
ವರದಿ: ರವಿ ಎಸ್ ಹಳ್ಳಿ ಏಷ್ಯಾನೆಟ್ ಸುವರ್ಣ ನ್ಯೂಸ್
ಕೊಡಗು (ಡಿ.15): ಚುನಾವಣೆ ಘೋಷಣೆಗೆ ಇನ್ನು ನಾಲ್ಕೈದು ತಿಂಗಳಷ್ಟೇ ಬಾಕಿ ಇದ್ದು, ಈಗಾಗಲೇ ಎಲ್ಲಾ ಪಕ್ಷಗಳಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಯುತ್ತಿದೆ. ಶಿಸ್ತಿನ ಪಕ್ಷ ಬಿಜೆಪಿಯಲ್ಲೂ ಕೊಡಗಿನ ಎರಡು ಕ್ಷೇತ್ರಗಳಿಗೆ ಒಂಭತ್ತು ಆಕಾಂಕ್ಷಿಗಳು ಟಿಕೆಟ್ಗಾಗಿ ಕಾದಿದ್ದಾರೆ.
ವಿರಾಜಪೇಟೆ ಕ್ಷೇತ್ರದಲ್ಲಿ ಕೆ.ಜಿ. ಬೋಪಯ್ಯ, ತೇಲಪಂಡ ಶಿವಕುಮಾರ್ ನಾಣಯ್ಯ, ರೀನಾ ಪ್ರಕಾಶ್, ಶಾಂತೆಯಂಡ ರವಿಕುಶಾಲಪ್ಪ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಹಾಗೆಯೇ ಮಡಿಕೇರಿ ಕ್ಷೇತ್ರದಲ್ಲಿ ಹಾಲಿ ಶಾಸಕ ಅಪ್ಪಚ್ಚು ರಂಜನ್, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಬಿ. ಭಾರತೀಶ್, ರೈತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಡಾ. ನವೀನ್ಕುಮಾರ್ ಆಕಾಂಕ್ಷಿಗಳಾಗಿದ್ದಾರೆ. ಆದರೆ, ಜಿಲ್ಲೆಯಲ್ಲಿ ಸದ್ಯ ಇರುವ ಪರಿಸ್ಥಿತಿಯಲ್ಲಿ ಹಾಲಿ ಶಾಸಕರಿಗೆ ಮತ್ತೆ ಟಿಕೆಟ್ ಕೊಡುವುದು ಖಾತರಿ ಎನ್ನಲಾಗುತ್ತಿದೆ.
ಹಾಲಿ ಶಾಸಕರಿಗೆ ಮತ್ತೆ ಮಣೆ: ಮಡಿಕೇರಿ ಕ್ಷೇತ್ರದಲ್ಲಿ ಶಾಸಕ ಅಪ್ಪಚ್ಚು ರಂಜನ್ ಕಳೆದ ಐದು ಬಾರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದರೆ, ವಿರಾಜಪೇಟೆ ಕ್ಷೇತ್ರದಿಂದ ಶಾಸಕ ಬೋಪಯ್ಯ ನಾಲ್ಕು ಬಾರಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಇಬ್ಬರು ಶಾಸಕರಿಗೆ ಕಳೆದ ಎರಡು ಚುನಾವಣೆಯಿಂದ ಟಿಕೆಟ್ ಕೊಡುವುದು ಬೇಡ ಎಂಬ ಸಣ್ಣ ವಿರೋಧ ಸಂಘದಿಂದಲೇ ವ್ಯಕ್ತವಾಗಿತ್ತು. ಆದರೂ ಕೊನೆ ಗಳಿಗೆಯಲ್ಲಿ ಎರಡು ಬಾರಿಯೂ ಬೋಪಯ್ಯ ಮತ್ತು ಅಪ್ಪಚ್ಚು ರಂಜನ್ ಅವರಿಗೆ ಟಿಕೆಟ್ ಕೊಡಲಾಗಿತ್ತು. ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಈಗಾಗಲೇ ಎರಡು ಕ್ಷೇತ್ರಗಳಲ್ಲಿ ಒಂಭತ್ತು ಆಕಾಂಕ್ಷಿಗಳು ಇದ್ದಾರೆ. ಆದರೆ ಕಾಂಗ್ರೆಸ್ ಕೂಡ ಈ ಬಾರಿ ಎರಡು ಕ್ಷೇತ್ರಗಳಲ್ಲಿ ಗೆಲ್ಲಲೇಬೇಕೆಂಬ ಹಠದೊಂದಿಗೆ ಈಗಾಗಲೇ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರಗಳಲ್ಲಿ ಗೆಲ್ಲುವ ವಿಶ್ವಾಸವಿರುವ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಿದ್ಧತೆ ನಡೆಸಿದೆ.
Ticket Fight: ಕೊಡಗಿನ ಎರಡು ಕ್ಷೇತ್ರಗಳಿಗೆ ಆಕಾಂಕ್ಷಿಗಳ ದಂಡು
ಪೊನ್ನಣ್ಣಗೆ ಟಿಕೆಟ್ ನೀಡಿದರೆ ಬಿಗ್ ಫೈಟ್: ಕಾಂಗ್ರೆಸ್ ವಿರಾಜಪೇಟೆ ಕ್ಷೇತ್ರದಿಂದ ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್ ಪೊನ್ನಣ್ಣ ಮತ್ತು ಮಡಿಕೇರಿ ಕ್ಷೇತ್ರದಿಂದ ಮಂಥರ್ ಗೌಡ ಇಬ್ಬರಿಗೆ ಟಿಕೆಟ್ ಕೊಡುವುದು ಖಚಿತ ಎನ್ನುವುದು ಕಾಂಗ್ರೆಸ್ ವಲಯದಲ್ಲೂ ಕೇಳಿ ಬರುತ್ತಿದೆ. ಒಂದು ವೇಳೆ ಈ ಇಬ್ಬರಿಗೆ ಟಿಕೆಟ್ ನೀಡಿದರೆ ಅವರಿಗೆ ಫೈಟ್ ನೀಡಿ ಗೆಲ್ಲುವುದು ಅತ್ಯಗತ್ಯ ಎನ್ನುವುದು ಬಿಜೆಪಿಯ ಪ್ಲಾನ್ ಆಗಿದೆ. ಒಂದು ವೇಳೆ ಎರಡು ಕ್ಷೇತ್ರಗಳಲ್ಲಿ ಬೇರೆಯವರಿಗೆ ಟಿಕೆಟ್ ಕೊಟ್ಟರೆ ಬಿಜೆಪಿ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಫೈಟ್ ನಡೆದು ಗೆಲ್ಲುವುದು ಕಷ್ಟಕರವಾಗುವುದು ಎನ್ನುವ ಚಿಂತನೆ ಬಿಜೆಪಿಯದ್ದು ಎನ್ನಲಾಗಿದೆ.
ಜಿಲ್ಲೆಯಲ್ಲಿ ಮತ ವೃದ್ಧಿಸಿಕೊಂಡ ಬಿಜೆಪಿ: ಜಿಲ್ಲೆಯಲ್ಲಿ ಬಿಜೆಪಿ ತನ್ನ ಶಕ್ತಿಯನ್ನು ವೃದ್ಧಿಸಿಕೊಂಡಿದೆ. ತನ್ನದೇಯಾದ ವೋಟುಗಳಿವೆ. ಆದರೆ ಗೌಡ ಮತ್ತು ಕೊಡವ ಮತಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಗೆಲ್ಲಲೇ ಬೇಕು ಎಂದು ತಂತ್ರ ರೂಪಿಸಿದೆ. ಹೀಗಾಗಿ ಕಾಂಗ್ರೆಸ್ನ ಯೋಜನೆಯನ್ನು ಫೈಲ್ಯೂರ್ ಮಾಡಬೇಕಾದರೆ ಹಾಲಿ ಶಾಸಕರೇ ಸೂಕ್ತ ಎನ್ನುವ ನಿರ್ಧಾರಕ್ಕೆ ಬಿಜೆಪಿ ಬಂದಿದೆ ಎನ್ನುವುದು ಹೆಸರು ಹೇಳದ ಬಿಜೆಪಿ ಪ್ರಮುಖ ನಾಯಕರೇ ಹೇಳಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲೂ ಹಾಲಿ ಇಬ್ಬರು ಶಾಸಕರಿಗೆ ಮತ್ತೆ ಟಿಕೆಟ್ ಕೊಡುವುದು ಖಚಿತ ಎನ್ನಲಾಗುತ್ತಿದೆ.
Kodagu: ಮ್ಯಾಂಡೌಸ್ ಪರಿಣಾಮ ಅಕಾಲಿಕ ಮಳೆ: ಅಪಾರ ಬೆಳೆ ನಷ್ಟ
ಟಿಕೆಟ್ ಬಗ್ಗೆ ಬಾಯಿಬಿಡದ ಜಿಲ್ಲಾಧ್ಯಕ್ಷ: ಆದರೆ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ಅವರನ್ನು ಕೇಳಿದರೆ ಪಕ್ಷದಲ್ಲಿ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಪ್ರತೀ ಕಾರ್ಯಕರ್ತರು ಕೂಡ ಶಾಸಕರಾಗಿ ಕೆಲಸ ನಿಬಾಯಿಸುವಷ್ಟು ಸಾಮರ್ಥ್ಯ ಉಳ್ಳವರಾಗಿದ್ದಾರೆ. ಆದರೆ ಯಾರಿಗೆ ಅದೃಷ್ಟಯವಿದೆಯೋ ಅವರಿಗೆ ಟಿಕೆಟ್ ಸಿಗುತ್ತೆ ಎಂದಷ್ಟೇ ಹೇಳಿದ್ದಾರೆ. ಹೀಗಾಗಲೇ ಚುನಾವಣೆಗೆ ಎದುರಿಸಲು ಪಕ್ಷ ಸಿದ್ಧವಾಗಿದ್ದು, ಯಾವಾಗ ಚುನಾವಣೆ ಘೋಷಣೆಯಾದರೂ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.