Latest Videos

ಕರ್ನಾಟಕದಲ್ಲಿ 26% ಹೆಚ್ಚು ಮುಂಗಾರುಪೂರ್ವ ಮಳೆ..!

By Kannadaprabha NewsFirst Published May 24, 2024, 6:38 AM IST
Highlights

ಮೇ ತಿಂಗಳಲ್ಲಿ ಸುರಿದ ಮಳೆ ಹಿಂದಿನ ಎರಡು ತಿಂಗಳಿನಲ್ಲಿ ಉಂಟಾದ ಮಳೆ ಕೊರತೆ ನೀಗಿಸಿದೆ. ಅಷ್ಟೇ ಅಲ್ಲ ವಾಡಿಕೆ ಪ್ರಮಾಣಕ್ಕಿಂತ ಶೇ.26ರಷ್ಟು ಅಂದರೆ ಮೇ 22ರವರೆಗೆ 11.3ಸೆ.ಮೀ.ಮಳೆಯಾಗಿದೆ. ಮೇ ತಿಂಗಳು ಮುಕ್ತಾಯಕ್ಕೆ ಇನ್ನೂ ಒಂದು ವಾರ ಕಾಲಾವಕಾಶವಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬೆಂಗಳೂರು(ಮೇ.24):  ರಾಜ್ಯದಲ್ಲಿ ಈ ಬಾರಿ ಪೂರ್ವ ಮುಂಗಾರು ಮಳೆ ವಾಡಿಕೆ ಪ್ರಮಾಣಕ್ಕಿಂತ ಶೇ.26ರಷ್ಟು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಮಾರ್ಚ್‌ನಿಂದ ಮೇ ಅಂತ್ಯದವರೆಗೆ ಪೂರ್ವ ಮುಂಗಾರು ಮಳೆಯ ಅವಧಿಯಾಗಿದೆ. ವಾಡಿಕೆಯಂತೆ ಈ ಅವಧಿಯಲ್ಲಿ ರಾಜ್ಯದಲ್ಲಿ 8.9 ಸೆಂ.ಮೀ.ನಷ್ಟು ಮಳೆಯಾಗುತ್ತದೆ, ಆದರೆ, ಮಾರ್ಚ್ ಮತ್ತು ಏಪ್ರಿಲ್ ನಲ್ಲಿ ರಾಜ್ಯದಲ್ಲಿ ಮಳೆಯೇ ಬಂದಿಲ್ಲ, ಆದರೆ ಮೇ ತಿಂಗಳಲ್ಲಿ ಸುರಿದ ಮಳೆ ಹಿಂದಿನ ಎರಡು ತಿಂಗಳಿನಲ್ಲಿ ಉಂಟಾದ ಮಳೆ ಕೊರತೆ ನೀಗಿಸಿದೆ. ಅಷ್ಟೇ ಅಲ್ಲ ವಾಡಿಕೆ ಪ್ರಮಾಣಕ್ಕಿಂತ ಶೇ.26ರಷ್ಟು ಅಂದರೆ ಮೇ 22ರವರೆಗೆ 11.3ಸೆ.ಮೀ.ಮಳೆಯಾಗಿದೆ. ಮೇ ತಿಂಗಳು ಮುಕ್ತಾಯಕ್ಕೆ ಇನ್ನೂ ಒಂದು ವಾರ ಕಾಲಾವಕಾಶವಿದ್ದು, ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಬರಗಾಲದಿಂದ ಬರಿದಾಗಿದ್ದ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಮರಳಿದ ಜೀವಕಳೆ

ಕರಾವಳಿಯ ಮೂರು ಜಿಲ್ಲೆಗಳ ಪೈಕಿ ಉಡುಪಿ ಜಿಲ್ಲೆಯಲ್ಲಿ ಮಾತ್ರ ಶೇ.7ರಷ್ಟು ಮಳೆ ಕೊರತೆ ಉಂಟಾಗಿದ್ದು, ಉಳಿದ 2 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾ ಗಿದೆ. ಒಟ್ಟಾರೆ ಕರಾವಳಿಯಲ್ಲಿ ವಾಡಿಕೆಗಿಂತ ಶೇ.31ರಷ್ಟು ಹೆಚ್ಚು ಮಳೆಯಾಗಿದೆ. ಉತ್ತರ ಒಳನಾಡಿನ 11 ಜಿಲ್ಲೆಗಳ ಪೈಕಿ ಯಾದಗಿರಿ. ಕಲಬುರಗಿ, ಹಾವೇರಿ ಜಿಲ್ಲೆಯಲ್ಲಿ ಮಳೆ ಕೊರತೆ ಉಂಟಾಗಿದೆ. ಉಳಿದ ಎಲ್ಲ ಜಿಲ್ಲೆ ಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಒಟ್ಟಾರೆ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.28ರಷ್ಟು ಹೆಚ್ಚು ಮಳೆಯಾಗಿದೆ.

ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರುಹಾಗೂ ರಾಮನಗರ ದಲ್ಲಿ ಮಾತ್ರ ಮಳೆ ಕೊರತೆ ಉಂಟಾಗಿದೆ. ಉಳಿದ ಕಡೆ ವಾಡಿಕೆಗಿಂತ ಹೆಚ್ಚು ಮಳೆಯಾ ಗಿದೆ. ಒಟ್ಟಾರೆ ದಕ್ಷಿಣ ಒಳನಾಡಿನಲ್ಲಿ ಶೇ.23 ರಷ್ಟು ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ: ಸಿಡಿಲಿಗೆ ಬಾಲಕಿ ಸಾವು

ವಾಯುಭಾರ ಕುಸಿತದಿಂದ ಮುಂಗಾರು ಮಳೆಗಿಲ್ಲ ಅಡ್ಡಿ 

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಪ್ರತ್ಯೇಕ ವಾಯುಭಾರ ಕುಸಿತದಿಂದ ಮುಂಗಾರು ಆರಂಭಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ಹವಾಮಾನ ತಜ್ಞರು ಸ್ಪಷ್ಟಪಡಿಸಿದ್ದಾರೆ. ಮೇ 31ಕ್ಕೆ ಮುಂಗಾರು ಕೇರಳ ಪ್ರವೇಶಿಸಿದ ಒಂದರೆಡು ದಿನದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮನವಾಗಲಿದೆ. ಈಗಾಗಲೇ ಮುಂಗಾರು ಮಾರುತಗಳು ನೈಯತ್ಯ ದಿಕ್ಕಿನ ಕಡೆ ಆಗಮಿಸಿದೆ. ಈ ಸಂದರ್ಭದಲ್ಲಿ ಬಂಗಾಳ ಕೊಲ್ಲಿಯ ವಾಯುಭಾರ ಕುಸಿತ ಮುಂಗಾರಿಗೆ ಇನ್ನಷ್ಟು ಪುಷ್ಟಿ ನೀಡಲಿದೆ. ಅರಬ್ಬಿ ಸಮುದ್ರದಲ್ಲಿ ರೂಪಗೊಂಡಿರುವ ಮತ್ತೊಂದು ವಾಯುಭಾರ ಕುಸಿತ ಪ್ರಬಲಗೊಂಡರೆ, ಮುಂದಿನ ಎರಡು ದಿನ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಕೆಎಎನ್ ಡಿಎಂಸಿ ನಿವೃತ್ತ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಹಲವು ಜಿಲ್ಲೆಗೆಯೆಲ್ಲೋ ಅಲರ್ಟ್:ಮೇ24, 25ರಂದು ಕೊಡಗು, ಹಾಸನ, ಚಿಕ್ಕಮಗ ಳೂರು, ಚಾಮರಾಜನಗರ, ಮಂಡ್ಯ, ಮೈಸೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 6-11 ಸೆಂ.ಮೀ ಮಳೆಯಾಗುವ ಸಾಧ್ಯತೆ ಇದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ. 

click me!