ಬೆಂಗಳೂರು: 'ಮುಂದಿನ ವಾರದಿಂದ ನಿತ್ಯ 20000 ಕೊರೋನಾ ಟೆಸ್ಟ್‌'

By Kannadaprabha NewsFirst Published Aug 5, 2020, 11:33 AM IST
Highlights

ಬೆಂಗಳೂರಿನಲ್ಲಿ ವಾರ್ಡ್‌ ಮತ್ತು ಬೂತ್‌ ಮಟ್ಟದ ಸಮಿತಿಗಳು ಆಯಾ ವಾರ್ಡ್‌ ವ್ಯಾಪ್ತಿಯಲ್ಲಿ ಕನಿಷ್ಠ 10 ದಿನಕ್ಕೆ ಒಂದು ಬಾರಿ ವಾರ್ಡ್‌ನಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸಬೇಕು| ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಗುರುತಿಸಿ ಅವರಿಗೆ ಸೋಂಕು ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಬೇಕು: ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌|

ಬೆಂಗಳೂರು(ಆ.05): ನಗರದಲ್ಲಿ ಕೊರೋನಾ ಸೋಂಕು ನಿಯಂತ್ರಣ ಮತ್ತು ಸೋಂಕಿನಿಂದ ಮೃತ ಪಡುತ್ತಿರುವವ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಸೋಂಕು ಪರೀಕ್ಷೆ ಪ್ರಮಾಣವನ್ನು 20 ಸಾವಿರಕ್ಕೆ (ದಿನಕ್ಕೆ) ಏರಿಕೆ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದ್ದಾರೆ. 

ಮಂಗಳವಾರ ಬಿಬಿಎಂಪಿ ಮಾಸಿಕ ಸಭೆಯಲ್ಲಿ ಮಾತನಾಡಿದ ಆಯುಕ್ತರು, ನಗರದ 141 ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ 70 ಮೊಬೈಲ್‌ ಘಟಕಗಳಲ್ಲಿ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ಹಾಗೂ ಆರ್‌ಟಿಪಿಸಿಆರ್‌ ಪರೀಕ್ಷೆಯಡಿ ಸುಮಾರು 6 ಸಾವಿರ ಮಂದಿ, ಖಾಸಗಿ ಆಸ್ಪತ್ರೆಗಳು ಸುಮಾರು 4 ಸಾವಿರ ಒಟ್ಟು ದಿನಕ್ಕೆ ನಗರದಲ್ಲಿ 10 ಸಾವಿರಕ್ಕೂ ಅಧಿಕ ಮಂದಿಯನ್ನು ಕೊರೋನಾ ಸೋಂಕು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದರು.

ಬೆಂಗಳೂರಿಗೆ 1 ಲಕ್ಷ ರ‍್ಯಾಪಿಡ್ ಆ್ಯಂಟಿಜೆನ್‌ ಕಿಟ್‌

ಸೋಂಕು ನಿಯಂತ್ರಣ ಮತ್ತು ಸೋಂಕಿನಿಂದ ಮೃತ ಸಂಖ್ಯೆ ಕಡಿಮೆ ಮಾಡುವ ಉದ್ದೇಶದಿಂದ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕಾಗಿದೆ. ಮುಂದಿನ ವಾರದಿಂದ ನಗರದಲ್ಲಿ ದಿನಕ್ಕೆ 20 ಸಾವಿರ ಮಂದಿಯನ್ನು ಸೋಂಕು ಪರೀಕ್ಷೆಗೆ ಒಳಪಡಿಸಲಾಗುವುದು. ಇದರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗಲಿದೆ. ಅದಕ್ಕೆ ಭಯ ಮತ್ತು ಆತಂಕ ಪಡಬೇಕಾಗಿಲ್ಲ. ಎಷ್ಟುಬೇಗ ಸೋಂಕಿತರ ಪತ್ತೆ ಮಾಡಿ ಚಿಕಿತ್ಸೆ ನೀಡುವುದು, ಐಸೋಲೇಷನ್‌ ಮಾಡುತ್ತೇವೋ ಅಷ್ಟುತ್ವರಿತವಾಗಿ ಸೋಂಕು ನಿಯಂತ್ರಣಕ್ಕೆ ಬರಲಿದೆ ಎಂದು ವಿವರಿಸಿದರು.

10 ದಿನಕ್ಕೊಮ್ಮೆ ಮನೆ ಮನೆ ಸಮೀಕ್ಷೆ:

ಇನ್ನು ನಗರದಲ್ಲಿ ವಾರ್ಡ್‌ ಮತ್ತು ಬೂತ್‌ ಮಟ್ಟದ ಸಮಿತಿಗಳು ಆಯಾ ವಾರ್ಡ್‌ ವ್ಯಾಪ್ತಿಯಲ್ಲಿ ಕನಿಷ್ಠ 10 ದಿನಕ್ಕೆ ಒಂದು ಬಾರಿ ವಾರ್ಡ್‌ನಲ್ಲಿ ಮನೆ ಮನೆ ಆರೋಗ್ಯ ಸಮೀಕ್ಷೆ ನಡೆಸಬೇಕು. ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಆರೋಗ್ಯ ಸಮಸ್ಯೆ ಎದುರಿಸುತ್ತಿರುವವರನ್ನು ಗುರುತಿಸಿ ಅವರಿಗೆ ಸೋಂಕು ಪರೀಕ್ಷೆ ಮಾಡಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡಬೇಕು. ಹೀಗೆ ಮಾಡುವುದರಿಂದ ಸಾವಿನ ಸಂಖ್ಯೆ ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಸೋಂಕು ಪರೀಕ್ಷೆಯಲ್ಲಿ ಗೊಂದಲ

ಇದೇ ವೇಳೆ ವಿರೋಧ ಪಕ್ಷದ ಸದಸ್ಯರು ರಾರ‍ಯಪಿಡ್‌ ಆ್ಯಂಟಿಜನ್‌ ಸೋಂಕು ಪರೀಕ್ಷೆಯಲ್ಲಿ ಸೋಂಕು ಇಲ್ಲ ಎಂದು ಬರುತ್ತಿದೆ. ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ಸೋಂಕು ದೃಢಪಡುತ್ತಿದೆ. ಇದರಿಂದ ರೋಗಿಗಳಲ್ಲಿ ಗೊಂದಲ ಉಂಟಾಗುತ್ತಿದೆ ಎಂದು ಆರೋಪಿಸಿದರು.

ಈ ಕುರಿತು ಪ್ರಕ್ರಿಯೆ ನೀಡಿದ ಆಯುಕ್ತರು, ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆಯಲ್ಲಿ 10 ರಿಂದ 15 ನಿಮಿಷದಲ್ಲಿ ಫಲಿತಾಂಶ ಲಭ್ಯವಾಗಲಿದೆ. ಸೋಂಕು ಕಂಡು ಬಂದರೆ ತಕ್ಷಣ ರೋಗಿಯ ಪರಿಸ್ಥಿತಿ ನೋಡಿ ಆಸ್ಪತ್ರೆಗೆ, ಹೋಂ ಐಸೋಲೇಷನ್‌ಗೆ ಅಥವಾ ಆರೈಕೆ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗುವುದು. ಒಂದು ವೇಳೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆಯಲ್ಲಿ ಸೋಂಕು ಕಾಣಿಸದಿದ್ದರೂ ಸೋಂಕಿನ ಲಕ್ಷಣ ಕಂಡು ಬಂದರೆ ಆರ್‌ಟಿಪಿಸಿಆರ್‌ ಪರೀಕ್ಷೆಗೆ ಒಳಪಡಿಸಲಾಗುವುದು. ತ್ವರಿತವಾಗಿ ಸೋಂಕಿತರ ಪತ್ತೆಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆ ವೇಳೆ ಯಾವುದೇ ವ್ಯತ್ಸಾಸ ಉಂಟಾಗದಂತೆ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
 

click me!