
ಕುಂದಾಪುರ[ಡಿ.23]: ಸೌದಿ ಅರಸನ ವಿರುದ್ಧ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ವೊಂದನ್ನು ಶೇರ್ ಮಾಡಿದ ಆರೋಪದ ಮೇಲೆ ಉಡುಪಿ ಜಿಲ್ಲೆಯ ಕೋಟೇಶ್ವರ ಮೂಲದ ಯುವಕನೋರ್ವನನ್ನು ಸೌದಿ ಪೊಲೀಸರು ವಿಚಾರಣೆಗೆ ಕರೆದೊಯ್ದಿರುವ ಘಟನೆ ಸೌದಿಅರೇಬಿಯಾದಲ್ಲಿ ನಡೆದಿದೆ. ಇಲ್ಲಿನ ಕೋಟೇಶ್ವರ ಸಮೀಪದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.
ಸೌದಿ ಅರೇಬಿಯಾದ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿರುವ ಹರೀಶ್ ಬಂಗೇರ ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಗೋಲಿಬಾರ್ ಹತ್ಯೆಯನ್ನು ‘‘ಹರೀಶ್ ಬಂಗೇರ ಎಸ್’’ ಎನ್ನುವ ತಮ್ಮ ಫೇಸ್ಬುಕ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದರು. ಕೂಡಲೇ ಅಲ್ಲಿ ಕೆಲಸ ಮಾಡುವ ಕರಾವಳಿಯ ಯುವಕರು ಹರೀಶ್ ಕೆಲಸ ನಿರ್ವಹಿಸುತ್ತಿರುವ ಕಚೇರಿಗೆ ತೆರಳಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ. ಅದಾದ ಬಳಿಕ ಘಟನೆಯ ಬಗ್ಗೆ ಹರೀಶ್ ಕ್ಷಮೆ ಕೇಳಿ ವೀಡಿಯೊವೊಂದನ್ನು ಅಪ್ಲೋಡ್ ಮಾಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟುವೈರಲ್ ಕೂಡ ಆಗಿತ್ತು.
ನಕಲಿ ಖಾತೆ ಸೃಷ್ಟಿ: ಆರೋಪ
ಇದೀಗ ಕಿಡಿಗೇಡಿಗಳು ಹರೀಶ್ ಬಂಗೇರ ಅವರ ಹೆಸರಿನಲ್ಲಿ ‘ಹರೀಶ್ ಬಂಗೇರ’ ಎಂಬ ನಕಲಿ ಖಾತೆಯನ್ನು ಸೃಷ್ಟಿಸಿ ಆ ಖಾತೆಯಲ್ಲಿ ಹಿಂದುತ್ವದ ಬಗೆಗಿನ ಬರಹಗಳು ಹಾಗೂ ಸೌದಿ ಅರಸ ಮತ್ತು ಮೆಕ್ಕಾದ ವಿರುದ್ಧ ಅವಹೇಳನಕಾರಿ ಪೋಸ್ಟ್ಗಳನ್ನು ಅಪ್ಲೋಡ್ ಮಾಡಿ ಹರಿಯಬಿಟ್ಟಿದ್ದಾರೆ ಎಂದು ಹರೀಶ್ ಸ್ನೇಹ ವಲಯ ಆರೋಪಿಸಿದೆ.
ಸೌದಿ ಅರಸನನ್ನು ನಿಂದಿಸಿದ ಆರೋಪದ ಮೇಲೆ ಇದೀಗ ಹರೀಶ್ ಬಂಗೇರ ಅವರನ್ನು ಸೌದಿ ಪೊಲೀಸರು ವಿಚಾರಣೆಗೆ ಕರೆದೊಯ್ದಿದ್ದಾರೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ