
ಬೆಂಗಳೂರು (ಆ.23): ಕಾಡಂಚಿನಲ್ಲಿರುವ ಜನರಿಗೆ ಕಾಡಾನೆಗಳ ದಾಳಿಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಮತ್ತು ಅನಾಹುತ ತಪ್ಪಿಸಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮಂಗಳವಾರ ವಿಕಾಸಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು, ಆ.13ರಿಂದ ಈವರೆಗೆ ಕಾಡಾನೆಗಳ ದಾಳಿಯಿಂದ ಐವರು ಸಾವನ್ನಪ್ಪಿರುವುದಕ್ಕೆ ಆಘಾತ ವ್ಯಕ್ತಪಡಿಸಿದರು. ಅಲ್ಲದೇ, ಮಾನವ-ವನ್ಯ ಮೃಗಗಳ ಸಂಘರ್ಷ ಹೆಚ್ಚಳ ಬಗ್ಗೆ ಆತಂಕ ವ್ಯಕ್ತಪಡಿಸಿದರು.
ಅಮೂಲ್ಯವಾದ ಮಾನವ ಪ್ರಾಣ ಹಾನಿಯಾಗಬಾರದು. ಅದೇ ವೇಳೆ ವನ್ಯಮೃಗಗಳು ಸಹ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶದಿಂದ ಮತ್ತು ಬೇಲಿಯಲ್ಲಿ ಹಾಕುವ ಉರುಳಿಗೆ ಸಿಲುಕಿ ಸಾವಿಗೀಡಾಗಬಾರದು. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜನವಸತಿ, ರೈತರ ತೋಟ, ಗದ್ದೆಗಳ ಬಳಿ ಆನೆಗಳು ಕಾಣಿಸಿಕೊಂಡಾಗ ತ್ವರಿತವಾಗಿ ಆನೆಗಳನ್ನು ಕಾಡಿಗೆ ಮರಳಿಸಲು ಮತ್ತು ಸುತ್ತಮುತ್ತಲ ಜನರಿಗೆ ವಾಟ್ಸಾಪ್, ಎಸ್ಎಂಎಸ್ ಮತ್ತು ಸಾರ್ವಜನಿಕ ಪ್ರಚಾರ ವಿಧಾನಗಳ ಮೂಲಕ ಮಾಹಿತಿ ನೀಡಿ, ಜೀವಹಾನಿ ತಗ್ಗಿಸಬೇಕು ಎಂದು ನಿರ್ದೇಶನ ನೀಡಿದರು.
ಕಲುಷಿತ ನೀರಿಂದ ಸಾವಾದರೆ ಸಿಇಒ ಸಸ್ಪೆಂಡ್: ಸಿದ್ದರಾಮಯ್ಯ ಎಚ್ಚರಿಕೆ
ಆನೆಗಳ ಹಾವಳಿ ಹೆಚ್ಚಾಗಿರುವ ಚಾಮರಾಜನಗರ, ಕೊಡಗು ಭಾಗದಲ್ಲಿ ಕಾಡಾನೆಗಳನ್ನು ತಕ್ಷಣವೇ ಕಾಡಿಗೆ ಓಡಿಸಲು ಹಾಲಿ ಕಾರ್ಯನಿರ್ವಹಿಸುತ್ತಿರುವ ಆನೆ ಕ್ಷಿಪ್ರ ಕಾರ್ಯಪಡೆಗಳಲ್ಲಿನ ಗುಂಪುಗಳನ್ನು ಹೆಚ್ಚಿಸಬೇಕು. ನಾಡಿಗೆ ಬರುವ ಹೆಚ್ಚಿನ ಸಂಖ್ಯೆಯ ಆನೆಗಳಿಗೆ ರೇಡಿಯೋ ಕಾಲರ್ ಅಳವಡಿಸಬೇಕು ಎಂದು ಸೂಚಿಸಿದರು. ಇದೇ ವೇಳೆ ಅಧಿಕಾರಿಗಳು ಸಚಿವರಿಗೆ ಎಲ್ಲ ಆನೆಗಳೂ ನಾಡಿಗೆ ಬರುವುದಿಲ್ಲ. ಕೆಲವು ಆನೆಗಳು ಮಾತ್ರ ಪದೇ ಪದೇ ನಾಡಿಗೆ ದಾಳಿ ಇಟ್ಟು ಹಾನಿ ಮಾಡುತ್ತವೆ. ಇಂತಹ ಆನೆಗಳನ್ನು ಗುರುತಿಸಿ ರೇಡಿಯೋ ಕಾಲರ್ ಅಳವಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಚಂದ್ರಯಾನ-3 ಯಶಸ್ವಿಯಾಗಲಿ: ರಾಯಚೂರಿನ ಪುಟಾಣಿ ಮಕ್ಕಳಿಂದ ಶಿವಲಿಂಗಕ್ಕೆ ಹಾಲಿನ ಅಭಿಷೇಕ
ಪ್ರಸ್ತುತ ರಾಜ್ಯದಲ್ಲಿ ಇಂತಹ 14 ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸಲಾಗಿದೆ. ಇದರಿಂದ ಆನೆಗಳ ಚಲನವಲನದ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸುತ್ತದೆ. ಅರಣ್ಯ ಇಲಾಖೆಯಲ್ಲಿ ಪ್ರಸ್ತುತ ಇನ್ನೂ 30 ರೇಡಿಯೋ ಕಾಲರ್ ಖರೀದಿ ಮಾಡಲಾಗುತ್ತಿದೆ. ಪ್ರತಿ ರೇಡಿಯೋ ಕಾಲರ್ಗೆ ಸುಮಾರು ಏಳು ಲಕ್ಷ ರು. ವೆಚ್ಚವಾಗುತ್ತದೆ. ಕಾಡಾನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ವಿಧಾನವಾಗಿದೆ. ಆನೆಗಳು ಹೆಚ್ಚಾಗಿ ನಾಡಿನತ್ತ ಬರುವ ಪ್ರದೇಶಗಳನ್ನು ಗುರುತಿಸಿ ಬ್ಯಾರಿಕೇಡ್ ಹಾಕುವ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.