ನನ್ನ ಪತ್ನಿ ಯಾವ ತಪ್ಪು ಮಾಡಿದ್ದಾಳೆ?: ವಿಪಕ್ಷಗಳ ವಿರುದ್ದ ಸಿದ್ದರಾಮಯ್ಯ ಭಾವನಾತ್ಮಕ ಅಸ್ತ್ರ

By Kannadaprabha NewsFirst Published Oct 6, 2024, 5:11 AM IST
Highlights

ಮುಡಾ ಪ್ರಕರಣ ಮುಂದಿಟ್ಟುಕೊಂಡು ತಮ್ಮ ರಾಜೀನಾಮೆಗೆ ಪಟ್ಟುಹಿಡಿದಿರುವ ಜೆಡಿಎಸ್‌ -ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. 'ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ವಿಪಕ್ಷಗಳು ರಾಜಕಾರಣಕ್ಕೆ ಎಳೆದು ತಂದಿವೆ.

ಮಾನ್ವಿ (ಅ.06): ಮುಡಾ ಪ್ರಕರಣ ಮುಂದಿಟ್ಟುಕೊಂಡು ತಮ್ಮ ರಾಜೀನಾಮೆಗೆ ಪಟ್ಟುಹಿಡಿದಿರುವ ಜೆಡಿಎಸ್‌ -ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಭಾವನಾತ್ಮಕ ಅಸ್ತ್ರ ಪ್ರಯೋಗಿಸಿದ್ದಾರೆ. 'ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ, ಯಾವ ವಿಷಯಕ್ಕೂ ತಲೆ ಹಾಕದ ನನ್ನ ಪತ್ನಿಯನ್ನೂ ವಿಪಕ್ಷಗಳು ರಾಜಕಾರಣಕ್ಕೆ ಎಳೆದು ತಂದಿವೆ. ಆ ಪಕ್ಷಗಳನ್ನು ನೀವು ಕ್ಷಮಿಸ್ತೀರಾ?' ಎಂದು ಪ್ರಶ್ನಿಸಿದ್ದಾರೆ. ಕುರಿ ಕಾಯುವವನ ಮಗ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇ ತಪ್ಪಾ? 

ಕುರಿಕಾಯುವವನ ಪುತ್ರ ಮುಖ್ಯಮಂತ್ರಿಯಾಗಿದ್ದನ್ನು ಸಹಿಸಲಾಗದೆ ನನ್ನ ವಿರುದ್ಧ ವಿನಾಕಾರಣ ಆರೋಪ ಮಾಡಿ, ಸಕಾರಣವಿಲ್ಲದೆ ನಿತ್ಯ ರಾಜೀನಾಮೆ ಕೊಡಿ ಎಂದು ಕೇಳುತ್ತಿದ್ದಾರೆ. ಇದರಿಂದ ನನಗೂ ಸಾಕಾಗಿ ಹೋಗಿದೆ. ಆದರೂ ನಿಮ ಗಾಗಿ ಹೋರಾಟ ಮಾಡುವೆ ಎಂದಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ 458 ಕೋಟಿ ರು. ಮೌಲ್ಯದ ಅಭಿವೃದ್ಧಿ ಕಾಮಗಾರಿ ಗಳಿಗೆ ಚಾಲನೆ ಮತ್ತು ಶೋಷಿತ- ದಮನಿತ- ಶೂದ್ರ ಜನ ಸಮುದಾಯಗಳ ಸ್ವಾಭಿಮಾನಿ ಸಮಾವೇಶ ಉದ್ಘಾಟಿಸಿ ಶನಿವಾರ ಮಾತನಾಡಿದ ಅವರು ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಹರಿ ಹಾಯ್ದರು. ಬಿಜೆಪಿ- ಜೆಡಿಎಸ್‌ನ ಕಪಟಗಳ ಷಡ್ಯಂತ್ರಕ್ಕೆ ಈ ಸ್ವಾಭಿಮಾನ ಸಮಾವೇಶದ ಮುಖಾಂತರ ತಕ್ಕ ಪಾಠ ಕಲಿಸಲು ಸಿದ್ಧರಾಗಿ ಎಂದು ಸಭಿಕರಿಗೆ ಕರೆ ನೀಡಿದರು.

Latest Videos

ಜಾತಿ ಗಣತಿ ವರದಿ ಕುರಿತು ಕ್ಯಾಬಿನೆಟ್‌ನಲ್ಲಿ ಚರ್ಚೆ: ಸಿಎಂ ಸಿದ್ದರಾಮಯ್ಯ

ಗ್ಯಾರಂಟಿ ಜಾರಿಗೆ ತಂದಿದ್ದೇ ತಪ್ಪಾ?: ನಾನು ಏನು ತಪ್ಪು ಮಾಡಿದ್ದೇನೆ? ಕುರಿ ಕಾಯುವವರ ಮಗ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇ ತಪ್ಪಾ? ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇ ತಪ್ಪಾ? ನನ್ನ ಮೇಲಿನ ಹೊಟ್ಟೆಕಿಚ್ಚಿಗೆ ನನ್ನ ಪತ್ನಿಯನ್ನು ಎಳೆಯಬೇಕಿತ್ತಾ? ಆಕೆ ಏನು ತಾನೆ ತಪ್ಪು ಮಾಡಿದ್ದಾಳೆ ಎಂದು ಪ್ರಶ್ನಿಸಿದ ಅವರು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಅವರ ಮಗ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕುರಿಗಾಯಿ ಮಗ ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದು ಮತ್ತು ನನ್ನ ಏಳಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. 

ಹೀಗಾಗಿ ಪ್ರತಿನಿತ್ಯ ಒಂದಲ್ಲ ಒಂದು ಸುಳ್ಳು ಆರೋಪ ಮಾಡುತ್ತಲೇ ಇದ್ದಾರೆ, ನನ್ನ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಹರಿಹಾಯ್ದರು. ಕೊಟ್ಟ ಕುದುರೆ ಏರಲಾರದ ಕುಮಾರಸ್ವಾಮಿ ವೀರನೂ ಅಲ್ಲ, ಶೂರನೂ ಅಲ್ಲ, ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗ ರಾಜ್ಯದ ಜನರಿಗೆ ಸಹಾಯ ಮಾಡುವ ಅವಕಾಶ ಇತ್ತು. ರಾಜ್ಯದ ಅಭಿವೃದ್ಧಿ ಮಾಡುವ ಅವಕಾಶವೂ ಇತ್ತು. ಅಧಿಕಾರ, ಅವಕಾಶ ಇದ್ದಾಗ ಜನಪರ ಕೆಲಸ ಮಾಡದ ಕುಮಾರಸ್ವಾಮಿ ಮತ್ತು ಬಿಜೆಪಿಯವರು ಈಗ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸುಳ್ಳು ಮತ್ತು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ನಾನು ಎರಡನೇ ಸಲ ಮುಖ್ಯಮಂತ್ರಿ ಆದಾಗ ಆರಂಭದಿಂದಲೂ ಐದು ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ. 

ರಾಜ್ಯದ ಬೊಕ್ಕಸ ಖಾಲಿಯಾಗಿದೆ, ಅಭಿವೃದ್ಧಿ ಕಾರ್ಯಗಳಿಗೆ ಹಣ ಇಲ್ಲ ಎಂದು ವಿಪಕ್ಷಗಳು ಅಪಪ್ರಚಾರ ಮಾಡುತ್ತಾ ಬಂದಿವೆ ಎಂದರು. ಬಿಜೆಪಿ ಸ್ವಂತ ಶಕ್ತಿ ಮೇಲೆ ಈವರೆಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಏನಿದ್ದರೂ ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರ ಹಿಡಿದಿದೆ. ಹೀಗಾಗಿ ಅವರಿಗೆ ಜನರ ಅಭಿವೃದ್ಧಿ ಬೇಕಾಗಿಲ್ಲ. ಬೈಪಾಸ್ ಹಾದಿಯಲ್ಲೇ ಅಧಿಕಾರ ಹಿಡಿಯಲು ಕಾದು ಕುಳಿತಿದ್ದಾರೆ ಎಂದು ಆರೋಪಿಸಿದರು. ಕುರಿ ಕಾಯುವವನ ಮಗನಾಗಿ ಹುಟ್ಟಿ ನಾನು ತಪ್ಪು ಮಾಡಿದ್ದೇನೆ. ರಾಜ್ಯದ ಬಡವರಿಗೆ ಸ್ವಾಭಿಮಾನ, ಸ್ವಾವಲಂಬನೆ ಬದುಕು ಸಾಗಿಸಲು ಹಲವು ಗ್ಯಾರಂಟಿಗಳನ್ನು ಕೊಟ್ಟು ತಪ್ಪು ಮಾಡಿದ್ದೇನೆ ಎಂದು ಭಾವನಾತ್ಮಕವಾಗಿ ಮಾತನಾಡಿದ ಸಿದ್ದರಾಮಯ್ಯ, ಇದಕ್ಕಾಗಿಯೇ ಬಿಜೆಪಿ-ಜೆಡಿಎಸ್ ನವರು ನಿತ್ಯ ಯಾವುದೇ ಕಾರಣವಿಲ್ಲದೆ ನಿತ್ಯ ರಾಜೀನಾಮೆ ಕೊಡಿ, ರಾಜಿನಾಮೆ ಕೊಡಿ ಎಂದು ಆಗ್ರಹಿಸುತ್ತಿದ್ದಾರೆ. 

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ನಮ್ಮಂತಹವರಿಗೆ ಮಾದರಿಯಾಗಲಿ: ಸಾ.ರಾ.ಮಹೇಶ್

ಇದರಿಂದ ನನಗೂ ಬೇಸರವಾಗಿ ಸಾಕಾಗಿ ಹೋಗಿದೆ. ಆದರೆ ನಿಮಗಾಗಿ ನಾನು ಹೋರಾಟ ಮಾಡುವೆ. ನನ್ನನ್ನು ಕೆಳಗಿಳಿಸುವ ಬಿಜೆಪಿ-ಜೆಡಿಎಸ್ ಷಡ್ಯಂತ್ರ ಸೋಲಿಸುವೆ ಎಂದರು. ಆತ್ಮಸಾಕ್ಷಿ ಎಲ್ಲ ನ್ಯಾಯಾಲಯಗಳಿಗಿಂದಲೂ ನ್ಯಾಯಾಲಯ ದೊಡ್ಡದು. ನಾನು ಪ್ರತಿಪಕ್ಷಗಳ ಬೆದರಿಕೆಗಳಿಗೆ ಜಗ್ಗೋದೂ ಇಲ್ಲ, ಬಗ್ಗೋದೂ ಇಲ್ಲ. ನನ್ನ ಹೋರಾಟ ಮುಂದುವರೆಸುತ್ತೇನೆ. ನಿಮ್ಮ ಆಶೀರ್ವಾದ ನನ್ನ ಮೇಲಿರಲಿ. ಬಿಜೆಪಿಗೆ ನೀವು ತಕ್ಕಪಾಠ ಕಲಿಸಿ ಎಂದು ಆಗ್ರಹಿಸಿದರು. ಸಚಿವರಾದ ಕೆ.ಎಚ್‌.ಮುನಿಯಪ್ಪ, ಎಚ್‌.ಸಿ.ಮಹಾ ದೇವಪ್ಪ, ಸತೀಶ್ ಜಾರಕಿಹೊಳಿ, ಶಿವರಾಜ ತಂಗಡಗಿ, ಎನ್.ಎಸ್.ಬೋಸರಾಜು, ಡಾ.ಶರಣಪ್ರಕಾಶ ಪಾಟೀಲ್ ಮಾತನಾಡಿದರು.

click me!