
ಬೆಂಗಳೂರು (ಆ.19) ಕರ್ನಾಟಕದಲ್ಲಿ ಭಾರಿ ಮಳೆ ಹಲವು ಅವಾಂತರ ಸೃಷ್ಟಿಸಿದೆ. ರಾಜ್ಯದ ಹಲವು ಜಲಾಶಗಳು ಭರ್ತಿಯಾಗಿದ್ದು, ನೀರನ್ನು ಬಿಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳ್ಳಲು ಸೂಚಿಸಲಾಗಿದೆ. ಹಲವು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಭಾರಿ ಮಳೆ ಕಾರಣದಿಂದ ರಾಜ್ಯದ ಕೆಲ ಜಿಲ್ಲೆಯ ಶಾಲಾ ಕಾಲಿಜಿಗೆ ನಾಳೆಯೂ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡದ ಕೆಲ ತಾಲೂಕು, ಬಾಗಲಕೋಟೆ, ಧಾರವಾಡ, ಹಾವೇರಿ, ಬೆಳಗಾವಿ, ಯಾದಗಿರಿ ಜಿಲ್ಲೆಯಲ್ಲಿ ನಾಳೆ (ಆಗಸ್ಟ್ 20) ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುತ್ತಿದೆ. ನಿರಂತರ ಮಳೆಯಾಗುತ್ತಿರುವ ಪ್ರದೇಶಗಳಲ್ಲಿ ಮುನ್ನಚ್ಚೆರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ರಜೆ ಘೋಷಿಸಿದ್ದಾರೆ. ಬುಧವಾರ ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಪ್ರಾಥಮಿಕ- ಪ್ರೌಢಶಾಲೆ, ಪಿಯುಸಿ ವಿದ್ಯಾರ್ಥಿಗಳಿಗೆ ರಜೆ ಘೋಷಿಸಲಾಗಿದೆ. ಶಿರಸಿ, ಸಿದ್ಧಾಪುರ, ಯಲ್ಲಾಪುರ, ಮುಂಡಗೋಡ, ಜೊಯಿಡಾ, ದಾಂಡೇಲಿಗೆ ರಜೆ ನೀಡಲಾಗಿದೆ.
ಬಾಗಲಕೋಟೆ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜಿಗೆ ನಾಳೆ (ಆಗಸ್ಟ್ 20) ರಜೆ ಘೋಷಿಸಲಾಗಿದೆ. ಸತತ ಮಳೆ ಹಿನ್ನೆಲೆ, ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಸಂಗಪ್ಪ ಆದೇಶ ನೀಡಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿದೆ. ಯಾದಗಿರಿಯಲ್ಲಿ ಮಳೆ ಅಬ್ಬರಕ್ಕೆ ಇಂದು (ಆ.19) ರಜೆ ನೀಡಲಾಗಿತ್ತು. ಇದೀಗ ಮಳೆ ಮುಂದುವರಿದಿರುವ ಕಾರಣ ನಾಳೆ (ಆ.20) ರಜೆ ಘೋಷಿಸಲಾಗಿದೆ. ಯಾದಗಿರಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ರಜೆ ನೀಡಲಾಗಿದೆ.
ಹಾವೇರಿ, ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯೂಸಿ ಕಾಲೇಜಿಗೆ ನಾಳೆ (ಆಗಸ್ಟ್ 20) ರಜೆ ನೀಡಲಾಗಿದೆ. ಮಳೆ ಹಾಗೂ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಾರಣ ಮುನ್ನಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.
ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕಳೆದೆರಡು ದಿನಗಳಿಂದ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೆ ಈ ಭಾಗದಲ್ಲಿ ಮಳೆ ಕಡಿಮೆಯಾಗಿರುವ ಕಾರಣ ನಾಳೆ ಯಾವುದೇ ರಜೆ ನೀಡಿಲ್ಲ. ಎಂದಿನಂತೆ ಶಾಲಾ ಕಾಲೇಜುಗಳು ನಾಳೆ (ಆಗಸ್ಟ್ 20) ಕಾರ್ಯನಿರ್ವಹಿಸಲಿದೆ.
ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಆತಂಕ ಹೆಚ್ಚಾಗಿದೆ.ವಿಜಯಪುರ ಜಿಲ್ಲೆ ಆಲಮಟ್ಟಿ ಡ್ಯಾಂನಿಂದ ಯಾದಗಿರಿ ಜಿ. ನಾರಾಯಣಪುರ ಜಲಾಶಯಕ್ಕೆ ನೀರು ಬಿಡಲಾಗಿದೆ. ಕೃಷ್ಣಾ ನದಿ ಉಕ್ಕಿ ಹರಿಯುತ್ತಿದ್ದು, 1.11 ಲಕ್ಷ ಕ್ಯೂಸೆಕ್ ನಷ್ಟು ಒಳ ಹರಿವು ಇದ್ದು,2 ಲಕ್ಷ ಕ್ಯೂಸೆಕ್ ನೀರನ್ನ ಹೊರ ಬಿಡಲಾಗುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ