
ರಾಜ್’ಕೋಟ್[ಅ.06]: ಭಾರತೀಯ ಬೌಲರ್’ಗಳ ಸಂಘಟಿತ ಪ್ರದರ್ಶನಕ್ಕೆ ತತ್ತರಿಸಿದ ವೆಸ್ಟ್ ಇಂಡೀಸ್ ಇನ್ನಿಂಗ್ಸ್ ಹಾಗೂ 272 ರನ್’ಗಳ ಹೀನಾಯ ಸೋಲು ಕಂಡಿದೆ. ಈ ಗೆಲುವಿನೊಂದಿಗೆ ಭಾರತ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.
ಭಾರತ ಮೊದಲ ಇನ್ನಿಂಗ್ಸ್’ನಲ್ಲಿ 649 ರನ್’ಗಳ ಬೃಹತ್ ಮೊತ್ತ ಕಲೆಹಾಕಿತ್ತು. ಇದಕ್ಕುತ್ತರವಾಗಿ ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್’ನಲ್ಲಿ 181 ಹಾಗೂ ಎರಡನೇ ಇನ್ನಿಂಗ್ಸ್’ನಲ್ಲಿ 196 ರನ್’ಗಳಿಸಲಷ್ಟೇ ಶಕ್ತವಾಯಿತು. ಎರಡನೇ ಇನ್ನಿಂಗ್ಸ್’ನಲ್ಲಿ ಕಿರಾನ್ ಪೋವೆಲ್ 83 ರನ್ ಬಾರಿಸಿದ್ದು ಬಿಟ್ಟರೆ, ಉಳಿದ ಯಾವ ಬ್ಯಾಟ್ಸ್’ಮನ್ ಕೂಡಾ ನಿರೀಕ್ಷೆಗೆ ತಕ್ಕಂತೆ ಬ್ಯಾಟಿಂಗ್ ನಡೆಸಲಿಲ್ಲ. ಇದೀಗ ಇನ್ನೂ 2 ದಿನ ಬಾಕಿ ಇರುವಂತೆಯೇ ವಿರಾಟ್ ಪಡೆ ಗೆಲುವಿನ ಕೇಕೆ ಹಾಕಿದೆ.
ಕುಲ್ದೀಪ್ ಯಾದವ್ 5, ರವೀಂದ್ರ ಜಡೇಜಾ 3 ಹಾಗೂ ರವಿಚಂದ್ರನ್ ಅಶ್ವಿನ್ 2 ವಿಕೆಟ್ ಪಡೆಯುವುದರೊಂದಿಗೆ ವಿಂಡೀಸ್ ಬ್ಯಾಟ್ಸ್’ಗಳ ಹೆಡೆಮುರಿ ಕಟ್ಟಿದರು.
ಇದಕ್ಕೂ ಮೊದಲು ಅಂತರಾಷ್ಟ್ರೀಯ ಟೆಸ್ಟ್ ಕ್ರಿಕೆಟ್’ಗೆ ಪದಾರ್ಪಣೆ ಮಾಡಿದ ಪೃಥ್ವಿ ಶಾ, ನಾಯಕ ವಿರಾಟ್ ಕೊಹ್ಲಿ ಹಾಗೂ ರವೀಂದ್ರ ಜಡೇಜಾ ಬಾರಿಸಿದ ಭರ್ಜರಿ ಶತಕಗಳ ನೆರವಿನಿಂದ ಬರೋಬ್ಬರಿ 9 ವಿಕೆಟ್ ನಷ್ಟಕ್ಕೆ 649 ರನ್ ಬಾರಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತ್ತು.
ಇದೀಗ ಎರಡನೇ ಟೆಸ್ಟ್ ಪಂದ್ಯ ಹೈದರಾಬಾದಿನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಮೈದಾನದಲ್ಲಿ ಅಕ್ಟೋಬರ್ 12ರಿಂದ ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.