
ಮಂಡ್ಯ (ಫೆ.02): ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ರೈತರು, ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ, ಕೃಷಿಗೆ ಕಡಿಮೆ ಆದ್ಯತೆ ನೀಡಿ ವೈಜ್ಞಾನಿಕ ಸಂಶೋಧನೆಗಳಿಗೆ ಅಗತ್ಯ ಹಣಕಾಸು ಒದಗಿಸಿಲ್ಲ. ಕೃಷಿ ಉತ್ಪನ್ನಮಾರುಕಟ್ಟೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಹಣ ಕೊಟ್ಟಿಲ್ಲ. ಪ್ರಮುಖ ಆಹಾರ, ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಮಂಡಳಿಗಳನ್ನು ರಚಿಸಬೇಕೆಂಬ ಬೇಡಿಕೆ ಸ್ಪಂದಿಸಿಲ್ಲ. ರಸಗೊಬ್ಬರಗಳ ಬೆಲೆ ಇಳಿಕೆ ಮಾಡಲಾಗುವ ನಿರೀಕ್ಷೆ ಹುಸಿಯಾಗಿದೆ. ಕೃಷಿ ವಲಯಕ್ಕೆ ನಬಾರ್ಡ್ ನಲ್ಲಿ ನೀಡಲಾಗುವ ಅನುದಾನ ಕಡಿಮೆಯಾಗಿದ್ದು, ರಾಜ್ಯವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಸಿರಿಧಾನ್ಯಕ್ಕೆ ಪ್ರೋತ್ಸಾಹ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ. ಕಳೆದ ಬಜೆಟ್ನಲ್ಲಿ ಘೋಷಣೆಯಾಗಿದ್ದ ಅಗ್ರಿ ಡಿಜಿಟಲ್ ಇಂಡಿಯಾ ಪ್ರಗತಿ ಕಂಡಿಲ್ಲ. ಈ ಬಾರಿ ಬಜೆಟ್ನಲ್ಲಿ ಮಾಯವಾಗಿದೆ ಎಂದು ತಿಳಿಸಿದ್ದಾರೆ.
ಬಜೆಟ್ ಕುರಿತು ಹೇಳಿಕೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕಳೆದ ಸಾಲಿನಲ್ಲಿ 89,000 ಕೋಟಿ ರು. ಮೀಸಲಿಟ್ಟಿದ್ದರು. ಆದರೆ, ಈಗ 9 ಸಾವಿರ ಕೋಟಿಯನ್ನು ಕಡಿತ ಮಾಡಿ 80,000 ಕೋಟಿಗೆ ಸೀಮಿತಗೊಳಿಸಿದ್ದಾರೆ. ವರ್ಷದಿಂದ ವರ್ಷಕ್ಕೆ ನರೇಗಾದಲ್ಲಿ ಉದ್ಯೋಗ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ನಗರ ಪ್ರದೇಶಗಳಿಗೂ ಯೋಜನೆ ವಿಸ್ತರಿಸಲು ಬಜೆಟ್ನಲ್ಲಿ ಹಣ ಮೀಸಲಿಡುವ ಬದಲು ಈ ರೀತಿ ಕಡಿತ ಮಾಡಿರುವುದು ಮತ್ತಷ್ಟು ನಿರುದ್ಯೋಗ ಸಮಸ್ಯೆಗೆ ಕಾರಣವಾಗುತ್ತದೆ.
- ಎನ್.ಎಲ್.ಭರತ್ ರಾಜ್, ಪ್ರಾಂತ ರೈತ ಸಂಘ ತಾಲೂಕು ಅಧ್ಯಕ್ಷ, ಮಳವಳ್ಳಿ
ಕೃಷಿಕರು, ಬಡ, ಮಧ್ಯಮ ವರ್ಗದ ಬಗ್ಗೆ ಬಜೆಟ್ನಲ್ಲಿ ಅತಿಹೆಚ್ಚು ಕಾಳಜಿ: ಕುಮಾರಸ್ವಾಮಿ
ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ. 12 ಲಕ್ಷ ರು.ವರೆಗೆ ಆದಾಯ ಹೊಂದಿರುವವರಿಗೆ ತೆರಿಗೆ ವಿನಾಯ್ತಿ ನೀಡಿರುವುದನ್ನು ಹೊರತು ಪಡಿಸಿ ಮೇಕೆದಾಟು ಯೋಜನೆ ಸೇರಿದಂತೆ ಎಲ್ಲ ವರ್ಗಗಳ ಬಡವರ ಆರ್ಥಿಕ ಪರಿಸ್ಥಿತಿಯನ್ನು ಮೇಲೆತ್ತಲು ಯಾವುದೇ ಕಾರ್ಯಕ್ರಮಗಳು ಜಾರಿಯಾಗಿಲ್ಲ. ಕರ್ನಾಟಕಕ್ಕೆ ನಿರ್ಧಿಷ್ಟ ಯೋಜನೆಗಳು ಘೋಷಣೆಯಾಗಿಲ್ಲ. ಶ್ರೀಸಾಮಾನ್ಯರ ನಿರೀಕ್ಷೆಗೆ ತಕ್ಕಂತೆ ಉತ್ತಮ ಆಯವ್ಯಯ ಮಂಡನೆಯಾಗಿಲ್ಲ.
- ಎಚ್.ಟಿ.ಕೃಷ್ಣೇಗೌಡ, ಮಾಜಿ ಉಪಾಧ್ಯಕ್ಷ, ರಾಜ್ಯ ಸಾವಯವ ಕೃಷಿ ಉನ್ನತ ಸಮಿತಿ
ದೇಶದ ವಿದ್ಯಾವಂತ ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸುವ ಗುರಿಯೊಂದಿಗೆ ಉತ್ತಮ ಬಜೆಟ್ ಮಂಡನೆಯಾಗಿದೆ. ಎಲ್ಲ ಕ್ಷೇತ್ರಗಳಿಗೂ ಅನುಕೂಲವಾಗುವ ರೀತಿಯಲ್ಲಿ ಬಜೆಟ್ನಲ್ಲಿ ಮಂಡನೆಯಾಗಿರುವ ಎಲ್ಲಾ ಯೋಜನೆಗಳು ಕಾರ್ಯರೂಪಕ್ಕೆ ಬಂದಾಗಲಷ್ಟೇ ಜನರಿಗೆ ಅನುಕೂಲವಾಗಲಿದೆ.
- ಎ.ಆರ್.ರುದ್ರಪ್ರಕಾಶ್, ನಾಗಮಂಗಲ
ವಿಕಸಿತ ಭಾರತದ ಕನಸನ್ನು ನನಸು ಮಾಡುವ ಐತಿಹಾಸಿಕ ಬಜೆಟ್ ಇದಾಗಿದೆ. ಪ್ರಸ್ತುತ ಆರ್ಥಿಕ ಪರಿಸ್ಥಿತಿಗೆ ತಕ್ಕಂತೆ ದೇಶದ ಎಲ್ಲಾ ವರ್ಗಗಳ ಜನರಿಗೆ ಹಾಗೂ ಸರ್ಕಾರಿ ನೌಕರರಿಗೆ ಅನುಕೂಲವಾಗುವಂತೆ ಉತ್ತಮ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಪ್ರಧಾನಿ ನರೇಂದ್ರಮೋದಿ ಅವರಿಗೆ ರಾಜ್ಯದ ಜನತೆಯ ಪರವಾಗಿ ಅಭಿನಂದಿಸುತ್ತೇನೆ.
- ನರಸಿಂಹಮೂರ್ತಿಜೀಗೌಡ, ರಾಜ್ಯ ಬಿಜೆಪಿ ಓಬಿಸಿ ಘಟಕದ ಕಾರ್ಯಕಾರಿಣಿ ಸಮಿತಿ ಸದಸ್ಯ
ಬಡ ಹಾಗೂ ಮಧ್ಯಮ ವರ್ಗದವರ ಪಾಲಿಗೆ ಬಜೆಟ್ ಆಶಾದಾಯಕವಾಗಿದೆ. ಬೆಳೆಗಳ ಉತ್ಪಾದಕತೆ ವೃದ್ಧಿಸಲು ಪ್ರಧಾನಮಂತ್ರಿ ಧನ-ಧಾನ್ಯ ಯೋಜನೆ ಆರಂಭಿಸುತ್ತಿರುವುದು ರೈತರಿಗೆ ಅನುಕೂಲ. ಟಿವಿ, ಪೋನ್ , ಔಷಧಿಗಳು, ಸ್ವದೇಶಿ ಬಟ್ಟೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಇಳಿಕೆ ಜನಸಾಮಾನ್ಯರಿಗೆ ಅನುಕೂಲವಾಗಿದೆ.
- ಎಸ್.ಜೆ.ಆನಂದ್ , ಬಿಜೆಪಿ ಮುಖಂಡರು, ಸಬ್ಬನಕುಪ್ಪೆ
ಕೃಷಿ, ತೋಟಗಾರಿಕೆ ವಿವಿ ಸ್ಥಾಪನೆಗೆ ಸರ್ಕಾರ ಅಧಿಕೃತ ಅನುಮೋದನೆ: ಸಚಿವ ಚಲುವರಾಯಸ್ವಾಮಿ
ಕೇಂದ್ರ ಬಜೆಟ್ ನಲ್ಲಿ ರೈತರಿಗೆ ಅನುಕೂಲವಾಗುವ ಯಾವುದೇ ಹೊಸ ಯೋಜನೆಗಳನ್ನು ರೂಪಿಸಿಲ್ಲ. ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಗೊಳಿಸಿ ಕಾಯ್ದೆ ಜಾರಿಗೆ ತರಲು ಮುಂದಾಗಿಲ್ಲ. ಉದ್ಯೋಗ ಸೃಷ್ಟಿಸುವ ಯೋಜನೆಗಳನ್ನು ಜಾರಿಗೊಳಿಸದೆ ನಿರಾಶದಾಯಕ ಬಜೆಟ್ ಆಗಿದೆ
- ಕಿರಂಗೂರು ಪಾಪು, ರೈತ ಮುಖಂಡರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.