
ಹುಬ್ಬಳ್ಳಿ(ಸೆ.15): ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದ ವೇಳೆ ಕಾಂಗ್ರೆಸ್ ನಡೆಸಿದ್ದ ಇಫ್ತಾರ್ ಕೂಟಕ್ಕೆ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳು ಪಾಲ್ಗೊಳ್ಳಬಹುದು. ಆದರೆ, ಪ್ರಧಾನಿ ನರೇಂದ್ರ ಮೋದಿ ಅವರು ಸಿಜೆಐ ಮನೆಗೆ ಗಣೇಶ ಉತ್ಸವಕ್ಕೆ ಹೋಗಬಾರದೆ? ಇದು ಯಾವ ನ್ಯಾಯ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪ್ರಶ್ನಿಸಿದರು.
ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರ ಆಹ್ವಾನದ ಮೇರೆಗೆ ಪ್ರಧಾನಿಗಳು ಅವರ ಮನೆಗೆ ಗಣೇಶ ಪೂಜೆಗೆ ಹೋಗಿದ್ದರು. ಅದೊಂದು ಧಾರ್ಮಿಕ ಕಾರ್ಯಕ್ರಮವಾಗಿದ್ದು, ಹೋಗಬಾರದು ಎಂದು ಎಲ್ಲಿಯೂ ಇಲ್ಲ. ಪ್ರಧಾನಿಗಳು ಗಣೇಶನ ಪೂಜೆ ಮಾಡಿದ್ದಕ್ಕೆ ಕಾಂಗ್ರೆಸ್ ಪಕ್ಷವು ವಿರೋಧಿಸುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ಹಿಂಗಾರು ಬೆಳೆ ಪರಿಹಾರ ದೊರಕಿಸಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಕಾಂಗ್ರೆಸ್ ಹಿಂದೂ ವಿರೋಧಿ:
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಲಭೆ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಗಣೇಶಮೂರ್ತಿ ಪ್ರತಿಷ್ಠಾಪನೆಗೆ ಹಾಗೂ ವಿಸರ್ಜನಾ ಮೆರವಣಿಗೆಗೆ ಪೊಲೀಸ್ ಇಲಾಖೆಯ ಅನುಮತಿ ಪಡೆದಿದೆ. ಮೆರವಣಿಗೆ ಹೋಗುವ ರಸ್ತೆ ಬದಿಯಲ್ಲಿ ಮಸೀದಿ ಇದೆ ಎಂದು ವಾದ್ಯ ಬಾರಿಸಬಾರದು ಎಂದರೆ ಏನು ಅರ್ಥ?. ಮಂಡ್ಯ ಪಾಕಿಸ್ತಾನದಲ್ಲಿದೆಯೇ ಅಥವಾ ರಾಜ್ಯ ಸರ್ಕಾರ ಪಾಕಿಸ್ತಾನ ಮಾಡಲು ಹೊರಟಿದೆಯೇ? ಎಂಬುದು ಇದರಲ್ಲಿಯೇ ತಿಳಿಯುತ್ತದೆ. ಕಾಂಗ್ರೆಸ್ ಎಂದಿಗೂ ಹಿಂದೂ ವಿರೋಧಿಯಾಗಿರುವ ಪಕ್ಷವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹುಚ್ಚರಂತೆ ವರ್ತಿಸಬೇಡಿ:
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪೊಲೀಸರು ಮೊದಲ ಆರೋಪಿಯಾಗಿ ಹಿಂದೂ ಯುವಕೊಬ್ಬನನ್ನು ಬಂಧಿಸಿರುವುದು ಖಂಡನೀಯ. ಪಕ್ಷದ ರಾಜ್ಯಾಧ್ಯಕ್ಷರು, ವಿರೋಧ ಪಕ್ಷದ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಬಂದಿದ್ದಾರೆ. ರಾಜಕೀಯ ಒತ್ತಡಕ್ಕೆ ಒಳಗಾಗಿ ಅಲ್ಲಿಯ ಪೊಲೀಸ್ ವರಿಷ್ಠಾಧಿಕಾರಿ ಹುಚ್ಚರಂತೆ ವರ್ತಿಸಬಾರದು. ಇದನ್ನು ನಾವು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಕರ್ನಾಟಕಕ್ಕೆ ಸಂತಸದ ಸುದ್ದಿ: ಹುಬ್ಬಳ್ಳಿ-ಪುಣೆ ನಡುವೆ ಶೀಘ್ರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು..!
ಖರ್ಗೆ ಹೆಸರಿಗೆ ಮಾತ್ರ ಅಧ್ಯಕ್ಷ:
ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಕೇವಲ ಹೆಸರಿಗೆ ಮಾತ್ರ. ಎಲ್ಲ ರಾಹುಲ್ ಅವರ ಅಣತಿಯಂತೆ ಅವರು ನಡೆದುಕೊಳ್ಳುತ್ತಾರೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಹುಲ್ ಗಾಂಧಿ ಪ್ರಧಾನಿಯಾಗುವುದಿಲ್ಲ, ಖರ್ಗೆ ಅವರನ್ನು ಪ್ರಧಾನಿಯನ್ನಾಗಿಸುತ್ತೇವೆ ಎಂದು ಕಾಂಗ್ರೆಸ್ನ ವರಿಷ್ಠರು ಘೋಷಿಸಲಿ ಎಂದು ಸವಾಲು ಹಾಕಿದರು.
ಆರೋಪದಿಂದ ಮುಕ್ತರಾಗಿಲ್ಲ:
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಈಗ ಕೇವಲ ಜಾಮೀನು ಮಾತ್ರ ದೊರೆತಿದೆ ಎಂದ ಮಾತ್ರಕ್ಕೆ, ಆರೋಪದಿಂದ ಮುಕ್ತರಾಗಿದ್ದಾರೆ ಎಂಬರ್ಥವಲ್ಲ. ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ನ್ಯಾಯಾಯುತವಾಗಿಯೇ ನಡೆಯುತ್ತವೆ. ಬಿಜೆಪಿಗೆ ನ್ಯಾಯಾಂಗ ವ್ಯವಸ್ಥೆಯಲ್ಲಿ ನಂಬಿಕೆ ಇದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.