ಅಂಗನವಾಡಿ ಶಿಕ್ಷಣ ಅವಧಿ 3 ತಾಸು ಕಡಿತ: ಸರ್ಕಾರದಿಂದ ಆದೇಶ

By Kannadaprabha NewsFirst Published Feb 1, 2023, 9:36 AM IST
Highlights

ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ.

ಬೆಂಗಳೂರು (ಫೆ.01): ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಶಿಕ್ಷಣ ನೀಡುವ ಅವಧಿಯನ್ನು ಸೀಮಿತಗೊಳಿಸಿ ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. ಹಿಂದೆ 2011ರಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ನೀಡುವ ಶಿಕ್ಷಣ ಅವಧಿಯನ್ನು ಬೆಳಗ್ಗೆ 9.30ರಿಂದ ಸಂಜೆ 4ಗಂಟೆವರೆಗೆ ನಡೆಸುವಂತೆ ಆದೇಶಿಸಲಾಗಿತ್ತು. 

ಇದನ್ನು ಬದಲಿಸಿ ಶಿಕ್ಷಣ ಅವಧಿಯನ್ನು ಬೆಳಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ನಡೆಸಲು ಸಮಯ ನಿಗದಿ ಮಾಡಲಾಗಿದೆ ಎಂದು ಸುತ್ತೋಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ. ಶಿಕ್ಷಣ ನೀಡುವ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳಿಗೆ ಪೋಷಕರು, ಸಾರ್ವಜನಿಕರು, ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಭೇಟಿಯಾಗಬೇಕು. 

ಡೀಸೆಲ್‌ ಸಬ್ಸಿಡಿ ನೀಡುವ ರೈತ ಶಕ್ತಿ ಯೋಜನೆಗೆ ಸಿಎಂ ಬೊಮ್ಮಾಯಿ ಚಾಲನೆ

ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಫಲಾನುಭವಿಗಳು ಮತ್ತು ಭಾಗ್ಯಲಕ್ಷ್ಮೇ ಯೋಜನೆಯ ಫಲಾನುಭವಿಯ ಪೋಷಕರು ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾದರೆ ಅಥವಾ ಚರ್ಚೆ ನಡೆಸಬೇಕಾದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಬೇಕು. ಈ ಸೂಚನೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಸಂಬಂಧಪಟ್ಟಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಮೇಲ್ವಿಚಾರಕಿಯರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ಬೇಡಿಕೆ ಈಡೇರಿಕೆ: ಅಂಗನವಾಡಿ ಕಾರ್ಯಕರ್ತೆಯರು ಸಹ ಶಾಲಾ ಪೂರ್ವ ಶಿಕ್ಷಣ ಕಲಿಕೆಯ ಅವಧಿಯನ್ನು ಹಾಲಿ ಬೆಳಗ್ಗೆ 9.30ರಿಂದ ಸಂಜೆ 4 ರವರೆಗೆ ಇರುವುದನ್ನು ಕಡಿಮೆ ಮಾಡಬೇಕು ಎಂದು ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಶಿಕ್ಷಣದ ಅವಧಿಯನ್ನು ಕಡಿಮೆ ಮಾಡಿದೆ.

ತಿದ್ದುಪಡಿ ಆದೇಶ: ಈ ನಡುವೆ, ಮಿನಿ ಅಂಗನವಾಡಿ ಕಾರ್ಯಕತೆಯರನ್ನು ಅಂಗನವಾಡಿ ಕಾರ್ಯಕರ್ತೆಯರನ್ನಾಗಿ ಬಡ್ತಿ ನೀಡುವ ವಿಚಾರದಲ್ಲಿ ಮಾಡಲಾಗಿದ್ದ ಆದೇಶಕ್ಕೆ ತಿದ್ದುಪಡಿ ಮಾಡಿ ಈ ಮೊದಲಿನಂತೆ ಅನುಸರಿಸುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಆದೇಶಿಸಿದೆ.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎಲ್‌ಕೆಜಿಯಿಂದ ಪಿಯುಸಿವರೆಗೆ ಫ್ರೀ ಶಿಕ್ಷಣ: ಎಚ್‌ಡಿಕೆ ಭರವಸೆ

ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಪಿಯುಸಿ ಉತ್ತೀರ್ಣ ಹೊಂದಿದ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊದಲ ಆದ್ಯತೆ ನೀಡಬೇಕು ಎಂಬುದಾಗಿ ಆದೇಶ ಹೊರಡಿಸಲಾಗಿದೆ. ಇದನ್ನು ಮಾರ್ಪಾಡಿಸಿ, ಆಂಗನವಾಡಿ ಕಾರ್ಯಕರ್ತೆ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಉತ್ತೀರ್ಣ ಹೊಂದಿದ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಆದ್ಯತೆ ನೀಡಲಾಗುವುದು ಎಂದು ತಿದ್ದುಪಡಿ ಮಾಡಿ ಆದೇಶಿಸಲಾಗಿದೆ. ಇದೇ ವೇಳೆ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ಇದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಏಳನೇ ತರಗತಿ ಎಂದು ಮಾರ್ಪಾಡಿಸಲಾಗಿದೆ ಎಂದು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ತಿಳಿಸಿದೆ.

click me!