
ಚಿಕ್ಕಮಗಳೂರು (ಅ.03): ಕರ್ನಾಟಕದಲ್ಲಿ ಈಗಾಗಲೇ ಒಬ್ಬರು ಸಿಎಂ ಇದ್ದಾರೆ. ಸಿಎಂ ಕುರ್ಚಿ ಖಾಲಿ ಇಲ್ಲ. ಅದು ಖಾಲಿಯಾದ ಮೇಲೆ ಅದರ ಬಗ್ಗೆ ತೀರ್ಮಾನ ಮಾಡೋಣ ಎಂದು ರಾಜ್ಯ ಇಂಧನ ಸಚಿವ ಕೆ.ಜೆ.ಜಾರ್ಜ್ ಐದು ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಸ್ಪಷ್ಟಪಡಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಲ್.ಪಿ. ಸಭೆಯಲ್ಲಿ 2-3 ವರ್ಷ ಅಂತ ಮಾಡಿಲ್ಲ. 5 ವರ್ಷಕ್ಕೆ ಮಾಡಿರೋದು.
ಐದು ವರ್ಷ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಇಲ್ಲ ಅಂತ ಹೇಳ್ದೋರು ಯಾರೆಂದು ಪ್ರಶ್ನಿಸಿದ್ದಾರೆ. ನಾನು 2 ವರ್ಷಕ್ಕೆ ಬಿಡುತ್ತೇನೆ ಎಂದು ಸಿಎಂ ಹೇಳೋಕಾಗುತ್ತಾ ಹೇಳುತ್ತಾರಾ ಎಂದು ಸುದ್ದಿಗಾರರ ಪ್ರಶ್ನೇಗೆ ಉತ್ತರಿಸಿದರು. ಸಿ.ಎಲ್.ಪಿ. ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕನನ್ನ ಎಲ್ಲಾ ಶಾಸಕರು ಆಯ್ಕೆ ಮಾಡಿದ್ದಾರೆ. ಕಾಲದ ಗಡುವು ಇರುವುದಿಲ್ಲ. ಬದಲಾವಣೆ ಮಾಡಬೇಕಾದರೆ ಸಿ.ಎಲ್.ಪಿ. ನಾಯಕರು, ಹೈಕಮಾಂಡ್ ಇದ್ದಾರೆ, ಅವರು ಕ್ರಮ ಕೈಗೊಳ್ತಾರೆ ಎಂದರು.
ಮಾಜಿ ಸಂಸದ ಶಿವರಾಮೇಗೌಡ ಎಐಸಿಸಿ ಅಧ್ಯಕ್ಷರಾ, ಪ್ರಧಾನ ಕಾರ್ಯದರ್ಶಿಗಳಾ ಇಲ್ಲ ರಾಜ್ಯದ ಉಸ್ತುವಾರಿನಾ ? ಅವರ ಮಾತಿಗೆ ಅಷ್ಟೊಂದು ಪ್ರಾಮುಖ್ಯತೆ ಏಕೆ ಕೊಡ್ತೀರಾ ಎಂದು ಮಾಧ್ಯಮದವರನ್ನ ಪ್ರಶ್ನಿಸಿದ್ದಾರೆ. ನಾವೆಲ್ಲ ಶಾಸಕರು ಶಾಸಕಾಂಗ ಸಭೆ ನಾಯಕನನ್ನ ಸೆಲೆಕ್ಟ್ ಮಾಡಿದೆವು, 2-3 ವರ್ಷ ಅಂತ ಗಡುವು ಹಾಕಿಲ್ಲ. ಸಿ.ಎಲ್.ಪಿ ನಾಯಕರನ್ನ ಪೂರ್ತಿ ಅವಧಿಗೆ ಸೆಲೆಕ್ಟ್ ಮಾಡುವುದು. ಅದರ ಬದಲಾವಣೆ ಸಿ.ಎಲ್.ಪಿ. ಹಾಗೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದು ಸ್ಪಷ್ಟಪಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಗೆ ಏಕೆ ಅವಕಾಶ ಇಲ್ಲ. ಎಲ್ಲರಿಗೂ ಅವಕಾಶ ಇದೆ. ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಖುರ್ಚಿ ಖಾಲಿ ಇಲ್ಲ. ಖಾಲಿ ಆದಾಗ ಅದರ ಬಗ್ಗೆ ತೀರ್ಮಾನ ಮಾಡೋಣ ಎಂದು ಹೇಳಿದರು.
ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಪತ್ರಿಕಾ ರಂಗ ಸಮಾಜಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಹೇಳಿದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದ ಜತೆಗೆ ಪತ್ರಿಕಾ ರಂಗವೂ ಒಂದಾಗಿದ್ದು, ರಚನಾತ್ಮಕ ಟೀಕೆ, ಟಿಪ್ಪಣಿಗಳ ಮೂಲಕ ರಾಜಕೀಯ ರಂಗ, ಆಡಳಿತ ವರ್ಗವನ್ನು ಎಚ್ಚರಿಸಿ ಸರಿದಾರಿಗೆ ತರುವ ಕೆಲಸವನ್ನು ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು.ಪತ್ರಿಕಾ ವಲಯದಿಂದ ರಚನಾತ್ಮಕ ಟೀಕೆ, ಟಿಪ್ಪಣಿಗಳು ಆ ಕ್ಷಣಕ್ಕೆ ನೋವುಂಟು ಮಾಡಿದರು. ಅವುಗಳನ್ನು ಸಕರಾತ್ಮಕವಾಗಿ ತೆಗೆದುಕೊಳ್ಳುವುದರಿಂದ ಸಮಾಜಕ್ಕೆ ಒಳ್ಳೆಯದಾಗುತ್ತದೆ. ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಸಾಧ್ಯ ವಾಗುತ್ತದೆ ಎಂದು ಹೇಳಿದ ಸಚಿವರು, ತಮ್ಮ ರಾಜಕೀಯ ಜೀವನದಲ್ಲಿ ಅನೇಕ ಪತ್ರಕರ್ತರು ತಮಗೆ ಮಾರ್ಗ ದರ್ಶನ ನೀಡಿದ್ದನ್ನು ಸ್ಮರಿಸಿಕೊಂಡರು.
ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ ಹಿರಿಯರು ತಮಗೆ ರಾಜಕೀಯವಾಗಿ ಮಾರ್ಗದರ್ಶನ ಮಾಡಿದ್ದಾರೆ ಎಂದು ಹೇಳಿದರು.ಯುವಶಕ್ತಿ ಈ ದೇಶದ ಸಂಪತ್ತು, ಯುವ ಶಕ್ತಿಯನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ದೇಶ ಅಭಿವೃದ್ಧಿ ಸಾಧ್ಯವಾಗುತ್ತದೆ. ಇಂದು ಸಾಕಷ್ಟು ವಿದ್ಯಾವಂತರು ಉದ್ಯೋಗ ದೊರೆಯದೆ ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯಾವಂತರಿಗೆ ಉದ್ಯೋಗ ಸೃಷ್ಠಿ ಸುವುದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಜವಬ್ದಾರಿ. ರಾಜ್ಯ ಸರ್ಕಾರ ಉದ್ಯೋಗ ಸೃಷ್ಠಿಗೆ ಶ್ರಮಿಸುತ್ತಿದೆ ಎಂದು ಹೇಳಿದರು.ರಾಜ್ಯದಲ್ಲಿ ವಿದ್ಯುತ್ಗೆ ಭಾರೀ ಬೇಡಿಕೆ ಇದ್ದು, ಈ ನಿಟ್ಟಿನಲ್ಲಿ ಇಂಧನ ಇಲಾಖೆ ಕುಸುಮ್ ಯೋಜನೆ ಸೇರಿದಂತೆ ಇತರೆ ಯೋಜನೆಯಡಿಯಲ್ಲಿ ₹110 ಕೋಟಿ ವೆಚ್ಚದಲ್ಲಿ 2500 ಮೆಗಾ ವ್ಯಾಟ್ ಉತ್ಪಾದನೆಗೆ ಚಾಲನೆ ನೀಡಲಾಗಿದೆ. ಇದರಿಂದ ರಾಜ್ಯದ ರೈತರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.