
ಮೈಸೂರು (ಫೆ.12): ಪ್ರತಿ ಬೂತ್ ನಲ್ಲಿ ಪಕ್ಷದ ಮತ ಗಳಿಕೆ ಪ್ರಮಾಣ ಶೇ.10 ರಷ್ಟು ಹೆಚ್ಚಳವಾಗಬೇಕು, ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಬೇಕು ಎಂದು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಅವರು ರಾಜ್ಯದ ಮುಖಂಡರಿಗೆ ಖಡಕ್ ಸೂಚನೆ ನೀಡಿದ್ದಾರೆ. ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆದ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಿದ್ದ ಅವರು, ನಗರದ ರಾಡಿಸನ್ ಬ್ಲೂ ಹೋಟೆಲ್ನಲ್ಲಿ ರಾಜ್ಯದ ಕೋರ್ ಕಮಿಟಿ ಸಭೆ ನಡೆಸಿದರು.
ಸದಸ್ಯರಾದ ಬಸವರಾಜ ಬೊಮ್ಮಾಯಿ, ಕರ್ನಾಟಕ ಲೋಕಸಭಾ ಚುನಾವಣೆ ಪ್ರಭಾರಿ ರಾಧಾ ಮೋಹನ್ ಅಗರವಾಲ್, ಕೆ.ಎಸ್. ಈಶ್ವರಪ್ಪ. ಬಿ.ವೈ. ವಿಜಯೇಂದ್ರ, ಸಿ.ಟಿ. ರವಿ, ಬಿ. ಶ್ರೀರಾಮುಲು, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಮೊದಲಾದವರು ಪಾಲ್ಗೊಂಡಿದ್ದರು. ಕಳೆದ ಬಾರಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಹಾಲಿ 26 ರಲ್ಲಿ ಗೆದ್ದಿದ್ದೇವೆ. ಮುಂಬುರವ ಚುನಾವಣೆಯಲ್ಲಿ 28 ಕ್ಷೇತ್ರಗಳೂ ಎನ್ ಡಿಎ ಪಾಲಾಗಬೇಕು. ಪ್ರತಿ ಬೂತ್ ನಿಂದ ಶೇ. 10 ರಷ್ಟು ಮತ ಕಳೆದ ಬಾರಿಗಿಂತ ಹೆಚ್ಚಾಗಬೇಕು ಎಂಬ ಗುರಿಯನ್ನು ಅವರು ನೀಡಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಇರುವ ಕಾರ್ಯತಂತ್ರಗಳನ್ನು ತಿಳಿಸಿದರು.
ಜೆಡಿಎಸ್ ಜೊತೆ ಸೀಟು ಹಂಚಿಕೆ ವಿಷಯ ಕುರಿತು ಪ್ರಸ್ತಾಪಿಸಿಲ್ಲ. ಒಟ್ಟಾರೆ ಪಕ್ಷದ ನಾಯಕರಿಗೆ ಅಜೆಂಡಾ ಮತ್ತು ಟಾರ್ಗೆಟ್ ಎರಡನ್ನೂ ಅವರು ನೀಡಿದ್ದಾರೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ ಮುಂಚಿತವಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪ್ರಕಟಿಸುವ ಕುರಿತು ವಿಜಯೇಂದ್ರ ಅವರು ಪ್ರಸ್ತಾಪಿಸಿದರು. ರಾಜ್ಯಸಭಾ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೂ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಲಹೆ ಪಡೆದರು. ರಾಜ್ಯಸಭೆಯಲ್ಲಿ ಬಿಜೆಪಿ ಎರಡು ಸ್ಥಾನ ಪಡೆಯಬಹುದಾಗಿದ್ದರೆ, ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ಮೂವರನ್ನು ಆಯ್ಕೆ ಮಾಡಲು ಅವಕಾಶವಿದೆ. ಮುಂದಿನ ದಿನಗಳಲ್ಲಿ ಮತ್ತೊಂದು ಸಭೆ ನಡೆಸಿ ಅಂತಿಮಗೊಳಿಸುವಂತೆ ಸೂಚಿಸಿರುವುದಾಗಿ ತಿಳಿದು ಬಂದಿದೆ.
ರಾಮಮಂದಿರ ತೀರ್ಪು ಭಾರತದ ಜಾತ್ಯತೀತತೆ ಪ್ರತಿಬಿಂಬ: ಅಮಿತ್ ಶಾ
ನಂತರ ಮೈಸೂರು ಕ್ಲಸ್ಟರ್ ಮಟ್ಟದ ಪ್ರಮುಖರ ಸಭೆಯಲ್ಲಿ ಪಾಲ್ಗೊಂಡು ಸಮಾಲೋಚಿಸಿದರು. ಈ ಸಭೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ರಾಜ್ಯ ಉಪಾಧ್ಯಕ್ಷರಾದ ಎಂ. ರಾಜೇಂದ್ರ, ಎನ್. ಮಹೇಶ್, ಲಕ್ಷ್ಮೀಗೌಡ, ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಆರ್. ರಘು ಕೌಟಿಲ್ಯ, ಅಲ್ಪಸಂಖ್ಯಾತರ ಮೋರ್ಚಾ ಅಧ್ಯಕ್ಷ ಡಾ. ಅನಿಲ್ ಥಾಮಸ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು, ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ, ನಗರ ಪ್ರಭಾರಿ ಹಿರೇಂದ್ರ ಶಾ ಮೊದಲಾದವರು ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.