ಬೇಸಿಗೆ ಮಳೆಗೇ ರಾಜ್ಯದ 3 ಜಲಾಶಯಗಳು ಭರ್ತಿ: ಯಗಚಿ, ಕದ್ರಾ, ಗಾಜನೂರು ಡ್ಯಾಂಗೆ ಭಾರಿ ನೀರು

Kannadaprabha News   | Kannada Prabha
Published : May 25, 2025, 05:18 AM IST
Gajanur Dam

ಸಾರಾಂಶ

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಬೇಸಿಗೆಯಲ್ಲೇ ರಾಜ್ಯದ ಮೂರು ಜಲಾಶಯಗಳು ಭರ್ತಿಯಾಗಿವೆ.

ಬೆಂಗಳೂರು (ಮೇ.25): ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಆರ್ಭಟಕ್ಕೆ ಜಲಾಶಯಗಳಿಗೆ ಒಳಹರಿವು ಹೆಚ್ಚಿದ್ದು, ಬೇಸಿಗೆಯಲ್ಲೇ ರಾಜ್ಯದ ಮೂರು ಜಲಾಶಯಗಳು ಭರ್ತಿಯಾಗಿವೆ. ಹಾಸನದ ಯಗಚಿ, ಉತ್ತರ ಕನ್ನಡ ಜಿಲ್ಲೆ ಕದ್ರಾ ಹಾಗೂ ಶಿವಮೊಗ್ಗ ಜಿಲ್ಲೆಯ ಗಾಜನೂರು ಜಲಾಶಯಗಳು ಮುಂಗಾರು ಮಳೆಯ ಆಗಮನಕ್ಕೂ ಮುನ್ನವೇ ಭರ್ತಿಯಾಗಿವೆ. ಈ ಮಧ್ಯೆ, ಕೊಡಗಿನ ವಿರಾಜಪೇಟೆ ಸಮೀಪದ ಅರ್ಜಿ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು, ಗೌರಿ (46) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಜಧಾನಿ ಬೆಂಗಳೂರು, ಕೊಡಗು, ಮಲೆನಾಡು, ಕರಾವಳಿ ಸೇರಿ ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶನಿವಾರವೂ ಮಳೆಯಾಗಿದೆ. ಭಾರಿ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯ ಕದ್ರಾ ಜಲಾಶಯ ಭರ್ತಿಯಾಗಿದ್ದರಿಂದ ಎಂಸಿಎ ಅಧ್ಯಕ್ಷ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಶನಿವಾರ ಬಾಗಿನ ಅರ್ಪಿಸಿದರು. ಈ ಬಾರಿ ಮೇ ತಿಂಗಳಿನಲ್ಲೇ ಜಲಾಶಯ ಭರ್ತಿಯಾಗಿ ಬಾಗಿನ ಅರ್ಪಿಸಿದ್ದು ವಿಶೇಷ.

ಶಿವಮೊಗ್ಗ ಸಮೀಪದ ಗಾಜನೂರು ಡ್ಯಾಂ ಕೂಡ ಭರ್ತಿಯಾಗಿದ್ದು, ಯಾವುದೇ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಹೊರಬಿಡುವ ಸಾಧ್ಯತೆಯಿದೆ. ಕೇವಲ ಮೂರು ಟಿಎಂಸಿ ನೀರು ಸಂಗ್ರಹಣ ಸಾಮರ್ಥ್ಯದ ರಾಜ್ಯದ ಅತಿ ಚಿಕ್ಕ ಜಲಾಶಯಗಳಲ್ಲಿ ಇದು ಒಂದಾಗಿದೆ. ಮಳೆಯಿಂದಾಗಿ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚಿಕ್ಕಬ್ಯಾಡಗೆರೆಯಲ್ಲಿರುವ ಯುಗಚಿ ಜಲಾಶಯ ಭರ್ತಿಯಾಗಿದ್ದು, ಶಾಸಕ ಎಚ್‌.ಕೆ.ಸುರೇಶ್‌ ಜಲಾಶಯಕ್ಕೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. 3.60 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯದ ಡ್ಯಾಂನಿಂದ 500 ಕ್ಯೂಸೆಕ್‌ ನೀರನ್ನು ಬಿಡುಗಡೆ ಮಾಡಲಾಗುತ್ತಿದೆ.

ಕೊಡಗಿನ ತಲಕಾವೇರಿ-ಭಾಗಮಂಡಲ ವ್ಯಾಪ್ತಿಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಭರ್ತಿಯಾಗಿದೆ. ಕಾವೇರಿ, ಕನ್ನಿಕೆ ಮತ್ತು ಸುಜ್ಯೋತಿ ನದಿಗಳು ತುಂಬಿ ಹರಿಯುತ್ತಿವೆ. ತ್ರಿವೇಣಿ ಸಂಗಮ ಸ್ನಾನಘಟ್ಟ ಮುಳುಗಡೆಯಾಗುವ ಸಾಧ್ಯತೆಯಿದೆ. ಇತ್ತೀಚಿನ ವರ್ಷಗಳಲ್ಲಿ ಮೇ ತಿಂಗಳಲ್ಲಿ ಸುರಿದ ಅತಿ ಹೆಚ್ಚು ಮಳೆ ಇದು ಎನ್ನಲಾಗುತ್ತಿದೆ. ಮಳೆಯಿಂದಾಗಿ ತುಂಗಭದ್ರಾ ಜಲಾಶಯದ ಒಳಹರಿವಿನಲ್ಲಿ ಹೆಚ್ಚಳವಾಗಿದ್ದು, ಜಲಾಶಯದಲ್ಲಿ ಪ್ರಸ್ತುತ 10 ಟಿಎಂಸಿಯಷ್ಟು ನೀರು ಸಂಗ್ರಹವಾಗಿದೆ.

ಈ ಮಧ್ಯೆ, ಉಡುಪಿ ಜಿಲ್ಲೆಯಾದ್ಯಂತ ಮಳೆಗೆ ಮರಗಳು ಬಿದ್ದು 10 ಮನೆಗಳು ಜಖಂಗೊಂಡಿವೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯ ತ್ರಿಪುರ ಗ್ರಾಮದಲ್ಲಿ ಮರ ಬಿದ್ದು ಮಾರುತಿ ಕಾರೊಂದು ಜಖಂಗೊಂಡಿದೆ. ಅದೃಷ್ಟವಶಾತ್‌ ಅದರಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಗೋನ್ವಾರದಲ್ಲಿ ಮನೆ ಮೇಲೆ ಮರ ಬಿದ್ದು, ಮನೆ ಜಖಂಗೊಂಡಿದೆ. ಮನೆಯೊಳಗಿದ್ದ ಐವರು ಅದೃಷ್ಟವಶಾತ್‌ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಮಧ್ಯೆ, ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಗೆ ಶನಿವಾರ ಮುಂಗಾರು ಪ್ರವೇಶವಾಗಿದ್ದು, ಕರಾವಳಿಯ ಅನೇಕ ಭಾಗಗಳಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!