
ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಪ್ರಮುಖ ನಾಯಕ, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿರುವ ಪ್ರಕರಣ ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಸಂಬಂಧ ಬೆಂಗಳೂರಿನ ಮಹಿಳೆಯೊಬ್ಬರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿರುವುದಾಗಿ ತಿಳಿದುಬಂದಿದೆ.
ಮಹಿಳೆ ನೀಡಿದ ದೂರಿನ ಪ್ರಕಾರ, ಸ್ವಾಮೀಜಿ ತಮ್ಮ ಮೇಲೆ ಅಸಭ್ಯ ವರ್ತನೆ ತೋರಿದ್ದು, ಬೆತ್ತಲೆ ವಿಡಿಯೋ ಕಾಲ್ ಮಾಡುವ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಆರೋಪಗಳು ಹೊರಬಿದ್ದ ತಕ್ಷಣವೇ ಪ್ರಕರಣಕ್ಕೆ ಹೊಸ ತಿರುವು ದೊರೆತಿದ್ದು, ಸ್ವಾಮೀಜಿ ಕಡೆಯಿಂದಲೂ ಪ್ರತಿದೂರು ದಾಖಲಾಗಿರುವುದು ಗಮನಾರ್ಹ ಸಂಗತಿಯಾಗಿದೆ.
ಇನ್ನೊಂದೆಡೆ, ಜಯಮೃತ್ಯುಂಜಯ ಸ್ವಾಮೀಜಿ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ವಿರುದ್ಧ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸ್ವಾಮೀಜಿ ತಮ್ಮ ದೂರಿನಲ್ಲಿ, ಸಂಬಂಧಿತ ಮಹಿಳೆ ತಾನು ಅನಾಥಾಶ್ರಮ ನಡೆಸುತ್ತಿರುವುದಾಗಿ ಹೇಳಿ ಪರಿಚಯ ಮಾಡಿಕೊಂಡಿದ್ದಳು ಎಂದು ತಿಳಿಸಿದ್ದಾರೆ.
ಪರಿಚಯವಾದ ನಂತರ ಆಕೆ ತನ್ನ ಬಳಿ ಹಣಕಾಸಿನ ನೆರವು ಕೇಳುತ್ತಾ ಬಂದಿದ್ದು, ಕ್ರಮೇಣ ಹಣಕ್ಕಾಗಿ ಒತ್ತಡ ಹೇರುತ್ತಿದ್ದಳು ಎಂದು ಸ್ವಾಮೀಜಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ತಮ್ಮ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪಗಳು ಸಂಪೂರ್ಣ ಸುಳ್ಳು ಎಂದು ತಳ್ಳಿ ಹಾಕಿರುವ ಅವರು, ಕೆಲವು ರಾಜಕೀಯ ವ್ಯಕ್ತಿಗಳ ಪ್ರಚೋದನೆಯಿಂದ ತಮ್ಮ ತೇಜೋವಧೆ ಮಾಡಲು ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಹಣ ನೀಡಲು ನಿರಾಕರಿಸಿದ ಬಳಿಕ, ಆ ಮಹಿಳೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ಬ್ಲಾಕ್ಮೇಲ್ ಮಾಡಲು ಯತ್ನಿಸಿದ್ದಾಳೆ ಎಂದು ಸ್ವಾಮೀಜಿ ಹೇಳಿದ್ದಾರೆ. ಅಲ್ಲದೆ, ತಾವು ಮಠಕ್ಕೆ ತೆರಳುತ್ತಿದ್ದ ವೇಳೆ ತಮ್ಮ ಕಾರನ್ನು ಅಡ್ಡಗಟ್ಟಿ ಹಣದ ಬೇಡಿಕೆ ಇಟ್ಟಿದ್ದಳು ಹಾಗೂ ಹಣ ನೀಡದಿದ್ದಕ್ಕೆ ಹಲ್ಲೆ ನಡೆಸಿದ್ದಾಳೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಮೂರು ಕೋಟಿ ರೂಪಾಯಿ ಹಣ ನೀಡದಿದ್ದರೆ ತಮ್ಮ ವಿರುದ್ಧ ಅಪಪ್ರಚಾರ ಮಾಡುವುದಾಗಿ ಮಹಿಳೆ ಬೆದರಿಕೆ ಹಾಕಿದ್ದಾಳೆ ಎಂದು ಸ್ವಾಮೀಜಿ ದೂರಿನಲ್ಲಿ ತಿಳಿಸಿದ್ದಾರೆ. ಒಟ್ಟಾರೆ, ಪರಸ್ಪರ ವಿರುದ್ಧ ಆರೋಪ-ಪ್ರತ್ಯಾರೋಪಗಳಿಂದ ಈ ಪ್ರಕರಣ ಗಂಭೀರ ಸ್ವರೂಪ ಪಡೆದಿದ್ದು, ಸತ್ಯಾಸತ್ಯತೆ ತಿಳಿಯಲು ಸಮಗ್ರ ತನಿಖೆ ಅಗತ್ಯವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ