
ಹುಬ್ಬಳ್ಳಿ(ನ.07): ಬಿಜೆಪಿಯವರಿಗೆ ಚುನಾವಣೆ ಮಾಡಲು ಯಾವುದೇ ವಿಚಾರಗಳಿಲ್ಲ. ವಕ್ಫ್ ಕುರಿತು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರೂ ಇವರು ಹೋರಾಟ ಮಾಡುತ್ತಿರುವುದು ಚುನಾವಣೆ ಹಾಗೂ ರಾಜಕೀಯಕ್ಕಾಗಿ ಎಂದು ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ಅವರು ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಮೋದ್ ಮುತಾಲಿಕ್, ಬಿಜೆಪಿ ಎರಡು ಒಂದೇ. 'ಏಕ್ ದಿಲ್ ದೋ ಜಾನ್ ತರಹ'. ಅನ್ನ ನೀಡುವ ರೈತರಿಗೆ ತೊಂದರೆ ಕೊಟ್ಟಿಲ್ಲ, ಕೊಡುವುದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಎಂದು ಗೊಂದಲ ಸೃಷ್ಟಿ ಮಾಡಿದರು. ಹೀಗಾಗಿ ವಾಪಸ್ ತೆಗೆದುಕೊಂಡಿದ್ದೇವೆ ಎಂದು ಜಮೀರ್ ತಿಳಿಸಿದರು.
ದೇಶದ್ರೋಹಿ ಕೆಲಸ ಮಾಡುತ್ತಿರುವ ಜಮೀರ್ ಅಹಮದ್ನನ್ನ ಗಲ್ಲಿಗೇರಿಸಿ: ಪ್ರಮೋದ ಮುತಾಲಿಕ್
ಗೆಲ್ಲುವ ವಿಶ್ವಾಸವಿದೆ:
ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ಈಹಿಂದೆಶಿಗ್ಗಾಂವಿಯಲ್ಲಿ ಪ್ರಚಾರ ನಡೆಸಿದ್ದೇನೆ. ಮುಖ್ಯಮಂತ್ರಿಗಳು ಇಲ್ಲಿಗೆ ಬಂದು ಪ್ರಚಾರ ಮಾಡಿದ ನಂತರ ತುಂಬಾ ಚೆನ್ನಾಗಿದೆ. ನಾವು ಗೆದ್ದೇ ಗೆಲ್ಲುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದರು.
ಡಿಸಿ, ಎಸಿಗೆ ಧಮ್ಕಿ ಹಾಕಿದ್ದಾನೆ ಸಚಿವ ಜಮೀರ್: ಶಾಸಕ ಬಸನಗೌಡ ಯತ್ನಾಳ
ಹಿಂದೆಯೂ ಮ್ಯಾಚ್ ಫಿಕ್ಸಿಂಗ್ ಇತ್ತಾ?:
ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿಗಳು ಲೋಕಾಯುಕ್ತ ಅಧಿಕಾರಿಗಳೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ. ಹಾಗಾಗಿ ಎರಡೇ ಗಂಟೆಗಳಲ್ಲಿ ವಿಚಾರಣೆ ಮುಗಿಸಿ ವಾಪಸಾಗಿದ್ದಾರೆ ಎಂಬ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಜಮೀರ್, ಈ ಹಿಂದೆ ಬಿಜೆಪಿ ಕಾಲದಲ್ಲೂ ಬಹಳಷ್ಟು ಪ್ರಕರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದ್ದಾರೆ. ಅವಾಗೆಲ್ಲ ಮ್ಯಾಚ್ ಫಿಕ್ಸಿಂಗ್ ಇತ್ತಾ ? ಎಂಬುದನ್ನು ಬಿಜೆಪಿಯವರು ತಿಳಿಸಲಿ ಎಂದು ಹರಿಹಾಯ್ದರು.
2019ರಲ್ಲಿ ಪ್ರಕರಣವೊಂದರಲ್ಲಿ ನನ್ನನ್ನೂ ಸಿಬಿಐ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಕೇವಲ ಅರ್ಧ ಗಂಟೆಯಲ್ಲಿ ವಿಚಾರಣೆ ನಡೆಸಿ ಕಳಿಸಿದ್ದರು. ಅಧಿಕಾರಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ ಬಂದಿದ್ದೆ. ಯಾವುದೇ ಒಂದು ತನಿಖೆ ಯ ಕುರಿತು ವಿಚಾರಣೆ ನಡೆಸಬೇಕಾದ್ದಲ್ಲಿ ಅದು ವಿಚಾರಣಾ ಅಧಿಕಾರಿ ಮೇಲೆ ನಿಗದಿಯಾಗಿರುತ್ತದೆ ಎಂದರು.
ಮುಖ್ಯಮಂತ್ರಿ ಪಾತ್ರವಿಲ್ಲ
ಮುಖ್ಯಮಂತ್ರಿಗಳು ರಾಜೀನಾಮೆ ನೀಡಿ ಲೋಕಾಯುಕ್ತ ತನಿಖೆ ಎದುರಿಸಲಿ ಎಂಬ ಬಿಜೆಪಿ ನಾಯಕರ ಪ್ರಶ್ನೆಗೆ ಉ ತ್ತರಿಸಿದ ಜಮೀರ್ ಅಹ್ಮದ್, ಮುಡಾ ಪ್ರಕರಣದಲ್ಲಿ ಸಿಎಂ ಯಾವುದೇ ಪಾತ್ರವಿಲ್ಲ. ಅವರೇಕೆ ರಾಜೀನಾಮೆ ನೀಡಬೇಕು? ಮುಡಾ ವಿಚಾರದಲ್ಲಿ ಸಿದ್ದರಾಮಯ್ಯ ಪಾತ್ರ ಇಲ್ಲ ಎಂದು ಎಲ್ಲರಿಗೂ ಗೊತ್ತಿದೆ. ಆದರೆ, ನ್ಯಾಯಾಲಯದ ಆದೇಶಕ್ಕೆ ನಾವೆಲ್ಲ ತಲೆ ಬಾಗಲೇಬೇಕು. ಮುಖ್ಯಮಂತ್ರಿಗಳಿಗೆ ಲೋಕಾಯುಕ್ತದಿಂದ ತನಿಖೆಗೆ ನೋಟಿಸ್ ಕೊಟ್ಟಿದ್ದಾರೆ. ಹಾಗಾಗಿ ಅವರು ಹೋಗಿ ಭೇಟಿಯಾಗಿ ಬಂದಿದ್ದಾರೆ. ತನಿಖೆ ಆಗಬೇಕು, ತನಿಖೆ ಆಗಲಿ, ಇದರಲ್ಲಿ ತಪ್ಪೇನಿದೆ? ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.