ಶಿವಮೊಗ್ಗ-ಬೆಂಗಳೂರು ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್

By Web DeskFirst Published Nov 2, 2019, 2:53 PM IST
Highlights

 ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಇಲ್ಲಿದೆ ಗುಡ್ ನ್ಯೂಸ್. ಎರಡು ನಗರಗಳ ನಡುವೆ ನಿರ್ಮಾಣವಾಗುತ್ತಿದೆ ಚತುಷ್ಪತ ರಸ್ತೆ 

ಶಿವಮೊಗ್ಗ[ನ.02]:   ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು ಹಾಗೂ ಈ ಭಾಗದಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಶಿವಮೊಗ್ಗ-ತುಮಕೂರು ನಡುವೆ ಚತುಷ್ಪಥ ರಸ್ತೆ ನಿರ್ಮಿಸಲು 3957 ಕೋಟಿ ರು. ವೆಚ್ಚದ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಶೀಘ್ರದಲ್ಲಿ ಕಾರ್ಯಾರಂಭಗೊಳ್ಳಲಿದೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದರು.

ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ಅನುಮತಿ ದೊರೆತಿದೆ. ಈ ಕಾರ್ಯದಲ್ಲಿ ಈ ವ್ಯಾಪ್ತಿಯ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸಕಾಲಿಕವಾಗಿ ಸ್ಪಂದಿಸಿದ್ದಲ್ಲದೆ, ಭೂಸ್ವಾದೀನ ಪ್ರಕ್ರಿಯೆಯನ್ನು ಪೂರ್ಣ ಗೊಳಿಸಿರುವುದು ವಿಶೇಷ ಎಂದರು.

ಶಿವಮೊಗ್ಗ ನಗರದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣ ಜೊತೆಗೆ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಒದಗಿಸುವ ಸದುದ್ದೇಶದಿಂದ ನಗರವನ್ನು ಕೇಂದ್ರವನ್ನಾಗಿಸಿಕೊಂಡು ಊರ ಹೊರ ವಲಯದಲ್ಲಿ 19 ಕಿ.ಮೀ. ವ್ಯಾಪ್ತಿ ಯಲ್ಲಿ 430 ಕೋಟಿ ರು.ಗಳ ವೆಚ್ಚದಲ್ಲಿ ವರ್ತುಲ ರಸ್ತೆ ನಿರ್ಮಾಣಕ್ಕೆ ಪಂಕ್ತೀಕರಣ ನಕ್ಷೆಯನ್ನು ತಯಾರಿಸಲಾಗಿದೆ. ಈ ಯೋಜನೆಯ ಅನುಷ್ಠಾನಕ್ಕೆ ಕೇಂದ್ರದ ಭೂಸಾರಿಗೆ ಮಂತ್ರಾಲಯದ ಅನುಮತಿ ದೊರೆಯಲಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಕೆಸ್‌ಐಐಡಿಸಿ ಸಂಸ್ಥೆಯ ಮೂಲಕ 38 ಕೋಟಿ ರು.ಗಳ ವೆಚ್ಚ ದಲ್ಲಿ ಶಿವಮೊಗ್ಗದಲ್ಲಿ ಕಿರುವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಕಾಮ ಗಾರಿ ಕೈಗೊಳ್ಳಲಾಗಿದ್ದು, ಮುಂದಿನ ಒಂದು ವರ್ಷದ ಅವಧಿಯೊಳಗಾಗಿ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದು ನುಡಿದರು.

ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ 1458 ಕೋಟಿ ರು.ಗಳ ವೆಚ್ಚದಲ್ಲಿ64 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಅವುಗಳ ಪ್ರಗತಿ ಪರಿಶೀಲನೆಯ ಕುರಿತು ಪ್ರತಿ ತಿಂಗಳು ಸಭೆಯನ್ನು ಏರ್ಪಡಿಸಿ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಕೈಗೊಂಡಿರುವ ಪ್ರತಿ ಕಾಮಗಾರಿಗೆ ಕಾಲಮಿತಿ ನಿಗದಿಗೊಳಿಸಲಾಗುತ್ತಿದೆ. ನಿರೀಕ್ಷೆಯಂತೆ ಕೆಲಸ-ಕಾರ್ಯಗಳು ಪೂರ್ಣಗೊಂಡಲ್ಲಿ ನಗರದ ಚಿತ್ರಣವೇ ಬದಲಾಗಲಿದೆ ಎಂದರು.

ಜಿಲ್ಲಾ ಪಂಚಾಯತಿ ವ್ಯಾಪ್ತಿಗೊಳಪಡುವ ಜಿಲ್ಲೆಯ 444 ಕೆರೆಗಳನ್ನು ಅಭಿವೃದ್ಧಿಪಡಿಸಲು, ಜಿಪಂನಿಂದ 23 ಕೋಟಿರು.ಗಳ ಪ್ರಸ್ತಾವನೆ ಬಂದಿದ್ದು, ಕೆರೆಗಳದುರಸ್ತಿಗೆ ಅಗತ್ಯವಾಗಿರುವ ಅನುದಾನ ವನ್ನು ಬಿಡುಗಡೆ ಮಾಡಿ, ಕಾಮಗಾರಿಯನ್ನು ಕೂಡಲೇ ಆರಂಭಿಸಲಾಗುವುಸು ಎಂದು ನುಡಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಮಹಾನಗರಪಾಲಿಕೆ ಮೇಯರ್ ಲತಾಗಣೇಶ್, ಉಪಮೇಯರ್ ಚನ್ನ ಬಸಪ್ಪ, ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಲ್. ವೈಶಾಲಿ, ಜಿಲ್ಲಾಪೊಲೀಸ್ ವರಿಷ್ಠಾಧಿಕಾರಿ ಶಾಂತರಾಜು, ಅಪರ ಜಿಲ್ಲಾಧಿಕಾರಿ ಅನುರಾಧ ಜಿ.ಉಪಸ್ಥಿತರಿದ್ದರು.

ನವೆಂಬರ್ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

click me!