
ನವದೆಹಲಿ (ಅ.04): ಶಿವಮೊಗ್ಗ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸುದ್ದಿಗಾರರ ಜತೆಗೆ ಮಾತನಾಡಿ, ಶಿವಮೊಗ್ಗ ಘಟನೆಯನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಇಸ್ಲಾಮಿಕ್ ಮತಾಂಧರು ತಲೆ ಎತ್ತುತ್ತಿದ್ದಾರೆ. ಕೋಲಾರ, ಶಿವಮೊಗ್ಗದಲ್ಲಿ ಗಲಾಟೆ ಆದರೂ ಗೃಹ ಸಚಿವರು ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇಂಥ ಘಟನೆಗಳು ಸಾಮಾನ್ಯವಾಗುತ್ತಿವೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮೊದಲ ಅವಧಿಯಲ್ಲಿ ಟಿಪ್ಪು ಸುಲ್ತಾನ್ ಹಾಗೂ ಎರಡನೇ ಅವಧಿಯಲ್ಲಿ ಔರಂಗಜೇಬ್ನನ್ನು ಮೆರೆಸಲಾಗುತ್ತಿದೆ. ಇದರ ಹಿಂದೆ ಕಾಂಗ್ರೆಸ್ನ ತುಷ್ಟೀಕರಣದ ಪರಾಕಷ್ಟೆ ಅಡಗಿದೆ ಎಂಬ ಅರಿವು ನಮಗಿದೆ ಎಂದರು.
ಸರ್ಕಾರದ ಕ್ರಮ ಖಂಡನಾರ್ಹ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ಮೇಲಿನ ಕೇಸ್ ಹಿಂಪಡೆಯುತ್ತಿರುವ ಕುರಿತು ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ತಿಳಿಸಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಾಮಾಜಿಕ ಹಾಗೂ ಕಾನೂನಿಗೆ ಭಂಗ ತರುವ ಅಂಶಗಳಿಗೆ ಪುಷ್ಟಿ ನೀಡಿದಂತಾಗಿದೆ ಎಂದು ಕಿಡಿಕಾರಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರಗೆ ಪತ್ರ ಬರೆದಿರುವ ಅವರು, ತಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದು 4 ತಿಂಗಳಲ್ಲೇ ಇಂತಹ ತುಷ್ಟೀಕರಣ ರಾಜಕಾರಣ ಪರಾಕಾಷ್ಠತೆ ತಲುಪಿದೆ. ಇಂತಹ ಪ್ರಕರಣಗಳಲ್ಲಿನ ಆರೋಪಿಗಳು ಸಮಾಜ ಘಾತುಕ ಶಕ್ತಿಗಳಾಗಿರುತ್ತಾರೆ. ಈ ಪ್ರಕರಣಗಳನ್ನು ಕೈಬಿಡುವುದರಿಂದ ತಮ್ಮ ಸರ್ಕಾರ ರಾಷ್ಟ್ರೀಯ ಭದ್ರತೆಯ ವಿಷಯದೊಂದಿಗೆ ರಾಜಿ ಮಾಡಿಕೊಂಡಂತಲ್ಲವೇ? ಎಂದು ಪ್ರಶ್ನಿಸಿದ್ದಾರೆ.
ಶಾಮನೂರು ಹೇಳಿಕೆಯಿಂದ ಸರ್ಕಾರಕ್ಕೆ ಡ್ಯಾಮೇಜ್ ಇಲ್ಲ: ಸಚಿವ ಡಿ.ಸುಧಾಕರ್
13ರ ಸೆ. 2023ರ ಎಡಿಜಿಪಿ ಕಾನೂನು ಹಾಗೂ ಸುವ್ಯವಸ್ಥೆ ಹೊರಡಿಸಿರುವ ಸುತ್ತೋಲೆಯಲ್ಲಿ ಹಳೇ ಹುಬ್ಬಳ್ಳಿ ಠಾಣಾ ವ್ಯಾಪ್ತಿಯಲ್ಲಿ ಏಪ್ರಿಲ್ 16, 2022ರಂದು ನಡೆದ ಗಲಭೆ ಸೇರಿದಂತೆ ರಾಜ್ಯದಲ್ಲಿನ ಒಟ್ಟು 11 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂದಕ್ಕೆ ಪಡೆಯುವ ಬಗ್ಗೆ ಪ್ರಕ್ರಿಯೆ ನಡೆದಿರುವುದು ಅತ್ಯಂತ ಹೇಯ ಚಿಂತನೆ. ಈ ಘಟನೆಯಿಂದ ಹುಬ್ಬಳ್ಳಿ ಜನ ಅಷ್ಟೇ ಅಲ್ಲದೇ ಇಡೀ ರಾಜ್ಯದ ಜನ ಬೆಚ್ಚಿಬಿದ್ದಿದ್ದರು. ಪೊಲೀಸರ ಮೇಲೆ ಹಲ್ಲೆ ನಡೆಸಿ, ಪೊಲೀಸ್ ವಾಹನದ ಮೇಲೆ ನಿಂತು ಘೋಷಣೆ ಕೂಗಿದ್ದರು. ಈ ಮೊಕದ್ದಮೆ ನ್ಯಾಯಾಲಯದಲ್ಲಿದೆ. ಹೀಗಿರುವಾಗ ಸರ್ಕಾರದ ಈ ತುಷ್ಟೀಕರಣ ಧೋರಣೆ ಸ್ಪಷ್ಟವಾಗಿದ್ದು ಇದರ ಪರಿಣಾಮವನ್ನು ಈಗಾಗಲೇ ರಾಜ್ಯದಲ್ಲಿ ನಡೆದ ವಿಶೇಷವಾಗಿ ಶಿವಮೊಗ್ಗ ಮುಂತಾದ ನಗರಗಳಲ್ಲಿ ಇತ್ತೀಚೆಗೆ ನಡೆದ ಗಲಭೆಗಳೇ ಸಾಕ್ಷಿ.
ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂಗಳಿಗೆ ಭಯದ ವಾತಾವರಣ: ಶಾಸಕ ಬಸನಗೌಡ ಯತ್ನಾಳ್
ಡಿ.ಜಿ. ಹಳ್ಳಿ, ಕೆ.ಜಿ. ಹಳ್ಳಿ ಪ್ರದೇಶಗಳಲ್ಲಿ ನಿಮ್ಮದೇ ಪಕ್ಷದ ದಲಿತ ಶಾಸಕರಾಗಿದ್ದ ಅಖಂಡ ಶ್ರೀನಿವಾಸ ಮೂರ್ತಿ ಮನೆಯ ಮೇಲೆ ದಾಳಿ ನಡೆಸಿದ್ದರು. ಅಲ್ಲದೇ ಬೆಂಕಿ ಹಚ್ಚಿದ್ದು ಇದೇ ಸಮಾಜ ಘಾತುಕ ಶಕ್ತಿಗಳು ಎಂಬುದನ್ನು ಮರೆತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಇದನ್ನು ನೋಡಿದರೆ ದಲಿತರೂ ರಾಜ್ಯದಲ್ಲಿ ಸುರಕ್ಷಿತವಾಗಿಲ್ಲ ಎಂಬಂತಾಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಸಮಾಜ ಘಾತುಕ ಶಕ್ತಿಗಳ ಮೇಲಿನ ಕೇಸ್ ವಾಪಸ್ ಪಡೆಯುವ ಸರ್ಕಾರದ ಕ್ರಮದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.