
ಬೆಂಗಳೂರು (ಜು.12): ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆಗಳು ಅರ್ಧಕ್ಕರ್ಧ ಕಡಿಮೆಯಾಗಿದ್ದು, ಸೋಮವಾರ 673 ಹೊಸ ಪ್ರಕರಣಗಳು ವರದಿಯಾಗಿದೆ. 852 ಮಂದಿ ಗುಣಮುಖರಾಗಿದ್ದಾರೆ. ಗದಗದಲ್ಲಿ 58 ವರ್ಷದ ಮಹಿಳೆಯೊಬ್ಬರು ಸೋಂಕಿನಿಂದ ಸಾವಿಗೀಡಾಗಿದ್ದಾರೆ. ಸದ್ಯ 6,718 ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. 13 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ 4.9 ರಷ್ಟುದಾಖಲಾಗಿದೆ. ಭಾನುವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 10 ಸಾವಿರ ಕಡಿಮೆ ನಡೆದಿವೆ.
ಹೀಗಾಗಿ, ಹೊಸ ಪ್ರಕರಣಗಳು 269 ಕಡಿಮೆಯಾಗಿವೆ. ಕಳೆದ ವಾರದಿಂದ ಸರಾಸರಿ 25 ಸಾವಿರಕ್ಕೂ ಅಧಿಕ ಸೋಂಕು ಪರೀಕ್ಷೆಗಳು ನಡೆಯುತ್ತಿದ್ದವು. ಧಿಡೀರ್ ಪರೀಕ್ಷೆಗಳು ಅರ್ಧದಷ್ಟುತಗ್ಗಿವೆ. ಹೀಗಾಗಿ, ಒಂದು ಸಾವಿರ ಆಸುಪಾಸಿನಲ್ಲಿ ಇದ್ದ ಹೊಸ ಪ್ರಕರಣಗಳು 600ಕ್ಕೆ ತಗ್ಗಿವೆ. ಸದ್ಯ ಸಕ್ರಿಯ ಸೋಂಕಿತರ ಪೈಕಿ 99 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದ 6,619 ಮಂದಿ ಮನೆಯಲ್ಲಿಯೇ ಆರೈಕೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯ ಕೊರೋನಾ ವರದಿಯಲ್ಲಿ ತಿಳಿಸಿದೆ.
ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್!
ಎಲ್ಲಿ ಎಷ್ಟು ಮಂದಿಗೆ ಸೋಂಕು?: ಹೊಸ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 621 ಪತ್ತೆಯಾಗಿವೆ. ಉಳಿದಂತೆ ಮೈಸೂರು 10, ಬಳ್ಳಾರಿ, ಧಾರವಾಡ ಹಾಗೂ ಬೆಳಗಾವಿ ತಲಾ ನಾಲ್ವರು, ಚಿಕ್ಕಮಗಳೂರು, ದಕ್ಷಿಣಕನ್ನಡ ಕಲಬುರಗಿ ತಲಾ 3, ಕೊಡಗು, ರಾಯಚೂರು, ಶಿವಮೊಗ್ಗ, ತುಮಕೂರು ತಲಾ ಇಬ್ಬರು, ಏಳು ಜಿಲ್ಲೆಗಳಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿದೆ. 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗಿಲ್ಲ.
ಮಾತನಾಡುವವನಿಗಿಂತ ಮೌನಿಗೆ ಕೋವಿಡ್ ಸಾಧ್ಯತೆ: ಇಬ್ಬರು ವ್ಯಕ್ತಿಗಳು ಮಾಸ್ಕ್ ಇಲ್ಲದೆ ಮಾತುಕತೆಯಲ್ಲಿ ತೊಡಗಿದ್ದಾಗ ಒಬ್ಬ ವ್ಯಕ್ತಿ ಮಾತ್ರ ಮಾತನಾಡುತ್ತಿದ್ದು, ಮತ್ತೊಬ್ಬ ವ್ಯಕ್ತಿ ಮೌನವಾಗಿದ್ದರೆ ಮೌನವಾಗಿರುವ ವ್ಯಕ್ತಿಗೆ ಕೊರೋನಾ ಹರಡುವ ಸಾಧ್ಯತೆ ಹೆಚ್ಚಿರುತ್ತದೆ. ಇಬ್ಬರೂ ವ್ಯಕ್ತಿಗಳು ಮಾತನಾಡುತ್ತಿದ್ದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂಬ ಹೊಸ ವಿಷಯವನ್ನು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ವಿಜ್ಞಾನಿಗಳು ಸಂಶೋಧನೆಯಲ್ಲಿ ಕಂಡುಕೊಂಡಿದ್ದಾರೆ.
Booster Dose: 3ನೇ ಡೋಸ್ ಪಡೆದಿದ್ದು ಬರೀ 15% ಜನ!
ನಾಲ್ಕು ಅಡಿ ಅಂತರದಲ್ಲಿ ನಿಂತು ವ್ಯಕ್ತಿಗಳು ಪರಸ್ಪರ ಮಾತನಾಡುತ್ತಿದ್ದಾಗ ಎಂಜಲಿನ ಸಣ್ಣ ಹನಿ (ಡ್ರಾಪ್ಲೆಟ್) ಹರಡುವ ರೀತಿ ಬಗ್ಗೆ ವಿಶೇಷ ಅಧ್ಯಯನ ನಡೆಸಿದ್ದಾರೆ. ಈ ಅಧ್ಯಯನದ ಪ್ರಕಾರ ಇಬ್ಬರು ವ್ಯಕ್ತಿಗಳು ಮಾತನಾಡುವಾಗ ಪರಸ್ಪರ ಕಣ್ಣಿನ ಸಂಪರ್ಕ ಇಟ್ಟುಕೊಂಡೆ ತಲೆಯನ್ನು ಪರಸ್ಪರ ವಿರುದ್ಧ ದಿಕ್ಕಿಗೆ 9 ಡಿಗ್ರಿ ವಾಲಿಸಿ ಮಾತನಾಡಿದರೆ ಸೋಂಕು ಹರಡುವ ಸಾಧ್ಯತೆ ಕಡಿಮೆ ಎಂದಿದ್ದಾರೆ. ಕೊರೋನಾ ಸೋಂಕು ಗಾಳಿಯ ಮೂಲಕ ಹರಡುತ್ತದೆ ಎಂಬ ಕಾರಣಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ