಸಚಿವ ಮಾಂಕಾಳ ವೈದ್ಯ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಲೆಲ್ಲಾ ಮೀನುಗಾರರಿಗೆ ಲಾಭ ಆಗಿದೆ. ಈಗ ಮತ್ಸ್ಯ ಕ್ಷಾಮ ತಲೆದೋರಿದೆ, ಆದರೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳಿಂದ ಮೀನುಗಾರರು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ಎಂದರು. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಗೇರು ಬೀಜ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗ್ಯಾರಂಟಿ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರೇಜು, ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಪಂ ಸಿಇಓ ಪ್ರತೀಕ್ ಬಾಯಲ್ ವೇದಿಕೆಯಲ್ಲಿದ್ದರು.

ಈ ಬಾರಿಯ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ಸಿಂದ ಒಬ್ಬ ಸಚಿವರ ಸ್ಪರ್ಧೆಯೂ ಇಲ್ಲ?

ಕಾಂಗ್ರೆಸ್ ಪಕ್ಷದ ನಾಯಕರಾದ ಜಯಪ್ರಕಾಶ್ ಹೆಗ್ಡೆ, ಐವನ್ ಡಿಸೋಜ, ಗೋಪಾಲ ಪೂಜಾರಿ, ವಿನಯಕುಮಾರ್ ಸೊರಕೆ, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ಉದಯಕುಮಾರ್ ಶೆಟ್ಟಿ ಮುನಿಯಾಲು, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ವೇದಿಕೆಯಲ್ಲಿದ್ದರು. ಉಡುಪಿ ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿ 3,11,652 ಕುಟುಂಬಗಳಿಗೆ 114 ಕೋಟಿ ರು.ಗಳ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ 7,66,000 ಮಂದಿಗೆ 85 ಕೋಟಿ ರು. ಬೆಲೆಯ ಉಚಿತ ಅಕ್ಕಿ, ಯುವನಿಧಿ ಯೋಜನೆಯಡಿ 2,341 ಮಂದಿಗೆ 14,94,00 ರು. ಮಾಸಾಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

click me!