
ನವದೆಹಲಿ(ಡಿ.21): ಕ್ರಿಕೆಟ್ ಆಡಳಿತದ ಸುಧಾರಣೆಗಾಗಿ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ನ್ಯಾ. ಲೋಧಾ ಸಮಿತಿ ಬಿಸಿಸಿಐಗೆ ಕಳೆದೆರಡು ತಿಂಗಳಿಂದ ಸಮರ್ಪಕ ಕಾಲಾವಕಾಶ ನೀಡದೇ ಸತಾಯಿಸುತ್ತಿದೆ ಎಂದು ಅನುರಾಗ್ ಠಾಕೂರ್ ಕಿಡಿಕಾರಿದ್ದಾರೆ.
ಸಮಿತಿಯ ಶಿಫಾರಸುಗಳಲ್ಲಿ ಬಹುತೇಕ ಅಂಶಗಳನ್ನು ಬಿಸಿಸಿಐ ಈಗಾಗಲೇ ಅಳವಡಿಸಿಕೊಂಡಿದೆ. ಆದರೆ, ಕೆಲವಾರು ಅಂಶಗಳನ್ನು ರಾಜ್ಯ ಕ್ರಿಕೆಟ್ ಸಂಸ್ಥೆಗಳು ಒಪ್ಪುತ್ತಿಲ್ಲ. ಇದನ್ನು ಲೋಧಾ ಸಮಿತಿಗೆ ಮನವರಿಕೆ ಮಾಡಲು ಬಿಸಿಸಿಐಯು ಶಕ್ತಿ ಮೀರಿ ಪ್ರಯತ್ನಿಸಿದ್ದರೂ ಅದು ಪ್ರಯೋಜನವಾಗಿಲ್ಲ ಎಂದು ಠಾಕೂರ್ ಬೇಸರ ವ್ಯಕ್ತಪಡಿಸಿದ್ದಾರೆ.
ನ್ಯಾಯಾಂಗದ ಮೇಲೆ ವಿಶ್ವಾಸ
ಇನ್ನು ಲೋಧಾ ಸಮಿತಿಯ ಶಿಫಾರಸುಗಳನ್ನು ಅಳವಡಿಸಿಕೊಳ್ಳುವ ವಿಚಾರದಲ್ಲಿ ಸುಪ್ರೀಂ ಕೋರ್ಟ್'ಗೆ ಸುಳ್ಳು ಸಾಕ್ಷ್ಯ ನೀಡಿದ ಆರೋಪಕ್ಕೆ ಗುರಿಯಾಗಿರುವ ಅನುರಾಗ್ ಠಾಕೂರ್, ಪ್ರಕರಣದಿಂದ ದೋಷಮುಕ್ತವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
‘‘ನ್ಯಾಯಾಂಗದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ. ನಿಸ್ಸಂಶಯವಾಗಿಯೂ ಈ ವಿಷ ವರ್ತುಲದಿಂದ ಹೊರಬರುವ ಭರವಸೆಯೂ ನನಗಿದೆ’’ ಎಂದರು. ಅಂದಹಾಗೆ ಲೋಧಾ ಸಮಿತಿಯ ಶಿಫಾರಸುಗಳಂತೆ ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಮೇಲುಸ್ತುವಾರಿ ಸಮಿತಿಗೆ ಕಂಟ್ರೋಲರ್ ಹಾಗೂ ಆಡಿಟರ್ ಜನರಲ್ (ಸಿಎಜಿ) ಅವರನ್ನು ಸದಸ್ಯರನ್ನಾಗಿ ನೇಮಿಸುವುದರಿಂದ ಬಿಸಿಸಿಐನಲ್ಲಿ ಸರ್ಕಾರದ ನೇರ ಹಸ್ತಕ್ಷೇಪವಾದಂತಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.