
ನವದೆಹಲಿ (ಸೆ.28): ಮುಸ್ಲಿಮರೆಲ್ಲಾ ಕೆಟ್ಟವರಲ್ಲ. ಆದರೆ, ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರಲ್ಲಿ 99% ಮಂದಿ ಅದೇ ಸಮುದಾಯದವರು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮುಸ್ಲಿಮರಲ್ಲೂ ದೇಶದ ಬಗ್ಗೆ ಅಭಿಮಾನ ಹೊಂದಿದವರಿದ್ದಾರೆ. ಆದರೆ, ಹೀಗೆ ತಪ್ಪು ಮಾಡುವವರು ಸಮುದಾಯದ ಹೆಸರಿನಲ್ಲಿ ಆಶ್ರಯ ಪಡೆಯುವುದು ಸರಿಯಲ್ಲ ಎಂದು ಹೇಳಿದರು. ರಾಜ್ಯದಲ್ಲಿ ನಡೆದ ಪಿಎಫ್ಐ ಮೇಲಿನ ದಾಳಿ ಕುರಿತು ಪ್ರತಿಕ್ರಿಯಿಸಿ, ಭಯೋತ್ಪಾದಕ ಚಟುವಟಿಕೆಗಳಲ್ಲಿ ನೇರವಾಗಿ ಕೆಲಸ ಮಾಡಲು ಸಾಧ್ಯವಾಗದ ಪಾಕಿಸ್ತಾನ, ಪಿಎಫ್ಐನ್ನು ಈ ದುಷ್ಕೃತ್ಯಕ್ಕಾಗಿ ಬಳಸಿಕೊಳ್ಳುತ್ತಿದೆ. ಹೀಗಾಗಿ, ರಾಷ್ಟ್ರದ ಹಿತದೃಷ್ಟಿಯಿಂದ ಈ ದಾಳಿ ನಡೆದಿದೆ ಎಂದು ಹೇಳಿದರು.
ಇದೇ ವೇಳೆ, ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದ ಸಚಿವರು, ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಕಾಂಗ್ರೆಸ್, ಈವರೆಗೂ ಈ ಕುರಿತು ಯಾವುದೇ ದೂರನ್ನು ದಾಖಲಿಸಿಲ್ಲ. ಎಸಿಬಿ ಅಥವಾ ಲೋಕಾಯುಕ್ತಕ್ಕೆ ದೂರು ನೀಡಬಹುದಿತ್ತು. ಆದರೆ, ಯಾವ ದೂರನ್ನೂ ದಾಖಲಿಸಿಲ್ಲ. ಕಾಂಗ್ರೆಸ್ಗೆ ಈಗ ಹಾವಾಡಿಸುವ ಪರಿಸ್ಥಿತಿ ಬಂದಿದೆ. ಬುಟ್ಟಿಯಲ್ಲಿ ಹಾವಿದೆ ಎಂದು ಬೆದರಿಸುವ ಯತ್ನ ಮಾಡುತ್ತಿದೆ. ಆದರೆ, ಈವರೆಗೂ ಹಾವನ್ನು ತೋರಿಸುವ ಕೆಲಸ ಮಾಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಶಾಲೆಗಳಲ್ಲಿ ಡಿಸೆಂಬರ್ನಿಂದ ಭಗವದ್ಗೀತೆ ಪಾಠ: ಸಚಿವ ನಾಗೇಶ್
ಶಿಕ್ಷಕರ ನೇಮಕ ಅಕ್ರಮದಲ್ಲಿ ಶೀಘ್ರ ಇನ್ನಷ್ಟು ಬಂಧನ: ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದಿದ್ದ ಸಹ ಶಿಕ್ಷಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಈವರೆಗೂ 16 ಮಂದಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಮತ್ತಷ್ಟು ಆರೋಪಿಗಳು ಭಾಗಿಯಾಗಿರುವ ಶಂಕೆ ಇದ್ದು ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಕಳೆದ ಮೂರು ತಿಂಗಳ ಹಿಂದೆ ನಮಗೆ ಈ ವಿಚಾರ ಗೊತ್ತಾದ ತಕ್ಷಣ ಶಿಕ್ಷಣ ಇಲಾಖೆಯ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕರ ನೇತೃತ್ವದಲ್ಲಿ ತನಿಖೆ ನಡೆಸಿದ್ದಾಗ ಅಕ್ರಮ ನೇಮಕಾತಿ ಆಗಿರುವ ಬಗ್ಗೆ ಗೊತ್ತಾಯಿತು.
2030ರೊಳಗೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಸಾಧ್ಯತೆ: ಬಿ.ಸಿ. ನಾಗೇಶ್
2015-16 ರಲ್ಲಿ ಅಹರ್ತತೆ ಇಲ್ಲದವರು ಸಹ ಶಿಕ್ಷಕರ ಹುದ್ದೆಗೆ ನೇಮಕವಾಗಿರುವುದು ಕಂಡು ಬಂತು. ನಂತರ ಇದನ್ನು ಸಿಐಡಿ ತನಿಖೆಗೆ ಕೊಡಲಾಯಿತು. ಸಿಐಡಿ ಅಧಿಕಾರಿಗಳು 16 ಮಂದಿಯನ್ನು ಬಂಧಿಸಿದ್ದಾರೆ. ಆಯುಕ್ತರ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಥಮ ದರ್ಜೆ ಸಹಾಯಕ ಪ್ರಸಾದ್ನನ್ನು ಬಂಧಿಸಿದ್ದಾರೆ ಎಂದರು. ಅಕ್ರಮವಾಗಿ ನೇಮಕವಾದವರೂ ಇನ್ನೂ ಅನೇಕರು ಇರಬಹುದು ಎಂದು ಅನುಮಾನವನ್ನು ಸಿಐಡಿ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಶೀಘ್ರದಲ್ಲಿ ಮತ್ತಷ್ಟುಮಂದಿಯನ್ನು ಬಂಧಿಸಲಿದ್ದಾರೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ