ಬರಪೀಡಿತ ತಾಲೂಕುಗಳಿಗೆ 50 ಕೋಟಿ ರು. ಬಿಡುಗಡೆ| ನಗರ ಸ್ಥಳೀಯ ಸಂಸ್ಥೆಗಳಿಗೆ ಮಂಜೂರು
ಬೆಂಗಳೂರು[ಜ.27]: ರಾಜ್ಯದ ಬರಪೀಡಿತ ತಾಲೂಕುಗಳ ವ್ಯಾಪ್ತಿಯಲ್ಲಿ ಉದ್ಭವಿಸಿರುವ ಕುಡಿಯುವ ನೀರಿನ ತೀವ್ರ ಅಭಾವವನ್ನು ನೀಗಿಸಲು ಬರಪೀಡಿತ ತಾಲೂಕು ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳಿಗೆ 50 ಕೋಟಿ ರು. ಅನುದಾನ ಮಂಜೂರು ಮಾಡಿ ಕಂದಾಯ ಇಲಾಖೆ ಆದೇಶಿಸಿದೆ.
ಬರಪೀಡಿತ ತಾಲೂಕುಗಳ ಪೈಕಿ ಗುರುವಾರ 152 ತಾಲೂಕುಗಳ ಪ್ರತಿ ಸ್ಥಳೀಯ ಸಂಸ್ಥೆಗೆ 15 ಲಕ್ಷ ರು.ಗಳಿಂದ 25 ಲಕ್ಷ ರು.ವರೆಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಿಂದ ಬೋರ್ವೆಲ್ ರಿಪೇರಿ, ಟ್ಯಾಂಕರ್ ಮೂಲಕ ನೀರು ಪೂರೈಕೆಯಂತಹ ಕ್ರಮಗಳ ಮೂಲಕ ನೀರಿನ ಅಭಾವ ನೀಗಿಸಬೇಕು.
ಅನುದಾನ ಬಳಕೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಟಾಸ್ಕ್ಫೋರ್ಸ್ ರಚಿಸಿಕೊಂಡು, ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯವಿರುವ ಕಾಮಗಾರಿಗಳ ಕ್ರಿಯಾಯೋಜನೆ ರಚಿಸಿ ಜಿಲ್ಲಾಧಿಕಾರಿಗಳಿಂದ ಅನುಮೋದನೆ ಪಡೆದ ತುರ್ತಾಗಿ ಅನುಷ್ಠಾನಗೊಳಿಸಬೇಕು. ಕಾಮಗಾರಿಗಳನ್ನು ಜಿಲ್ಲಾ ನಗರಾಭಿವೃದ್ಧಿ ಕೋಶದ ಮೂಲಕ ನಿರ್ವಹಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.