
ಸಂಡೂರು(ಫೆ.23): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ‘ಸಾರ್ವಜನಿಕ ಸಮಾವೇಶ’ಕ್ಕಾಗಿ ಗುರುವಾರ ಸಂಡೂರಿಗೆ ಆಗಮಿಸಲಿದ್ದಾರೆ. ಹೀಗಾಗಿ ಪಟ್ಟಣಕ್ಕೆ ರಾಜ್ಯ ಕಮಲ ಪಡೆಯ ನಾಯಕರು, ಕಾರ್ಯಕರ್ತರ ದಂಡು ಆಗಮಿಸಲಿದೆ.
ಅಮಿತ್ ಶಾ ಅವರು ಹುಬ್ಬಳ್ಳಿಯಿಂದ ಗುರುವಾರ ಹೆಲಿಕಾಪ್ಟರ್ ಮೂಲಕ ಸಂಡೂರಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಇಲ್ಲಿನ ಹೊಸಪೇಟೆ ರಸ್ತೆಯ ಎಸ್ಆರ್ಎಸ್ ಮೈದಾನದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ. ಇದಕ್ಕಾಗಿ ಬೃಹತ್ ವೇದಿಕೆಯನ್ನು ಹಾಕಲಾಗಿದೆ. 10 ಎಕರೆ ಪ್ರದೇಶದಲ್ಲಿ ಪೆಂಡಾಲ್ ಹಾಕಲಾಗಿದೆ. 50 ಸಾವಿರ ಆಸನ ವ್ಯವಸ್ಥೆ ಮಾಡಲಾಗಿದೆ ಅಖಂಡ ಬಳ್ಳಾರಿ ಜಿಲ್ಲೆ ಮಾತ್ರವಲ್ಲದೆ, ಕಲ್ಯಾಣ ಕರ್ನಾಟಕದ ಒಟ್ಟು 2 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ.
100 ಮೋದಿ, ಶಾ ಬಂದ್ರೂ 2024ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದನ್ನ ತಪ್ಪಿಸೋಕೆ ಆಗಲ್ಲ: ಖರ್ಗೆ!
ದೌಲತಪುರದ 150 ಎಕರೆ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಯಶವಂತ ವಿಹಾರ ಮೈದಾನ, ಸ್ಕಂದಪುರ ಲೇಔಟ್, ಎಪಿಎಂಸಿ ಮೈದಾನದಲ್ಲೂ ಪಾರ್ಕಿಂಗ್ಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೂವರೆ ಲಕ್ಷ ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಬಿಗಿ ಬಂದೋಬಸ್ತ್ಗಾಗಿ 3 ಸಾವಿರಕ್ಕೂ ಪೊಲೀಸ್ ನಿಯೋಜಿಸಲಾಗಿದೆ.
ಸಮಾವೇಶದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈಗಾಗಲೇ ಸಂಡೂರಿನಲ್ಲಿ ಫ್ಲೆಕ್ಸ್ಗಳು, ಬ್ಯಾನರ್ ಬಂಟಿಂಗ್ಸ್ಗಳು ರಾರಾಜಿಸುತ್ತಿವೆ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಈ ವರೆಗೆ ಬಿಜೆಪಿ ಗೆಲುವು ಸಾಧಿಸಿಲ್ಲ. ಟಿಕೆಟ್ ಆಕಾಂಕ್ಷಿಗಳ ಸಂಖ್ಯೆಯೂ ದೊಡ್ಡದಿದ್ದು, ಪಕ್ಷದ ವರಿಷ್ಠರ ಗಮನ ಸೆಳೆಯಲು ತಮ್ಮ ಬ್ಯಾನರ್ಗಳನ್ನು ಅಳವಡಿಸುವ ಮೂಲಕ ಕಸರತ್ತು ನಡೆಸಿದ್ದಾರೆ. ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಶಾ ಅವರ ಆಗಮನ ಕಾರ್ಯಕರ್ತರಲ್ಲಿ ಸಾಕಷ್ಟುಹುಮ್ಮಸ್ಸು ತರಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.