
ಬೆಂಗಳೂರು (ಆ.10): ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟನೆಯಿಂದ ಮಿತ್ರ ಪಕ್ಷ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಅಂತರ ಕಾಪಾಡಿಕೊಂಡಿರುವುದು ತೀವ್ರ ಕುತೂಹಲ ಮೂಡಿಸಿದೆ.
ಶನಿವಾರ ನಡೆದಿದ್ದ ಉಭಯ ಪಕ್ಷಗಳ ನಾಯಕರ ಸಮನ್ವಯ ಸಭೆಗೆ ಗೈರು ಹಾಜರಾಗಿದ್ದ ವಿಜಯೇಂದ್ರ ಭಾನುವಾರದ ಉದ್ಘಾಟನಾ ಕಾರ್ಯಕ್ರಮದಿಂದ ಉದ್ದೇಶಪೂರ್ವಕವಾಗಿಯೇ ದೂರ ಉಳಿದರು ಎಂಬ ಮಾತು ಕೇಳಿಬಂದಿದೆ.
ಅದಕ್ಕೂ ಮೊದಲು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸುವುದಕ್ಕೂ ವಿಜಯೇಂದ್ರ ಅವರು ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರೊಂದಿಗೆ ದೆಹಲಿಗೆ ತೆರಳಿರಲಿಲ್ಲ ಎನ್ನುವುದೂ ಗಮನಾರ್ಹ ಸಂಗತಿ.
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಬಿಡದಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸುವ ಬಗ್ಗೆ ವಿಜಯೇಂದ್ರ ಅವರೇ ಮೊದಲಿಗೆ ಘೋಷಣೆ ಮಾಡಿದ್ದರು. ಆ ವೇಳೆ ಜೆಡಿಎಸ್ ನಾಯಕರೊಂದಿಗೆ ಚರ್ಚೆಯನ್ನೂ ನಡೆಸದೆ ಏಕಾಏಕಿ ಪ್ರಕಟಿಸಿದ್ದರು. ಪರಿಣಾಮ ಜೆಡಿಎಸ್ ನಾಯಕರು ಅಸಮಾಧಾನಗೊಂಡು ತಮ್ಮ ಪಕ್ಷದಿಂದ ಪಾದಯಾತ್ರೆ ನಡೆಸುವ ಬಗ್ಗೆ ವೇಳಾಪಟ್ಟಿ ಸಹಿತ ಘೋಷಣೆ ಮಾಡಿದರು.
ವಿಜಯೇಂದ್ರ ಅವರು ನಗರದ ಫ್ರೀಡಂ ಪಾರ್ಕ್ನಲ್ಲಿ ಪಾದಯಾತ್ರೆ ಬಗ್ಗೆ ಘೋಷಣೆ ಮಾಡುವ ಮೊದಲು ಜೆಡಿಎಸ್ ನಾಯಕರೊಂದಿಗೆ ಚರ್ಚಿಸಿದ್ದರೆ ಭಿನ್ನಾಭಿಪ್ರಾಯ ಮೂಡುತ್ತಿರಲಿಲ್ಲವೇನೋ?. ಆದರೆ, ತಮ್ಮ ಕರ್ಮ ಭೂಮಿಯಾದ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬಿಜೆಪಿ ಸವಾರಿ ಮಾಡುವುದನ್ನು ಸಹಿಸುವುದಿಲ್ಲ ಎಂಬ ಸಂದೇಶ ರವಾನಿಸುವ ಸಲುವಾಗಿ ಜೆಡಿಎಸ್ ನಾಯಕರು ದಿನಾಂಕ ಸಹಿತ ಪಾದಯಾತ್ರೆ ಘೋಷಿಸಿ ಸಿದ್ಧತೆಯನ್ನೂ ಆರಂಭಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಮುಜುಗರ ಉಂಟು ಮಾಡಿತು ಎನ್ನಲಾಗಿದೆ.
ಈ ಮುಜುಗರದಿಂದ ತಪ್ಪಿಸಿಕೊಳ್ಳುವ ಸಲುವಾಗಿಯೇ ವಿಜಯೇಂದ್ರ ಅವರು ಕಳೆದ ವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಮಾತುಕತೆ ನಡೆಸಲು ದೆಹಲಿಗೆ ತೆರಳಲಿಲ್ಲ. ಶನಿವಾರ ಪಾದಯಾತ್ರೆ ಕುರಿತು ಉಭಯ ಪಕ್ಷಗಳ ನಾಯಕರನ್ನು ಒಳಗೊಂಡ ಸಮನ್ವಯ ಸಭೆಗೆಯಿಂದ ದೂರ ಉಳಿದರು. ಅಂತಿಮವಾಗಿ ಪಾದಯಾತ್ರೆಯ ಉದ್ಘಾಟನೆಗೂ ತೆರಳದೇ ಪಕ್ಷದ ಕಾರ್ಯಕ್ರಮದ ನೆಪ ಹೇಳಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರವಾಸಕ್ಕೆ ತೆರಳಿದ್ದು ಜೆಡಿಎಸ್ ಪಾಳೆಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಎನ್ಡಿಎ ಒಕ್ಕೂಟದ ಸದಸ್ಯ ಪಕ್ಷವಾಗಿರುವ ಜೆಡಿಎಸ್ ಜತೆಗೆ ‘ಮಿತ್ರತ್ವ’ ನಿಭಾಯಿಸುವಲ್ಲಿ ರಾಜ್ಯ ಬಿಜೆಪಿ ನಾಯಕರು ಹಿಂದೆ ಬೀಳುತ್ತಿದ್ದಾರೆ ಎಂಬ ದೂರು ಪಕ್ಷದ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಗೆ ಕಾರಣವಾಗಿತ್ತು. ಇದರ ನಡುವೆಯೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬಿಡದಿ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಉದ್ಘಾಟನಾ ಕಾರ್ಯಕ್ರಮದಿಂದ ದೂರ ಉಳಿದಿದ್ದು, ಮುಂಬರುವ ದಿನಗಳಲ್ಲಿ ಉಭಯ ಪಕ್ಷಗಳ ನಡುವಿನ ಬಿರುಕಿಗೆ ಕಾರಣವಾಗಬಹುದು ಎಂಬ ಪಿಸುಮಾತು ಜೆಡಿಎಸ್ ಪಾಳೆಯದಿಂದ ಕೇಳಿಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.