
ಹುಬ್ಬಳ್ಳಿ(ಜ.23): ಛತ್ತೀಸಗಡ, ರಾಜಸ್ತಾನ, ಮಧ್ಯಪ್ರದೇಶದ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಕೊಟ್ಟಮಾತಿನಂತೆ ಭರವಸೆ ಈಡೇರಿಸಿಲ್ಲ. ಇದೀಗ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ, ಉಚಿತ ವಿದ್ಯುತ್ ನೀಡುತ್ತೇವೆ ಎಂದು ಸುಳ್ಳು ಭರವಸೆ ನೀಡುತ್ತಿದ್ದಾರೆ. ಇವರ ಡಿಎನ್ಎದಲ್ಲಿಯೇ ನಿವೃತ್ತಿ ಹಾಗೂ ಪ್ರಾಮಾಣಿಕತೆ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಂದಾಗ ಈ ರೀತಿ ಭರವಸೆ ನೀಡುವ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಅದನ್ನು ನೆರವೇರಿಸುತ್ತಿಲ್ಲ. ಕೊಟ್ಟಮಾತಿನಂತೆ ನಡೆದುಕೊಳ್ಳುವುದು ಅವರ ಡಿಎನ್ಎದಲ್ಲಿ ಇಲ್ಲ ಎಂದು ಆರೋಪಿಸಿದರು.
ನನಗೆ ಮೋದಿ ಕಂಡರೆ ಭಯವಿಲ್ಲ, ನನ್ನನ್ನು ಕಂಡರೆ ಬಿಜೆಪಿಯವರಿಗೆ ಭಯ: ಸಿದ್ದರಾಮಯ್ಯ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಪಾರದರ್ಶಕ ಆಡಳಿತ ನೀಡುತ್ತಿದ್ದಾರೆ. ಇದನ್ನು ಹಾಳು ಮಾಡಲು ಕಾಂಗ್ರೆಸ್ ಹೊರಟಿದೆ. ಇದೆಲ್ಲವನ್ನು ಗಮನಿಸಿದರೆ ಸಿದ್ದರಾಮಯ್ಯ ಭ್ರಷ್ಟ ರಾಜಕಾರಣಿ ಎಂಬು ಗೊತ್ತಾಗುತ್ತದೆ. ಅದಕ್ಕೆ ಕಳೆದ ಬಾರಿ ಚಾಮುಂಡೇಶ್ವರಿಯಲ್ಲಿ ಜನರು ಸೋಲಿಸಿದ್ದರು. ಹಾಗಾಗಿ ಈ ಬಾರಿ ರಾಜ್ಯದ ತುಂಬಾ ಕ್ಷೇತ್ರ ಹುಡುಕುತ್ತಿದ್ದಾರೆ. ಅವರು ಕೆಲಸ ಮಾಡಿಲ್ಲ, ಕೊಟ್ಟಮಾತಿನಂತೆ ನಡೆದುಕೊಂಡಿಲ್ಲ ಎಂಬುದು ಇದರ ಅರ್ಥವಾಗಿದೆ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ಗೆ ಹೋಲಿಸಿದ ಕುರಿತು ಪ್ರತಿಕ್ರಿಯಿಸಿ, ಇಂದಿರಾ ಗಾಂಧಿ, ರಾಹುಲ್ ಗಾಂಧಿಗೆ ಜನರು ಏನು ಅನ್ನುತ್ತಾರೆ ಎಂಬುದನ್ನು ಅವರು ತಿಳಿದುಕೊಳ್ಳಲಿ. ಮೋದಿ ದೇಶದ ಚುನಾಯಿತ ನಾಯಕರಾಗಿದ್ದಾರೆ. ಕಾಂಗ್ರೆಸ್ನವರು ರಾಹುಲ್ ಗಾಂಧಿ ಸಂದೇಶವನ್ನು ದೇಶಕ್ಕೆ ಪಸರಿಸುತ್ತೇವೆ ಎನ್ನುತ್ತಾರೆ. ಆದರೆ ಮಲ್ಲಿಕಾರ್ಜುನ ಖರ್ಗೆ ಅವರ ಸಂದೇಶ ಯಾಕೆ ಪಸರಿಸಲ್ಲ. ಇವರಲ್ಲಿ ಸರ್ವಾಧಿಕಾರ, ಕುಟುಂಬ ರಾಜಕಾರಣ ತುಂಬಿ ತುಳುಕುತ್ತಿದೆ ಎಂದು ದೂರಿದರು.
ಕಾಂಗ್ರೆಸ್ ಯಾವ ಸರ್ವೇಯಲ್ಲಿ ಮುಂದಿದೆ ಗೊತ್ತಿಲ್ಲ. ನಾವು ಸರ್ವೇ ಮಾಡಿಸಿದ್ದೇವೆ. ಮುಂಬರುವ ಚುನಾವಣೆಯಲ್ಲೂ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.