
ಗೋಕಾಕ (ನ.05): ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ನಡೆದ ಉಪಹಾರ ಸಭೆಗೆ ಹೋಗಿಲ್ಲ. ಸಭೆಗೆ ಬರಲು ನನಗೂ ಆಹ್ವಾನ ನೀಡಿದ್ದರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ತಮ್ಮ ಹಿಲ್ ಗಾರ್ಡನ್ ಗೃಹ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ 4 ದಿನಗಳಿಂದ ನನಗೆ ಆರೋಗ್ಯ ಸರಿಯಲ್ಲ. ಆದ್ದರಿಂದ ವಿಶ್ರಾಂತಿ ಪಡೆಯುತ್ತಿದ್ದೇನೆ. ನನಗೆ ಆರೋಗ್ಯವೇ ಮೊದಲು. ಆಮೇಲೆ ರಾಜಕಾರಣ ಎಂದರು. ಸಭೆಯಲ್ಲಿ ನಡೆದ ಬೆಳವಣಿಗೆಗಳ ಬಗ್ಗೆ ಮಾಹಿತಿ ಇಲ್ಲ. ಭಾನುವಾರ ಸಂಜೆ ಬೆಂಗಳೂರಿಗೆ ಹೋಗುತ್ತೇನೆ. ನಂತರ ಸಭೆಯಲ್ಲಿನ ವಿಷಯಗಳ ಬಗ್ಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ರಾಜ್ಯದಲ್ಲಿ ಸರ್ಕಾರ ಬದಲಾಗಲ್ಲ: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಬದಲಾಗಲ್ಲ. ಐದು ವರ್ಷಗಳ ಕಾಲ ಪೂರ್ಣ ಪ್ರಮಾಣದಲ್ಲಿ ಸರ್ಕಾರ ಆಡಳಿತ ಮಾಡುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮಹಾರಾಷ್ಟ್ರ ಮಾದರಿಯಲ್ಲಿ ಸರ್ಕಾರ ಬದಲಾವಣೆ ಆಗುತ್ತದೆ ಎಂದ ಸಹೋದರ, ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಹೇಳಿಕೆ ಈ ಮೂಲಕ ಅವರು ಟಾಂಗ್ ನೀಡಿದರು. ಸದ್ಯದಲ್ಲೇ ಡಿಕೆಶಿ ಮಾಜಿ ಮಂತ್ರಿ ಆಗುತ್ತಾರೆ ಎನ್ನುವ ರಮೇಶ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಆ ಬಗ್ಗೆ ನನಗೆ ಗೊತ್ತಿಲ್ಲ, ಕಾದು ನೋಡೋಣ ಎಂದರು.
ಸಿಡಿ ವಿಚಾರದಲ್ಲಿ ಡಿಕೆಶಿ ವಿರುದ್ಧ ಸಿಬಿಐಗೆ ದೂರು ಕೊಡುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಪ್ರತಿಕ್ರಿಯೆ ನೀಡಿ, ಇದು ಅವರಿಗೆ ಸಂಬಂಧಿಸಿದ್ದು, ಸಿಡಿ ಬಗ್ಗೆ ನಮಗೆ ಗೊತ್ತಿಲ್ಲ ಎಂದು ಹೇಳಿದರು. ಸಿಎಂ ಬದಲಾವಣೆ ವಿಚಾರವಾಗಿ ಯಾವ ಪ್ರತಿಕ್ರಿಯೆ ನೀಡುವುದಿಲ್ಲ. ಈ ಬಗ್ಗೆ ಬಹಿರಂಗ ಹೇಳಿಕೆ ಕೊಡದಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ ನಿರ್ದೇಶನ ನೀಡಿದ್ದಾರೆ. ಎರಡೂವರೆ ವರ್ಷಗಳ ಬಳಿಕ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿಯಾಗುತ್ತಾರೆ ಎನ್ನುವ ಶಾಸಕ ರವಿ ಗಾಣಿಗ ಅವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಈಗಾಗಲೇ ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಈ ಬಗ್ಗೆ ಯಾವ ಹೇಳಿಕೆ ನೀಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೀಗಾಗಿ ಯಾವ ಹೇಳಿಕೆ ನೀಡುವುದಿಲ್ಲ ಎಂದರು.
ಬೆಂಗಳೂರಿನಲ್ಲಿ ಮೂರು ಬೀದಿ ನಾಯಿಗಳು ನಾಪತ್ತೆ: ಹುಡುಕಿ ಕೊಟ್ಟರೆ ₹35 ಸಾವಿರ ಬಹುಮಾನ!
ನಮ್ಮ ಸರ್ಕಾರದಲ್ಲಿ ಯಾವ ಗೊಂದಲವು ಇಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲವೊಂದು ವಿಚಾರ ಪ್ರಸ್ತಾಪವಾಗಿವೆ ಹೊರತು ಅದು ಗೊಂದಲವಲ್ಲ. ಅದು ಅಭಿಪ್ರಾಯ ಆಗಿರಬಹುದು ಎಂದು ಹೇಳಿದರು. ವಾಲ್ಮೀಕಿ ಸಮಾಜದ ಮುಖಂಡರಿಗೆ ಸರ್ಕಾರ ಚೇಂಜ್ ಮಾಡುವ ಶಕ್ತಿಯಿದೆ ಎನ್ನುವ ಶಾಸಕ ರಾಜಾ ವೆಂಕಟಪ್ಪ ನಾಯಕ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿ, ಅವರು ಈ ರೀತಿ ಏಕೆ ಹೇಳಿದರು ಎಂಬುವುದು ಅವರನ್ನೇ ಕೇಳಬೇಕು. ಅವರ ಹೇಳಿಕೆ ಬಿಟ್ಟು ಬೇರೆ ಕೇಳಿ ಎಂದರು. ದುಬೈ ಟೂರ್ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿ, ಇದು ಒಂದು ಖಾಸಗಿ ಕಾರ್ಯಕ್ರಮ. ಶಾಸಕರು ಇದರಲ್ಲಿ ಯಾರು ಪಾಲ್ಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.