
ಬೆಂಗಳೂರು: ನಟ ದರ್ಶನ್ ಆರೋಪಿಯಾಗಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ ಎನ್ನಲಾದ ಕನ್ನಡದ ‘ಬಾಸ್’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಧ್ಯಂತರ ಆದೇಶ ಮಾಡಿದೆ.
ಬಾಸ್ ಚಿತ್ರ ಬಿಡುಗಡೆ ಮಾಡದಂತೆ ಚಿತ್ರದ ನಿರ್ಮಾಪಕರು, ನಿರ್ದೇಶಕರು, ವಿತರಕರು ಮತ್ತು ಪ್ರದರ್ಶಕರಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ನಟ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮೀ ದರ್ಶನ್ ಸಲ್ಲಿಸಿದ್ದ ಮೂಲ ದಾವೆ ವಿಚಾರಣೆ ನಡೆಸಿದ ನಗರದ 16ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಈ ಆದೇಶ ಮಾಡಿದೆ.
ನಗರದ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಧರಿಸಿದ ಅಥವಾ ದಾವೆದಾರರ ಜೀವನ ಉಲ್ಲೇಖಿಸುವಂತಹ ಅಥವಾ ಅವರ ಜೀವನಕ್ಕೆ ಸಂಬಂಧಿಸಿದ, ಅವರ ಕುಟುಂಬ ಮತ್ತು ಗೌರವಕ್ಕೆ ತೇಜೋವಧೆ ಉಂಟು ಮಾಡುವಂತಹ ವಿವಾದಿತ ಚಿತ್ರವನ್ನು(ಬಾಸ್) ಚಿತ್ರಮಂದಿರ ಅಥವಾ ಒಟಿಟಿ ಮೂಲಕ ಬಿಡುಗಡೆ ಮಾಡಬಾರದು ಎಂದು ನ್ಯಾಯಾಲಯ ನಿರ್ದೇಶನ ನೀಡಿದೆ.
ನಂತರ ಬಾಸ್ ಚಿತ್ರದ ನಿರ್ಮಾಪಕರು ಹಾಗೂ ನಿರ್ದೇಶಕರಿಗೆ ಸಮನ್ಸ್ ಜಾರಿಗೊಳಿಸಿ ದಾವೆಯ ವಿಚಾರಣೆಯನ್ನು ಮೇ 2ಕ್ಕೆ ಮುಂದೂಡಿತು.
ಇದನ್ನೂ ಓದಿ: ನಟ ದರ್ಶನ್ ಭೇಟಿಗೆ ಕೋರ್ಟ್ ಅಸ್ತು; ಇನ್ನೋರ್ವ ಆರೋಪಿಗೆ ಭಾರಿ ದಂಡ- ಆದೇಶದ ಡಿಟೇಲ್ಸ್ ಇಲ್ಲಿದೆ
ಬಾಸ್ ಚಿತ್ರವು 2026ರ ಏ.14 ರಂದು ರಾಜ್ಯಾದ್ಯಂತ ಬಿಡುಗಡೆಗೆ ಸಿದ್ಧವಾಗಿತ್ತು. ಆದರೆ, ಚಿತ್ರವು ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿದೆ. ಚಿತ್ರ ಬಿಡುಗಡೆಯಾದರೆ ತಮ್ಮ ಘನತೆ ಮತ್ತು ಗೌರವವಕ್ಕೆ ಧಕ್ಕೆಯಾಗಲಿದೆ. ಮೇಲಾಗಿ ಪ್ರಕರಣಕ್ಕೆ ಸಂಬಂಧಿಸಿದ ಸೆಷನ್ಸ್ ನ್ಯಾಯಾಯದಲ್ಲಿ ವಿಚಾರಣೆಗೆ ಅಡ್ಡಿ ಉಂಟಾಗಲಿದೆ. ಇದರಿಂದ ಬಾಸ್ ಚಿತ್ರವನ್ನು ಬಿಡುಗಡೆ ಮಾಡದಂತೆ ಆದೇಶಿಸಬೇಕು ಎಂದು ಕೋರಿ ದರ್ಶನ್, ಅವರ ಪತ್ನಿ ವಿಜಯಲಕ್ಷ್ಮಿ ನ್ಯಾಯಾಲಯಕ್ಕೆ ದಾವೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ದಾಸನ ಫ್ಯಾನ್ಸ್ಗೆ ಕಿಚ್ಚನ ಫ್ಯಾನ್ಸ್ ಪೈಪೋಟಿ..! ಚಾರ್ಜ್ ಶೀಟ್ನಲ್ಲಿ ಸುದೀಪ್ ಫ್ಯಾನ್ಸ್ ಹೆಸರು?
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.