
ಬೆಂಗಳೂರು (ಆ.೪): ತಮ್ಮ ಸಂಪುಟ ಸೇರಿರುವ ಎಲ್ಲಾ 19 ಮಂದಿ ಹೊಸ ಸಚಿವರು ಬುಧವಾರದಿಂದಲೇ ತಮಗೆ ಜವಾಬ್ದಾರಿ ವಹಿಸುವ ಜಿಲ್ಲೆಗಳಿಗೆ ಹೋಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಬಗ್ಗೆ ಸ್ಥಳ ಪರಿಶೀಲನೆ ಮಾಡಬೇಕು. ನಂತರ ಕಂದಾಯ ಸಚಿವರಿಗೆ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ವಿಧಾನಸೌಧದಲ್ಲಿ ಸೋಮವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಈ ಮಾಹಿತಿ ನೀಡಿದರು.
ಸುಮಾರು 2 ಗಂಟೆ ಕಾಲ ಸಚಿವ ಸಂಪುಟದ ನೂತನ ಸದಸ್ಯರಿಗೆ ಮಾರ್ಗದರ್ಶನ ನೀಡಿದ್ದೇವೆ. ಸರ್ಕಾರದ ಮುಂದಿರುವ ಸವಾಲು, ಎದುರಾಗಬಹುದಾದ ಸಮಸ್ಯೆಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಹೊಸ ಸಚಿವರಿಗೆ ಮಾರ್ಗದರ್ಶನ ನೀಡಲಾಗಿದೆ. ಬರಗಾಲ ಹಾಗೂ ಕಾವೇರಿ ಭಾಗದ ಪ್ರದೇಶದಲ್ಲಿ ನೀರಿನ ಸಮಸ್ಯೆ ಬಗ್ಗೆ ಚರ್ಚೆ ಮಾಡಿದ್ದೇವೆ. ಹೊಸ ಸಚಿವರಿಗೆ ಮಂಗಳವಾರ ಮಾತ್ರ ಸಮಯಾವಕಾಶ. ಬುಧವಾರದಿಂದ ತಮಗೆ ವಹಿಸುವ ಜಿಲ್ಲೆಗಳಿಗೆ ನೆರೆ, ಬರ ಪರಿಶೀಲನೆಗೆ ಪಕ್ಷಾತೀತವಾಗಿ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳೊಂದಿಗೆ ಸ್ಥಳ ಪರಿಶೀಲಿಸಿ ಕಂದಾಯ ಸಚಿವರಿಗೆ ವರದಿ ನೀಡಲು ಸೂಚಿಸಲಾಗಿದೆ. ಜಿಲ್ಲಾಧಿಕಾರಿಗಳಿಗೂ ಪ್ರತ್ಯೇಕ ವರದಿ ನೀಡಲು ನಿರ್ದೇಶನ ನೀಡಲಾಗಿದೆ. ವರದಿಗಳು ಬಂದ ಬಳಿಕ ಪರಿಶೀಲಿಸಿ ಸರ್ಕಾರ ಸೂಕ್ತ ತೀರ್ಮಾನ ಮಾಡಲಿದೆ ಎಂದು ಹೇಳಿದರು.
ವಿರೋಧ ಪಕ್ಷದ ನಾಯಕರು ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಕಂದಾಯ ಸಚಿವರಾಗಿದ್ದವರು. ಸಾಕಷ್ಟು ಅನುಭವಸ್ಥರು. ಅವರಿಗೆ ಸಮಯ ಬಂದಾಗ ಉತ್ತರ ನೀಡೋಣ ಎಂದು ಹೇಳಿದರು.
ರಾಜ್ಯದಲ್ಲಿ ಭೀಕರವಾದ ಜಲ ಕಂಟಕ ಎದುರಾಗಿತ್ತು. ದೇವರ ಕೃಪೆಯಿಂದ ಇದು ಸಧ್ಯಕ್ಕೆ ನಿವಾರಣೆಯಾಗಿದೆ. ತಮಿಳುನಾಡಿಗೆ 3,500 ಕ್ಯುಸೆಕ್ ನೀರು ಹರಿಸಬೇಕಿತ್ತು. ಮಳೆ ಬಂದು ಕಾವೇರಿ ಕೊಳ್ಳದ ಕೆಲ ಜಲಾಶಯ ತುಂಬಿದ್ದರಿಂದ 30 ಸಾವಿರ ಕ್ಯುಸೆಕ್ ನೀರು ಹರಿಯುತ್ತಿದೆ. ಕೆಆರ್ಎಸ್, ಹೇಮಾವತಿ ತುಂಬಿಲ್ಲ, ಒಳಹರಿವು ಹೆಚ್ಚಿದೆ. ಮಲೆನಾಡಿನಲ್ಲಿ ಮಳೆ ಬೀಳುತ್ತಿದ್ದು, ತುಂಗಭದ್ರಾಗೆ ಇನ್ನು ನೀರು ಬರಬೇಕು. ಆಲಮಟ್ಟಿಯಲ್ಲಿ ನೀರಿನ ಹರಿವು ಇದೆ. ಬರಗಾಲದ ಛಾಯೆ ಇನ್ನೂ ಇದೆ. ಮಳೆಯಿಂದಾಗಿ ಶಿವಮೊಗ್ಗ, ತೀರ್ಥಹಳ್ಳಿ ಭಾಗದಲ್ಲಿ ಅನಾಹುತಗಳು ಆಗಿವೆ. ನಾನು ವರದಿ ತರಿಸಿಕೊಂಡು ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಈಗಾಗಲೇ ಬೆಳಗಾವಿ, ಚಿತ್ರದುರ್ಗ, ಕಲಬುರಗಿ ವಿಭಾಗಗಳಲ್ಲಿ ಸಭೆ ಮಾಡಿದ್ದೇನೆ. ಮೈಸೂರು ವಿಭಾಗದ ಸಭೆಯನ್ನು ಶೀಘ್ರವೇ ಮಾಡಲಾಗುವುದು. ಎಲ್ಲರ ಸಲಹೆ ಪಡೆಯಲಾಗಿದ್ದು, ಕುಡಿಯುವ ನೀರಿನ ಉದ್ದೇಶಕ್ಕೆ ಪ್ರತಿ ವಿಧಾನಸಭೆಗೆ 1 ಕೋಟಿ ಅನುದಾನ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಆರೋಗ್ಯ ಸಚಿವ ಯು.ಟಿ.ಖಾದರ್ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ