
ಬೆಳಗಾವಿ (ಮೇ 21): ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಬೆಂಗಳೂರಿನ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಅಲಿಯಾಸ್ ನಾಗರಾಜ್, ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾನೆ. ಸಿದ್ದಾಪುರದ ಮಹೇಶ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಈತನಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಶನಿವಾರ ಜೈಲಿನಿಂದ ಹೊರಬಂದಿದ್ದಾನೆ.
ಬೆಂಗಳೂರಿನ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹೇಶ್ ಕೊಲೆ ಪ್ರಕರಣದಲ್ಲಿ ವಿಲ್ಸನ್ ಗಾರ್ಡನ್ ನಾಗಾ ಪ್ರಮುಖ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಈತ, ಅಲ್ಲಿ ನಡೆದ ಕೆಲವು ವಿವಾದಾತ್ಮಕ ಘಟನೆಗಳಿಂದಾಗಿ ಸುದ್ದಿಯಾಗಿದ್ದ.
ವಿಲ್ಸನ್ ಗಾರ್ಡನ್ ನಾಗಾ ರಾಜ್ಯಮಟ್ಟದಲ್ಲಿ ಸುದ್ದಿಯಾಗಿದ್ದು ನಟ ದರ್ಶನ್ ಜೈಲು ಸೇರಿದಾಗ. ಪರಪ್ಪನ ಅಗ್ರಹಾರ ಜೈಲಿನ ಹುಲ್ಲುಹಾಸಿನ ಮೇಲೆ ಕುಳಿತು ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಮತ್ತು ಇತರರು ಆರಾಮವಾಗಿ ಚಹಾ ಕುಡಿಯುತ್ತಾ, ಸಿಗರೇಟ್ ಸೇವಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಜೈಲಿನಲ್ಲಿ ಕೈದಿಗಳಿಗೆ ಸಿಗುತ್ತಿರುವ ರಾಜಾತಿಥ್ಯದ ಬಗ್ಗೆ ಸಾರ್ವಜನಿಕವಾಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ಈ ಘಟನೆಯ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಮತ್ತು ಜೈಲು ಇಲಾಖೆ, ಪ್ರಭಾವಿ ಕೈದಿಗಳನ್ನು ರಾಜ್ಯದ ವಿವಿಧ ಜೈಲುಗಳಿಗೆ ಶಿಫ್ಟ್ ಮಾಡಿತ್ತು.
ದರ್ಶನ್ ಜೊತೆಗಿನ ಫೋಟೋ ವಿವಾದದ ನಂತರ, 2024ರ ಜುಲೈ ತಿಂಗಳಿನಲ್ಲಿ ವಿಲ್ಸನ್ ಗಾರ್ಡನ್ ನಾಗನನ್ನು ಬೆಂಗಳೂರಿನಿಂದ ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿತ್ತು. ಅಂದಿನಿಂದ ಈತ ಹಿಂಡಲಗಾ ಜೈಲಿನ ಹೈ ಸೆಕ್ಯೂರಿಟಿ ವಿಭಾಗದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ.
ಕಳೆದ ಕೆಲವು ದಿನಗಳಿಂದ ವಿಲ್ಸನ್ ಗಾರ್ಡನ್ ನಾಗ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕಳೆದೊಂದು ವಾರದಿಂದ ಬೆಳಗಾವಿಯ ಬಿಮ್ಸ್ (BIMS) ಆಸ್ಪತ್ರೆಯಲ್ಲಿ ಆತನಿಗೆ ಪೊಲೀಸ್ ಭದ್ರತೆಯೊಂದಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಇದೇ ಅವಧಿಯಲ್ಲಿ ಆತನ ಪರ ವಕೀಲರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಿದ ನಂತರ, ಶನಿವಾರ ಅಧಿಕೃತವಾಗಿ ಬಿಡುಗಡೆ ಪ್ರಕ್ರಿಯೆ ಪೂರ್ಣಗೊಂಡಿದೆ.
ಬಿಮ್ಸ್ ಆಸ್ಪತ್ರೆಯಿಂದಲೇ ಬಿಡುಗಡೆಯಾದ ನಾಗಾ, ಅಲ್ಲಿಂದ ನೇರವಾಗಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ದಾನೆ ಎಂದು ತಿಳಿದುಬಂದಿದೆ. ಒಟ್ಟಾರೆಯಾಗಿ, ಜೈಲಿನೊಳಗೆ ದರ್ಶನ್ ಜೊತೆ ಮಜಾ ಮಾಡಿದ್ದ ರೌಡಿಶೀಟರ್ ಈಗ ಮತ್ತೆ ಹೊರಜಗತ್ತಿಗೆ ಬಂದಿರುವುದು ಪೊಲೀಸ್ ವಲಯದಲ್ಲಿ ಕುತೂಹಲ ಮೂಡಿಸಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ನಟ ದರ್ಶನ್, ತಮ್ಮ ಕೇಸಿನ ವಿಚಾರಣೆ ಬೇಗ ಬೇಗ ನಡೆಸುತ್ತಿಲ್ಲ. ಹೀಗಾಗಿ, ಜಾಮೀನು ನೀಡುವಂತೆ ಸುಪ್ರೀಂ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ, ಸುಪ್ರೀಂ ಕೋರ್ಟ್ ಜಾಮೀನು ನೀಡದೇ ಇನ್ನು ಒಂದು ವರ್ಷದೊಳಗೆ ಅವರ ಕೇಸಿನ ವಿಚಾರಣೆ ಮುಕ್ತಾಯಗೊಳಿಸಿ ಆದೇಶ ನೀಡುವಂತೆ ಕೆಳ ಹಂತದ ನ್ಯಾಯಾಲಯಗಳಿಗೆ ಆದೇಶವನ್ನು ನೀಡಿದೆ. ಅಲ್ಲಿವರೆಗೂ ಜಾಮೀನು ಕೇಳಿಕೊಂಡು ಬರುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಹೀಗಾಗಿ, ನಟ ದರ್ಶನ್ ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲಿಯೇ ಕಾಲ ಕಳೆಯುವುದು ಅನಿವಾರ್ಯ ಆಗಿದೆ.
ಇತ್ತೀಚೆಗೆ ನಟ ದರ್ಶನ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ