
ಬೀದರ್ (ಮಾ.09): ಮಹಿಳೆಯರ ಸಬಲೀಕರಣವೇ ಸಮಾಜದ ಪ್ರಗತಿಯ ಮೂಲವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದರು. ಅವರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಪೂಜ್ಯ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
‘ತೊಟ್ಟಿಲು ತೂಗುವ ಕೈ ದೇಶವನ್ನೂ ಆಳಬಲ್ಲದು’ ಎಂಬ ಮಾತಿನಂತೆ ಮಹಿಳೆಯರು ಇಂದು ಸಮಾಜದ ಎಲ್ಲ ಕ್ಷೇತ್ರಗಳಲ್ಲಿಯೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ ಎಂದು ಸಚಿವರು ಹೇಳಿದರು. ಕ್ರೀಡಾ ಕ್ಷೇತ್ರದಲ್ಲಿ ಪಿ.ಟಿ.ಉಷಾ, ಸೈನಾ ನೆಹ್ವಾಲ್ ಸೇರಿದಂತೆ ಅನೇಕ ಮಹಿಳಾ ಕ್ರೀಡಾಪಟುಗಳು ದೇಶಕ್ಕೆ ಕೀರ್ತಿ ತಂದುಕೊಟ್ಟಿದ್ದಾರೆ. ಅಂತರಿಕ್ಷ ಕ್ಷೇತ್ರದಲ್ಲಿ ಕಲ್ಪನಾ ಚಾವ್ಲಾ ಮತ್ತು ಸುನೀತಾ ವಿಲಿಯಮ್ಸ್ ಅವರು ಭಾರತದ ಹೆಸರನ್ನು ವಿಶ್ವದ ಮಟ್ಟದಲ್ಲಿ ಎತ್ತಿಹಿಡಿದಿದ್ದಾರೆ ಎಂದು ಸಚಿವರು ಉಲ್ಲೇಖಿಸಿದರು.
ಉಕ್ಕಿನ ಮಹಿಳೆ ಎಂದು ಖ್ಯಾತಿ ಪಡೆದ ಮಾಜಿ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ದಿಟ್ಟ ಆಡಳಿತ ದೇಶದ ಇತಿಹಾಸದಲ್ಲಿ ಮಹತ್ವದ ಅಧ್ಯಾಯವಾಗಿದೆ ದೇಶದಲ್ಲಿ ಮಹಿಳೆಯರ ಸಬಲತೆಗೆ ಸಾಕ್ಷಿಯಾಗಿದೆ ಎಂದರು. ಕರ್ನಾಟಕ ಕಾಂಗ್ರೆಸ್ ಸರ್ಕಾರ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿ ಮಹಿಳೆಗೆ ತಿಂಗಳಿಗೆ 2000 ರುಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ. ಶಕ್ತಿ ಯೋಜನೆಯಡಿ ರಾಜ್ಯದ ಕೋಟ್ಯಂತರ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣದ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ರಹೀಮ್ ಖಾನ್, ಬಿಡಿಎ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮಹಾ ನಗರಪಾಲಿಕೆ ಅಧ್ಯಕ್ಷ ಮಹಮ್ಮದ್ ಗೌಸ್, ಜಿಪಂ ಸಿಇಒ ಡಾ. ಗಿರೀಶ ಬದೋಲೆ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಗೂ ಜಿಲ್ಲೆಯ ಅನೇಕ ಮಹಿಳೆಯರು ಭಾಗವಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.