
ಮಂಡ್ಯ (ಮಾ.05): ಮಂಡ್ಯಕ್ಕೆ ಕೃಷಿ ವಿಶ್ವವಿದ್ಯಾಲಯದ ಜೊತೆಗೆ ತೋಟಗಾರಿಕೆ ವಿಶ್ವವಿದ್ಯಾಲಯವನ್ನೂ ತರುವ ಕುತಂತ್ರ ನಡೆಯುತ್ತಿದೆ. ಉತ್ತರ ಕರ್ನಾಟಕಕ್ಕೆ ಕೊಟ್ಟ ವಿವಿಯನ್ನು ಕಿತ್ತು ಇಲ್ಲಿಗೆ ತರುವ ಅವಶ್ಯಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕ ವಿರೋಧಿ ನಡೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಗ್ರಾಮದಲ್ಲಿ ನಡೆದ ಭತ್ತ ನಾಟಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವವಿದ್ಯಾಲಯ ವಿಚಾರದಲ್ಲಿ ರಾಜಕಾರಣ ಮಾಡಬಾರದು. ಮಂಡ್ಯಕ್ಕೆ ಬೇರೊಂದು ವಿಶ್ವವಿದ್ಯಾಲಯವನ್ನು ತರಲಿ. ಅದಕ್ಕೆ ನಮ್ಮ ಅಭ್ಯಂತರವಿಲ್ಲ. ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿ. ಚಲುವರಾಯಸ್ವಾಮಿ ರಾಜ್ಯದ ಸಚಿವರು. ಹಾಗಾಗಿ ಈ ರೀತಿಯ ತಾರತಮ್ಯ ಮಾಡಬಾರದು. ಎಲ್ಲಾ ಜಿಲ್ಲೆಗೆ ನ್ಯಾಯ ಕೊಡುವ ಕೆಲಸ ಮಾಡಲಿ ಎಂದು ಒತ್ತಾಯಿಸಿದರು.
ಬಾಗಲಕೋಟೆ ತೋಟಗಾರಿಕೆ ವಿವಿ ಮುಚ್ಚುವ ಯತ್ನ: ಬಾಗಲಕೋಟೆಯಲ್ಲಿ ತೋಟಗಾರಿಕೆ ವಿವಿ ಇದೆ. ಅದನ್ನು ಮುಚ್ಚಿ ಅಲ್ಲಿರುವ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ಇಲ್ಲಿಗೆ ತರುವುದಕ್ಕೆ ಹೊರಟಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಅವಧಿಯಲ್ಲಿ ತೆರೆಯಲಾದ ಒಂಬತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರ ಕೈಗೊಂಡಿದೆ. ಹಣಕಾಸಿನ ಕೊರತೆಯ ಕಾರಣ ಮುಂದಿಟ್ಟುಕೊಂಡು ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿದ್ದು, ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ದೂರಿದರು.
ಅಭಿವೃದ್ಧಿ ವಿರೋಧಿ, ಅಸಮರ್ಥ ಸರ್ಕಾರ: ರಾಜ್ಯದಲ್ಲಿರುವುದು ಅಭಿವೃದ್ಧಿ ವಿರೋಧಿ, ಅಸಮರ್ಥ, ದಲಿತ, ಹಿಂದುಳಿದ ವರ್ಗಗಳ ವಿರೋಧಿ ಸರ್ಕಾರ, ಇದು ಬೆಲೆ ಏರಿಕೆ ಕಾಂಗ್ರೆಸ್ ಸರ್ಕಾರ. ಈ ಸರ್ಕಾರ ಜನವಿರೋಧಿ, ಬಡವಿರೋಧಿಯಾಗಿದ್ದು, ಇಂತಹ ದುಷ್ಟ ಸರ್ಕಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ. ಆ ಕೆಲಸವನ್ನು ಅಧಿವೇಶನದಲ್ಲಿ ಮಾಡುತ್ತೇವೆ. ಕಾಂಗ್ರೆಸ್ನ ಎಲ್ಲಾ ಜನವಿರೋಧಿ ನಿಲುವುಗಳನ್ನು ಬಿಜೆಪಿ ಶಾಸಕರು ಅತ್ಯಂತ ಗಂಭೀರವಾಗಿ ತೆಗೆದುಕೊಳ್ಳಬೇಕು. ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಟ್ಟಿಹಾಕುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಸಾರಿಗೆ ಸಂಸ್ಥೆಗೆ ೭ ಸಾವಿರ ಕೋಟಿ ರು. ಪಾವತಿಸಬೇಕಿದೆ. ವಿದ್ಯುತ್ ನಿಗಮಗಳಿಗೆ ಹಣ ಪಾವತಿಸಿಲ್ಲ. ಇಂತಹ ಕಾಂಗ್ರೆಸ್ ಸರ್ಕಾರದ ಕಿವಿಹಿಂಡಬೇಕಿದೆ. ಇದು ನುಡಿದಂತೆ ನಡೆದ ಸರ್ಕಾರವಲ್ಲ. ರಾಜ್ಯದ ಜನರೆದುರು ಮುಗ್ಗರಿಸಿಬಿದ್ದಿರುವ ಸರ್ಕಾರ ಎಂದು ಲೇವಡಿ ಮಾಡಿದರು.
ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದ ಸಿದ್ದರಾಮಯ್ಯ ಸರ್ಕಾರ: ಬಿ.ವೈ.ವಿಜಯೇಂದ್ರ
ಡಿಕೆಶಿ ಕ್ಷಮೆಯಾಚಿಸಲಿ: ನಟ್ಟು, ಬೋಲ್ಟ್ ಡಿಕೆಶಿ ಹೇಳಿಕೆ ವಿಚಾರವಾಗಿ, ಡಿಕೆಶಿ ಅವರಿಗೆ ವಿನಮ್ರವಾಗಿ ಹೇಳುತ್ತೇನೆ. ಅಧಿಕಾರ ಯಾರಿಗೂ ಶಾಶ್ವತ ಅಲ್ಲ, ಯಾರೂ ನಿಮ್ಮ ಗುಲಾಮರಲ್ಲ. ಅಧಿಕಾರ ಶಾಶ್ವತ ಎನ್ನುವ ರೀತಿಯ ವರ್ತನೆ ಸರಿಯಲ್ಲ. ಭಂಡತನ ಬಿಟ್ಟು ತಪ್ಪಿಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿದರು. ಮಾಜಿ ಸಚಿವ ಕೆ.ಸಿ.ನಾರಾಯಣಗೌಡ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡ ಎಸ್.ಸಚ್ಚಿದಾನಂದ, ಶಾಸಕ ಸತೀಶ್ ರೆಡ್ಡಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ.ಸಿದ್ದರಾಮಯ್ಯ, ಬಿಜೆಪಿ ಮಹಿಳಾ ಮುಖಂಡೆ ಲಕ್ಷ್ಮೀ ಅಶ್ವಿನ್ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಅಶೋಕ್ ಜಯರಾಂ, ಶ್ರೀಧರ್, ಹೆಚ್.ಆರ್.ಅಶೋಕ್ಕುಮಾರ್, ಬೇವಿನಹಳ್ಳಿ ಮಹೇಶ್, ರಾಮಚಂದ್ರ ಇತರರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.