
ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ನಿಧನರಾದರು. ಬೆಂಗಳೂರಿನ ವೈಯ್ಯಾಲಿಕಾವಲ್ನಲ್ಲಿರುವ ತಮ್ಮ ನಿವಾಸದಲ್ಲಿ ಮಧ್ಯಾಹ್ನ ಸುಮಾರು 2 ಗಂಟೆಗೆ ಅವರು ಕೊನೆಯುಸಿರೆಳೆದಿದ್ದು, ಅವರ ಅಗಲಿಕೆಗೆ ಕನ್ನಡ ಚಿತ್ರರಂಗ ಹಾಗೂ ಅಭಿಮಾನಿ ವಲಯದಲ್ಲಿ ಶೋಕದ ಛಾಯೆ ಆವರಿಸಿದೆ.
ಹಿರಿಯ ನಟ ಶ್ರೀಶೈಲನ್ ಅವರ ಧರ್ಮಪತ್ನಿಯಾಗಿದ್ದ ಶೈಲಜಾ ಶ್ರೀಶೈಲನ್ ಅವರು ಪುತ್ರ ಶ್ರೀಕಾಂತ್ ಹಾಗೂ ಪುತ್ರಿ ಶ್ರೀವಾಣಿ ಅವರನ್ನು ಅಗಲಿದ್ದಾರೆ. ದಶಕಗಳ ಕಾಲ ಕನ್ನಡ ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಶೈಲಜಾ ಶ್ರೀಶೈಲನ್ ಅವರು ‘ಎ’, ‘ಪುಟ್ಟ ಹೆಂಡ್ತಿ’, ‘ಗೃಹಪ್ರವೇಶ’, ‘ಬಾರೆ ನನ್ನ ಮುದ್ದಿನ ರಾಣಿ’, ‘ಅನಂತನ ಅವಾಂತರ’, ‘ಉಪ್ಪಿ 2’ ಸೇರಿದಂತೆ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಿಗೆ ಜೀವ ತುಂಬಿದ್ದರು.
ವಿಶೇಷವಾಗಿ ನಟ ಉಪೇಂದ್ರ ಅವರ ಹಲವು ಸಿನಿಮಾಗಳಲ್ಲಿ ತಾಯಿ ಸೇರಿದಂತೆ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು. ಸಿನಿಮಾ ಮಾತ್ರವಲ್ಲದೆ, ‘ಮುಕ್ತ’, ‘ಮಾಯಾಮೃಗ’ ಸೇರಿದಂತೆ ಅನೇಕ ಜನಪ್ರಿಯ ಕನ್ನಡ ಧಾರಾವಾಹಿಗಳಲ್ಲೂ ಅವರು ಗಮನಾರ್ಹ ಅಭಿನಯ ನೀಡಿದ್ದು, ಕಿರುತೆರೆಯಲ್ಲೂ ತಮ್ಮದೇ ಆದ ಛಾಪು ಮೂಡಿಸಿದ್ದರು.
ಶೈಲಜಾ ಶ್ರೀಶೈಲನ್ ಅವರ ಅಂತ್ಯಕ್ರಿಯೆ ಗುರುವಾರ ಬೆಂಗಳೂರಿನ ಶ್ರೀರಾಂಪುರ ವಿದ್ಯುತ್ ಚಿತಾಗಾರದಲ್ಲಿ ಕುಟುಂಬ ಸದಸ್ಯರು, ಬಂಧು-ಬಳಗ ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನೆರವೇರಿತು. ಅವರ ನಿಧನದಿಂದ ಕನ್ನಡ ಚಿತ್ರರಂಗ ಮತ್ತೊಬ್ಬ ಅನುಭವಿ ಕಲಾವಿದೆಯನ್ನು ಕಳೆದುಕೊಂಡಂತಾಗಿದೆ.
ಕನ್ನಡ ಸಿನಿಮಾ (Kannada Cinema News), ಟಿವಿ ಕಾರ್ಯಕ್ರಮಗಳು (Kannada TV Shows), ಸೆಲೆಬ್ರಿಟಿ ಸುದ್ದಿಗಳು ಮತ್ತು ಇತ್ತೀಚಿನ ಸುದ್ದಿಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ನಲ್ಲಿ ಮನರಂಜನಾ ವಿಭಾಗ ನೋಡಿ. ಸಿನಿಮಾ ವಿಮರ್ಶೆಗಳು (Kannada Movies Review), ತಾರೆಯರ ಸಂದರ್ಶನಗಳು, ಧಾರಾವಾಹಿ ಅಪ್ಡೇಟ್ಸ್, ತೆರೆಮರೆಯ ಕಥೆಗಳು, OTT ರಿಲೀಸ್ಗಳ ಬಗ್ಗೆ ಮಾಹಿತಿಯೂ ಇಲ್ಲಿದೆ.