
ಬೆಂಗಳೂರು (ಅ.06): ನಟಿ, ಮಾಜಿ ಸಂಸದೆ ರಮ್ಯಾಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಹಾಗೂ ಅಶ್ಲೀಲ ಸಂದೇಶದ ಪೋಸ್ಟ್ ಮಾಡಿದ ಪ್ರಕರಣ ಸಂಬಂಧ ಬಂಧಿಸಲಾಗಿರುವ 12 ಮಂದಿ ಆರೋಪಿಗಳ ಮೊಬೈಲ್ಗಳನ್ನು ರಿಟ್ರೀವ್ ಮಾಡಲು ಸಿಸಿಬಿ ಪೊಲೀಸರು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ಎಸ್ಎಲ್) ರವಾನಿಸಿದ್ದಾರೆ.
ಪ್ರಕರಣ ಸಂಬಂಧ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇದೀಗ ಆರೋಪಿಗಳ ಸಾಮಾಜಿಕ ಜಾಲತಾಣ ಖಾತೆಗಳು, ಕಾಮೆಂಟ್ಗಳು, ಪೋಸ್ಟ್ಗಳನ್ನು ರಿಟ್ರೀವ್ ಮಾಡಲು ಮೊಬೈಲ್ಗಳನ್ನು ಎಫ್ಎಸ್ಎಲ್ಗೆ ಕಳುಹಿಸಿದ್ದಾರೆ. ವಾರದೊಳಗೆ ಎಫ್ಎಸ್ಎಲ್ ವರದಿ ಸಿಸಿಬಿ ಪೊಲೀಸರ ಕೈ ಸೇರುವ ಸಾಧ್ಯತೆಯಿದ್ದು, ಬಳಿಕ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಎರಡು ತಿಂಗಳಿಂದ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿರುವ 12 ಆರೋಪಿಗಳು, ಜಾಮೀನು ಪಡೆಯಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಪೈಕಿ ಒಬ್ಬರಿಗೂ ಜಾಮೀನು ಸಿಕ್ಕಿಲ್ಲ. ಜೈಲುಪಾಲಾಗಿರುವ ತಮ್ಮ ಮಕ್ಕಳನ್ನು ಹೊರ ತರಲು ಪೋಷಕರು ಕಾನೂನು ಹೋರಾಟ ಮುಂದುವರೆಸಿದ್ದಾರೆ.
ಕಳೆದ ಜುಲೈನಲ್ಲಿ ನಟಿ ರಮ್ಯಾ ಅವರು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ನಟ ದರ್ಶನ್ ಅಭಿಮಾನಿಗಳು ಎನ್ನಲಾದ ಕೆಲವರು ನಟಿ ರಮ್ಯಾ ವಿರುದ್ಧ ಅಶ್ಲೀಲ ಹಾಗೂ ಅವಹೇಳನಕಾರಿ ಸಂದೇಶ ಕಳುಹಿಸಿದ್ದರು. ಈ ಸಂಬಂಧ ರಮ್ಯಾ ಅವರು 43 ಅಕೌಂಟ್ಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ದಾಖಲಾದ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ರಾಜ್ಯದ ವಿವಿಧೆಡೆ 12 ಮಂದಿ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ