ಬಿಜೆಪಿಯ ದೊಡ್ಡ ಭೂ ಹಗರಣ ಬಯಲಿಗೆಳೆವೆ: ಎಚ್‌ಡಿ ಕುಮಾರಸ್ವಾಮಿ

By Kannadaprabha NewsFirst Published Sep 13, 2022, 10:37 AM IST
Highlights

ಬಿಜೆಪಿಯ ದೊಡ್ಡ ಭೂ ಹಗರಣ ಬಯಲಿಗೆಳೆವೆ. ವಿಧಾನಸಭೆ ಕಲಾಪದಲ್ಲೇ ಬಹಿರಂಗ ಮಾಡುವೆ. ಸಾವಿರಾರು ಕೋಟಿ ರು. ಸರ್ಕಾರಿ ಆಸ್ತಿ ಪರಭಾರೆ ಬಗ್ಗೆ ದಾಖಲೆ ಬಿಡುಗಡೆ ಮಾಡುವೆ ಎಂದು ಹೆಚ್‌ ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು (ಸೆ.13): ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರದ ಆಸ್ತಿ ಕಬಳಿಸುವ ಹುನ್ನಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ನಡೆಸಿರುವ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಸೋಮವಾರ ವಿಧಾನಸೌಧದಲ್ಲಿ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ನೀಡಿ ಎಂದು ಪದೇ ಪದೇ ಕೆಣಕಿದ್ದಾರೆ. ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ಹೊರಟ ಅತಿದೊಡ್ಡ ಅಕ್ರಮದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ. ಸದನದಲ್ಲಿ ಈ ವಿಚಾರದ ಬಗ್ಗೆ ಚರ್ಚೆ ಮಾಡಲು ಕಾಂಗ್ರೆಸ್‌ ಪಕ್ಷ ಸಹಕರಿಸಬೇಕು. ದಾಖಲೆಗಳನ್ನು ಬಿಡುಗಡೆ ಮಾಡುತ್ತಿರುವುದು ಸರ್ಕಾರದ ಹಗರಣಗಳ ಒಂದು ಸ್ಯಾಂಪಲ್‌ ಮಾತ್ರ. ಇದನ್ನು ಬಿಜೆಪಿಯವರು ಅರಗಿಸಿಕೊಳ್ಳಲಿ ಸಾಕು ಎಂದು ಕಿಡಿಕಾರಿದರು. ಸದನ ಸಮಯವನ್ನು ಹಾಳು ಮಾಡಲಾರೆ. ರಾಜ್ಯದಲ್ಲಿ ಇತ್ತೀಚೆಗೆ ಬೆಂಗಳೂರು ನಗರ ಸೇರಿ 22 ಜಿಲ್ಲೆಯಲ್ಲಿ ಮಳೆ ಹೆಚ್ಚಾಗಿ ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ಜೆಡಿಎಲ್‌ಪಿ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಬೆಳೆ ಹಾನಿ, ಮನೆ ಕುಸಿತವೂ ಆಗಿದೆ. ಈ ಕುರಿತು ಸದನದಲ್ಲಿ ವಿವರವಾಗಿ ಚರ್ಚೆ ಮಾಡಲು ತೀರ್ಮಾನಿಸಲಾಗಿದೆ.

ಪರ್ಸೆಂಟೇಜ್‌ ಬಗ್ಗೆ ರಾಜ್ಯದ ಉದ್ದಗಲಕ್ಕೂ ಬೀದಿಯಲ್ಲಿ ಚರ್ಚೆ ನಡೆಯುತ್ತಿದೆ. ನಿಖರವಾಗಿ ದಾಖಲೆಗಳು ಇದ್ದರೆ ಚರ್ಚಿಸಿ ಎಂದು ಪಕ್ಷದ ಶಾಸಕರಿಗೆ ತಿಳಿಸಿದ್ದೇನೆ ಎಂದ ಅವರು, ಇತ್ತೀಚೆಗೆ ನಾನು ಸದನದ ಕಲಾಪದಲ್ಲಿ ದೊಡ್ಡಮಟ್ಟದ ಚರ್ಚೆಯಲ್ಲಿ ಪಾಲೊಂಡಿಲ್ಲ ಎನ್ನುತ್ತಾರೆ. ಯಾವುದಾದರೂ ಮುಖ್ಯ ವಿಚಾರವಿದ್ದಾಗ ಭಾಗಿಯಾಗಿದ್ದೇನೆ. ನಾನು ಭಾಗಿಯಾದಾಗ ದಾಖಲೆ ಸಮೇತ ಮಾತನಾಡಿದ್ದೇನೆ ಎಂದು ಹೇಳಿದರು.

ನಮಗಿದು ಕೊನೆ ಚುನಾವಣೆ ಎಂದಿದ್ದ ನಿಖಿಲ್ ಹೇಳಿಕೆಗೆ ಕುಮಾರಸ್ವಾಮಿ ಕೊಟ್ರು ಸ್ಪಷ್ಟನೆ!

ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ಇದೆ ಎನ್ನುವುದು ನಾಡಿನ ಜನತೆಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೂ ಗೊತ್ತಾಗಲಿ. ಅದಕ್ಕೆ ಎಲ್ಲದಕ್ಕೂ ದಾಖಲೆ ಇಟ್ಟು ಮಾತನಾಡುತ್ತೇನೆ. ಸರ್ಕಾರಕ್ಕೆ ಬರಬೇಕಾದ ಎಂಟತ್ತು ಸಾವಿರ ಕೋಟಿ ರು. ಕಬಳಿಸುವ ಹುನ್ನಾರ ನಡೆದಿದೆ. ಈ ಸರ್ಕಾರಿ ಆಸ್ತಿಗೆ 2008-09ರಲ್ಲಿಯೇ ಐದು ಸಾವಿರ ಕೋಟಿ ರು. ಎಂದು ಅಂದಾಜು ಮಾಡಲಾಗಿತ್ತು. ಈ ಬಗ್ಗೆ ಸರ್ಕಾರ ಮಾಡಿರುವ ಆದೇಶ ದಿಗ್ಭ್ರಮೆ ಉಂಟು ಮಾಡುವ ರೀತಿಯಲ್ಲಿದೆ ಎಂದರು.

ಕಾಂಗ್ರೆಸ್-ಬಿಜೆಪಿ ನಡವಿನ ಕಾಳಗದಲ್ಲಿ ಕುಮಾರಸ್ವಾಮಿ ಎಂಟ್ರಿ, ಬೊಮ್ಮಾಯಿ ಸರ್ಕಾರಕ್ಕೆ ಶಾಕ್

ತೃತೀಯ ರಂಗವಲ್ಲ, ಪರ್ಯಾಯ ಶಕ್ತಿ:  ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್‌ ರಾವ್‌ ಅವರ ಜತೆಗಿನ ಭೇಟಿಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ತೃತೀಯ ರಂಗ ಎನ್ನುವುದಕ್ಕಿಂತ ಚಂದ್ರಶೇಖರ್‌ ರಾವ್‌ ಅವರಿಗೆ ರಾಷ್ಟ್ರೀಯ ಪಕ್ಷಗಳಿಗೆ ಪರ್ಯಾಯ ಶಕ್ತಿ ಸೃಷ್ಟಿಸುವ ಕನಸು ಇದೆ. ದೇಶದ ಸಮಸ್ಯೆ ಪರಿಹಾರಕ್ಕೆ ಅವರದ್ದೇ ಆದ ಒಂದು ಕಲ್ಪನೆ ಇಟ್ಟುಕೊಂಡಿದ್ದಾರೆ. ರೈತರ ವಿಚಾರದಲ್ಲಿ ಯಾವ ರೀತಿ ಸಹಾಯವಾಗಬೇಕು, ರಾಷ್ಟ್ರಮಟ್ಟದಲ್ಲಿ ಯಾವ ರೀತಿ ಹೋಗಬೇಕು ಎಂಬ ವಿಚಾರ ಇಟ್ಟುಕೊಂಡಿದ್ದಾರೆ. ಇದಕ್ಕಾಗಿ ನಮ್ಮ ಬೆಂಬಲ ಕೋರಿದ್ದಾರೆ. ನಾವು ಅವರ ಜತೆ ಕೈ ಜೋಡಿಸುವ ನಿಟ್ಟಿನಲ್ಲಿ ಯೋಚಿಸಲಾಗಿದೆ ಎಂದು ತಿಳಿಸಿದರು.

click me!