
ಹುಬ್ಬಳ್ಳಿ (ಅ.31): ವಕ್ಫ್ ಮೂಲಕ ರಾಜ್ಯದಲ್ಲಿ ಕೋಮು-ದ್ವೇಷ ಹರಡುತ್ತಿರುವ, ಇಸ್ಲಾಮಿಕರಣಕ್ಕೆ ಮುಂದಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಮುಖ್ಯಮಂತ್ರಿಯವರು ಸಚಿವ ಸಂಪುಟದಿಂದ ಕಿತ್ತೊಗೆಯಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಒತ್ತಾಯಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ನ ಡೋಂಗಿ ಜಾತ್ಯತೀತತೆ ಮತ್ತು ಮುಸ್ಲಿಮರ ತುಷ್ಟೀಕರಣದ ನೀತಿಯಿಂದಾಗಿ ದೇವಸ್ಥಾನಗಳ ಒಂದು ಇಂಚು ಜಾಗವೂ ಹೆಚ್ಚಾಗಿಲ್ಲ. ಆದರೆ, ಎಲ್ಲ ಪ್ರಮುಖ ಮತ್ತು ಹೆಚ್ಚು ಆದಾಯ ಇರುವ ದೇವಸ್ಥಾನಗಳನ್ನು ಸರ್ಕಾರ ತನ್ನ ಹಿಡಿತದಲ್ಲಿ ಇಟ್ಟುಕೊಂಡಿದೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರ ಇದ್ದಾಗಲೂ ರೈತರಿಗೆ ನೋಟಿಸ್ ನೀಡಲಾಗಿತ್ತು ಎಂದು ಕಾಂಗ್ರೆಸ್ನವರು ಆರೋಪಿಸುತ್ತಿದ್ದಾರೆ. ಆ ಸಮಯದಲ್ಲಿ ರೈತರಿಗೆ ನೋಟಿಸ್ ನೀಡಿದ್ದರೆ ಅದು ತಪ್ಪು. ಆಗ ಯಾರೂ ನಮ್ಮ ಗಮನಕ್ಕೆ ತಂದಿರಲಿಲ್ಲ. ನಮ್ಮ ಸರ್ಕಾರ ಇದ್ದುದರಿಂದ ವಕ್ಫ್ ಮಂಡಳಿಯವರು ಗೌಪ್ಯವಾಗಿ ನೋಟಿಸ್ ನೀಡಿದ್ದರು. ಆಗ ನಮ್ಮ ಗಮನಕ್ಕೆ ಬಂದಿದ್ದರೆ ಮಂಡಳಿಯವರಿಗೆ ಆಗಲೇ ಎಚ್ಚರಿಕೆ ನೀಡಿ, ನೋಟಿಸ್ ಹಿಂಪಡೆಯಲು ಸೂಚನೆ ನೀಡುತ್ತಿದ್ದೆವು. ಈಗ ರೈತರು ನಮ್ಮ ಗಮನಕ್ಕೆ ತಂದಿದ್ದರಿಂದ ಹೋರಾಟ ಮಾಡಲಾಗುತ್ತಿದೆ. ವಕ್ಫ್ ಆಸ್ತಿ ವಿವಾದ ಈಗಲೂ ಬೆಳಕಿಗೆ ಬರುತ್ತಿರಲಿಲ್ಲ. ಕೆಲವು ರೈತರ ಜಮೀನಿನ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಬಂದಿದ್ದರಿಂದ, ಉಳಿದವರು ಸಬ್ ರಿಜಿಸ್ಟ್ರಾರ್ ಕಚೇರಿಗೆ ಹೋಗಿ ತಮ್ಮ ದಾಖಲೆಗಳನ್ನು ಪರಿಶೀಲಿಸಿದಾಗ ಇದು ಬೆಳಕಿಗೆ ಬಂದಿದೆ ಎಂದರು.
ಅಕ್ರಮ ಕಟ್ಟಡ ತಡೆಗೆ ಶೀಘ್ರದಲ್ಲೇ ಪ್ರಬಲ ಕಾನೂನು: ಸಿಎಂ ಸಿದ್ದರಾಮಯ್ಯ
ವಕ್ಫ್ ಅದಾಲತ್ ನಿಲ್ಲಿಸಿ: ರೈತರಿಗೆ ನೀಡಿದ್ದ ನೋಟಿಸ್ ಹಿಂಪಡೆಯಲಾಗಿದೆ ಎಂದು ಹೇಳುತ್ತಿದ್ದಾರೆ. ಆದರೆ, ರೈತರ ಪಹಣಿಯಲ್ಲಿ ಈಗಲೂ ವಕ್ಫ್ ಆಸ್ತಿ ಎಂದು ನಮೂದಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ರೈತರು ಜಮೀನು ಹೊಂದಿದ್ದಾರೆ. ಇತ್ತೀಚಿನ ವರ್ಷಗಳ ಪಹಣಿಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಾಗಿರುವುದನ್ನು ಕೂಡಲೇ ತೆಗೆದು ಹಾಕಬೇಕು. ಪ್ರತಿ ಜಿಲ್ಲೆಗಳಿಗೆ ಹೋಗಿ ವಕ್ಫ್ ಮಂಡಳಿಯವರು ವಕ್ಫ್ ಅದಾಲತ್ ನಡೆಸುತ್ತಿದ್ದು ಕೂಡಲೇ ಅದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಹಲವು ರೈತರಿಗೆ ವಕ್ಫ್ ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ವಿಜಯಪುರದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಹೋರಾಟ ನಡೆಸುತ್ತಿದ್ದಾರೆ. ಈಗ ನಾನು ಈ ಹೋರಾಟದಲ್ಲಿ ಪಾಲ್ಗೊಂಡು ರೈತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.