
ಚಿಕ್ಕಮಗಳೂರು/ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇಂದು ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟಕ್ಕೆ ಅಚ್ಚರಿಯ ಹೆಸರೊಂದು ಸೇರ್ಪಡೆಯಾಗಿದೆ. ಚಿಕ್ಕಮಗಳೂರಿನ ನೂತನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ ಎ.ವಿ. ಅವರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದ್ದು, ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಈ ನೇಮಕದ ಹಿಂದೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 'ಕೊಟ್ಟ ಮಾತು' ಅಡಗಿದೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಗಾಯತ್ರಿ ಶಾಂತೇಗೌಡ ಅವರು ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೇಳಿದ್ದರು. ಆದರೆ ಕಾರಣಾಂತರಗಳಿಂದ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಆ ಸಮಯದಲ್ಲಿ ಸಿದ್ದರಾಮಯ್ಯ ಅವರು, ಮುಂದೆ ಪರಿಷತ್ ಸದಸ್ಯೆಯಾಗು, ನಿನ್ನನ್ನು ಮಂತ್ರಿ ಮಾಡುತ್ತೇನೆ ಎಂದು ಭರವಸೆ ನೀಡಿದ್ದರು. ಇದೀಗ ಗಾಯತ್ರಿ ಅವರನ್ನು ಮಂತ್ರಿ ಮಾಡುವ ಮೂಲಕ ಸಿದ್ದರಾಮಯ್ಯ ತಮ್ಮ ಮಾತನ್ನು ಉಳಿಸಿಕೊಂಡಿದ್ದಾರೆ.
ಗಾಯತ್ರಿ ಶಾಂತೇಗೌಡ ಅವರು ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಂದು ಮೇಲ್ಮನೆ ಉಪಸಭಾಪತಿ ಎಂ.ಕೆ. ಪ್ರಾಣೇಶ್ ವಿರುದ್ಧ ಕೇವಲ 9 ಮತಗಳ ಅಂತರದಿಂದ ಜಯಗಳಿಸಿದ್ದರು. ಈ ಫಲಿತಾಂಶದ ಬಗ್ಗೆ ಕಾನೂನು ಸಮರ ನಡೆದಿತ್ತು. ನಾಲ್ಕು ದಿನಗಳ ಹಿಂದಷ್ಟೇ ಹೈಕೋರ್ಟ್ ಆದೇಶದಂತೆ ಅವರು ಅಧಿಕೃತವಾಗಿ ಪರಿಷತ್ ಸದಸ್ಯೆಯಾಗಿ ಆಯ್ಕೆಯಾಗಿದ್ದರು. ವಿಶೇಷವೆಂದರೆ, ಇನ್ನು ಪರಿಷತ್ ಸದಸ್ಯೆಯಾಗಿ ಪ್ರಮಾಣವಚನ ಸ್ವೀಕರಿಸುವ ಮೊದಲೇ ಅವರಿಗೆ ಸಚಿವ ಸ್ಥಾನ ಒಲಿದುಬಂದಿದೆ.
ಗಾಯತ್ರಿ ಶಾಂತೇಗೌಡ ಅವರ ಸೇರ್ಪಡೆಯಿಂದಾಗಿ ಜಿಲ್ಲೆಯ ಕುರುಬ ಸಮುದಾಯ ಹಾಗೂ ಮಹಿಳಾ ಪ್ರತಿನಿಧಿಗೆ ದೊಡ್ಡ ಮನ್ನಣೆ ಸಿಕ್ಕಂತಾಗಿದೆ. ಇಂದು ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಅವರು ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದು, ಕಾಫಿ ನಾಡಿನಾದ್ಯಂತ ಸಂಭ್ರಮ ಮನೆಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.