
ತುಮಕೂರು (ಆ.05): ಕೇಂದ್ರ ಸರ್ಕಾರದಿಂದ ಜನ ಕಲ್ಯಾಣಕ್ಕಾಗಿ ಹಲವು ಯೋಜನೆಗಳ ಜಾರಿಗೊಳಿಸಿ, ಅನುದಾನ ಬಿಡುಗಡೆ ಮಾಡಲಾಗಿದೆ. ಎಲ್ಲಾ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರು ಹಾಗೂ ಜಿಲ್ಲಾ ದಿಶಾ ಸಮಿತಿ ಅಧ್ಯಕ್ಷ ಎ.ನಾರಾಯಣಸ್ವಾಮಿ ಸೂಚಿಸಿದರು. ಜಿಲ್ಲಾ ಪಂಚಾಯತ್ ಕಚೇರಿಯ ಸಭಾಂಗಣದಲ್ಲಿ ನಡೆದ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಜನರ ಸಮಸ್ಯೆಯನ್ನು ಬಗೆಹರಿಸಲು ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿ ಹಲವಾರು ಯೋಜನೆಗಳನ್ನು ಜಿಲ್ಲೆಗೆ ತರಲಾಗಿದೆ. ತುಮಕೂರು-ರಾಯದುರ್ಗ ರೈಲು ಮಾರ್ಗ ಶೀಘ್ರ ಪೂರ್ಣಗೊಳಿಸುವಲ್ಲಿ ಸಾಕಷ್ಟುಶ್ರಮಿಸುತ್ತಿದ್ದೇನೆ. ಜಿಲ್ಲೆಯ ಸಮಸ್ಯೆಗಳನ್ನು ಶಾಶ್ವತ ಪರಿಹಾರ ಕಲ್ಪಿಸಲು ಕ್ರಮವಹಿಸಲಾಗಿದೆ. ಅನುದಾನವನ್ನು ಪ್ರಮುಖವಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಹಾಗೂ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ಸರಿಯಾಗಿ ತಲುಪಿಸಲು ಕ್ರಮವಹಿಸಬೇಕು ಎಂದರು.
ಪಕ್ಷ ಸೂಚಿಸಿದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ: ಸಚಿವ ರಾಜಣ್ಣ
ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ(ಅಭಿವೃದ್ಧಿ) ಕೃಷ್ಣಮೂರ್ತಿ ಮಾತನಾಡಿ, 2022-23ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ 42 ಲಕ್ಷ ಮಾನವ ದಿನಗಳನ್ನು ಸೃಜನೆಯಾಗಿದೆ. 2023-24ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜೂನ್ 30ರವರೆಗೂ 1292149 ಮಾನವ ದಿನಗಳನ್ನು ಸೃಜಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಿಲ್ಲೆಯು ರಾಜ್ಯದಲ್ಲಿ ಉತ್ತಮ ಪ್ರಗತಿ ಸಾಧಿಸಲು ಸೂಚಿಸಿದ ಸಚಿವರು ಕೇಂದ್ರ ಸರ್ಕಾರದ ಯೋಜನೆಗಳಡಿ ಪ್ರಗತಿ ಸಾಧಿಸಲು ಏನಾದರೂ ಸಮಸ್ಯೆಗಳಿದ್ದರೆ, ಅವುಗಳನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಸಫಾಯಿ ಕರ್ಮಚಾರಿ ಕಾರ್ಯಕ್ರಮದಡಿ ಎಷ್ಟುಜನರಿಗೆ ಶೇ.2ರ ದರದಲ್ಲಿ ಸಾಲಿ ವಿತರಿಸಲಾಗಿದೆ ಎಂಬುದರ ಸಂಪೂರ್ಣವಾದ ಮಾಹಿತಿಯನ್ನು ನೀಡುವಂತೆ ಸಭೆಯಲ್ಲಿ ಸಂಬಂಧಪಟ್ಟಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ವಿವಿಧ ಯೋಜನೆಗಳ ಹಣ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಪಾವತಿಯಾಗಬೇಕು, ಲಿಖಿತ ರೂಪದಲ್ಲಿ ಮಾಹಿತಿ ಪಡೆದು ಸಲ್ಲಿಸಲು ಲೀಡ್ ಬ್ಯಾಂಕ್ ಮ್ಯಾನೇಜರ್ಗೆ ಸೂಚಿಸಿದರು. ಭದ್ರಾ ಮೇಲ್ದಂಡೆ ಯೋಜನೆಯಡಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸಿರುವ ಮಾಹಿತಿ ಪಡೆದ ಸಚಿವರು, ಬಾಕಿ ಇರುವ ಭೂಸ್ವಾಧೀನವನ್ನು ಪೂರ್ಣಗೊಳಿಸಿ ಯೋಜನೆಯನ್ನು ಪೂರ್ಣವಾಗಿ ಅನುಷ್ಠಾನಗೊಳಿಸುವಂತೆ ತಿಳಿಸಿದರು. ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ರಾಜ್ಯದ ಹಲವಡೆ ಕಲಬೆರಕೆ ಹಾಲು ಬಳಕೆ ಕಂಡು ಬಂದಿದ್ದು, ಅಧಿಕಾರಿಗಳು ಜಿಲ್ಲೆಯಲ್ಲಿ ತಪಾಸಣೆ ಹೆಚ್ಚುಗೊಳಿಸಬೇಕು ಹಾಗೂ ಸಾರ್ವಜನಿಕರು ಗುಣ್ಣಮಟ್ಟದಿಂದ ಕೂಡಿರುವ ನಂದಿನಿ ಹಾಲನ್ನು ಬಳಸುವಂತೆ ಕರೆ ನೀಡಿದರು.
ಶಾಸಕ ಚಿದಾನಂದ ಎಂ. ಗೌಡ ಮಾತನಾಡಿ ಎತ್ತಿನಹೊಳೆ ಯೋಜನೆ ಜಾರಿಗೊಳಿಸುವಲ್ಲಿ ರೈತರ ಜಮೀನುಗಳಿಗೆ ಭೂಗತ ಕೊಳವೆ ಪೈಪ್ ಆಳವಡಿಸಲಾಗುತ್ತಿದೆ. ಆದರೆ ಯಾವುದೇ ಪರಿಹಾರ ರೈತರಿಗೆ ಪಾವತಿಯಾಗುತ್ತಿಲ್ಲ ಎಂಬುದರ ಕುರಿತು ಸಭೆಯ ಗಮನಕ್ಕೆ ತಂದರು. ಅಧ್ಯಕ್ಷರು ಮಾತನಾಡಿ ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ವಿವಿಧ ಇಲಾಖಾಧಿಕಾರಿಗಳು ತಮ್ಮ ತಮ್ಮ ಇಲಾಖೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಂದಿರುವ ಅನುದಾನದ ಮಾಹಿತಿ ನೀಡಿ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪ್ರಗತಿ ವರದಿ ನೀಡಿದರು.
ದೇವೀರಮ್ಮನ ದೇಗುಲಕ್ಕೆ ಡ್ರೆಸ್ ಕೋಡ್: ದೇವಾಲಯಕ್ಕೆ ಸ್ಕರ್ಟ್, ಮಿಡಿ, ಪ್ಯಾಂಟ್ ಹಾಕ್ಕೊಂಡು ಬರುವಂತಿಲ್ಲ
ಸಭೆಯಲ್ಲಿ ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಹಾಪೌರರಾದ ಪ್ರಭಾವತಿ ಸುಧೀಶ್ವರ್, ಕೆ.ಎ ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭು.ಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್, ಮಹಾನಗರ ಪಾಲಿಕೆ ಆಯುಕರು ಅಶ್ವಿಜ ಬಿ.ವಿ., ಉಪವಿಭಾಗಾಧಿಕಾರಿ ರಿಷಿ ಆನಂದ್, ಜಿಲ್ಲಾ ಪಂಚಾಯಿತ್ನ ಐಇಸಿ ಸಂಯೋಜಕ ಉಮೇಶ್, ಕೃಷಿ ಇಲಾಖೆಯ ಉಪ ನಿದೇರ್ಶಕರಾದ ಅಶೋಕ್, ದೀಪಶ್ರೀ, ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.