
ಬೆಂಗಳೂರು (ಜೂ.07): ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಹಣ ವರ್ಗಾವಣೆ ಪ್ರಕರಣವು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರಿಗೆ ಗೊತ್ತಿದ್ದೇ ನಡೆದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಕರಣದಲ್ಲಿ 80-85 ಕೋಟಿ ರು. ರವಾನೆ ಆಗಿರುವ ಮಾಹಿತಿ ಇದೆ. ರಾಜೀನಾಮೆ ನಿರ್ಧಾರ ಮೊದಲೇ ಆಗಬೇಕಿತ್ತು. ಇಷ್ಟೆಲ್ಲಾ ಕೇವಲ ಒಬ್ಬ ಸಚಿವರಿಂದ ಆಗಿರುವುದಲ್ಲ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೂ ಸೇರಿಯೇ ಮಾಡಿರುವುದು ಎಂದು ಕಿಡಿಕಾರಿದರು.
ರಾಜೀನಾಮೆ ಸಂಬಂಧ ಸಚಿವರಿಗೆ ನಾವು ಹೇಳಿಲ್ಲ ಎಂದು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಇದು ಕೇವಲ ಡ್ರಾಮಾ ಮಾತ್ರ. ಸಚಿವರಿಗೆ ರಾಜೀನಾಮೆ ನೀಡಿ ಎನ್ನುವ ಧೈರ್ಯ ಇವರಿಗೆ ಇರಲಿಲ್ಲ. ಹಗರಣದಲ್ಲಿ ದೊಡ್ಡ ಮಟ್ಟದ ಕೈಗಳಿರುವುದೇ ಇದಕ್ಕೆ ಕಾರಣ. ಕಳೆದ ಮಾರ್ಚ್ ತಿಂಗಳಿನಲ್ಲಿಯೇ ಹಗರಣ ನಡೆದಿದ್ದು, ಇವರೆಲ್ಲರೂ ಸೇರಿ ಮುಚ್ಚಿಟ್ಟಿದ್ದಾರೆ. ಅಧಿಕಾರಿ ಸಾವಿನಿಂದ ಮತ್ತು ಮಾಧ್ಯಮಗಳ ಮೂಲಕ ಇದು ಹೊರ ಬಾರದಿದ್ದರೆ ಮುಚ್ಚಿ ಹಾಕುತ್ತಿದ್ದರು ಎಂದು ದೂರಿದರು.
ಹಗರಣ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕೇವಲ ಒಂದು ಗಂಟೆಯಲ್ಲಿ ಹಣ ಬಿಡುಗಡೆಯಾಗಲು ಸಹಾಯ ಮಾಡಿದ್ದು ಯಾರು? ಅದೆಲ್ಲಾ ಹೊರಗೆ ಬರಬೇಕು. ತೆಲಂಗಾಣದ ಚುನಾವಣೆಗೆ ಹೋಗಿರುವ ಹಣ ಇದಾಗಿದೆ. ಹಗರಣದಲ್ಲಿ ಯಾರ, ಯಾರ ಪಾತ್ರ ಏನಿದೆ? ಎಲ್ಲವೂ ಹೊರಗೆ ಬರಬೇಕು. ವಾಲ್ಮೀಕಿ ನಿಗಮದ ಹಣ ತೆಲಂಗಾಣಕ್ಕೆ ಹೋಗಿದೆ ಎನ್ನುವುದು ತನಿಖೆ ಬಳಿಕ ಗೊತ್ತಾಗಲಿದೆ ಎಂದರು.
ಮೋದಿ ಸರ್ಕಾರ ರಚನೆಗೂ ಮುನ್ನವೇ ಅಗ್ನಿವೀರ್ ಯೋಜನೆ ಬಗ್ಗೆ ಜೆಡಿಯು, ಎಲ್ಜೆಪಿ ಕ್ಯಾತೆ!
ಸೇಡು ತೀರಿಸಿಕೊಂಡ ಎಚ್ಡಿಕೆ: ಮಂಡ್ಯದಲ್ಲಿ ಪ್ರಚಂಡ ಗೆಲುವು ಸಾಧಿಸುವ ಮೂಲಕ ಎಚ್.ಡಿ.ಕುಮಾರಸ್ವಾಮಿ, ೨೦೧೯ರಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಸೇಡನ್ನು ತೀರಿಸಿಕೊಂಡಿದ್ದಾರೆ. ಜೊತೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಕಾಂಗ್ರೆಸನ್ನು ಹೀನಾಯವಾಗಿ ಮಣಿಸುವ ಮೂಲಕ ಕೈ ನಾಯಕರಿಗೆ ಮುಖಭಂಗ ಉಂಟುಮಾಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯೊಳಗೆ ೭ ಮಂದಿ ಜೆಡಿಎಸ್ ಶಾಸಕರು, ೩ ಮಂದಿ ವಿಧಾನ ಪರಿಷತ್ ಸದಸ್ಯರಿದ್ದು, ಜೊತೆಗೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿದ್ದ ಸುಮಲತಾ ವಿರುದ್ಧ ಪುತ್ರ ನಿಖಿಲ್ ಅವರನ್ನು ಗೆಲ್ಲಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಈ ಚುನಾವಣೆಯಲ್ಲಿ ಪರಿಸ್ಥಿತಿ ಅದಕ್ಕೆ ವಿರುದ್ಧವಾಗಿತ್ತು. ೬ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದರೂ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಎದುರು ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಾಗಲಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.