
ಬೆಂಗಳೂರು (ಆ.14): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲು ಮುಂದಾಗಿದೆ.
ಪಕ್ಷದ ವರಿಷ್ಠರು ಒಪ್ಪಿಗೆ ನೀಡಿದಲ್ಲಿ ವಿಧಾನಮಂಡಲದ ಅಧಿವೇಶನದೊಳಗಾಗಿಯೇ ಅಂದರೆ, ಮುಂದಿನ ವಾರದ ವೇಳೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ರಾಯಚೂರು ಜಿಲ್ಲೆಯಿಂದ ಆರಂಭವಾಗಿ ಯಾದಗಿರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಮೂಲಕ ಬಳ್ಳಾರಿವರೆಗೆ ಪಾದಯಾತ್ರೆ ನಡೆಸುವ ಉದ್ದೇಶವಿದೆ.
ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶ್ರೀರಾಮುಲು, ಮಾಜಿ ಸಚಿವ ಶಿವನಗೌಡ ನಾಯಕ ಸೇರಿದಂತೆ ಹಲವು ನಾಯಕರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರೊಂದಿಗೆ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸಿದರು. ತಾತ್ವಿಕವಾಗಿ ಒಪ್ಪಿಗೆ ನೀಡಿರುವ ವಿಜಯೇಂದ್ರ ಅವರು ವರಿಷ್ಠರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಅಲ್ಲದೆ, ಪಾದಯಾತ್ರೆಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.
ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಲು ನಿರಾಕರಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರ ಸೇರ್ಪಡೆಯನ್ನು ಬಲವಾಗಿ ಪ್ರತಿಪಾದಿಸುತ್ತಿರುವುದರಿಂದ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ನಿರ್ಧರಿಸಿದೆ. ಹೀಗಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಮೂಲಕ ಪರಿಶಿಷ್ಟ ಪಂಗಡ ಸಮುದಾಯದ ಒಲವು ಗಳಿಸಬಹುದು ಎಂಬ ಲೆಕ್ಕಾಚಾರ ಅಡಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.