
ಬೆಂಗಳೂರು (ಏ.28): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಏ.30ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5% ರಷ್ಟು ರಿಯಾಯಿತಿ ನೀಡಲಾಗಿರುತ್ತದೆ. ಆದರೆ, ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಶೇ.5ರಷ್ಟು ರಿಯಾಯಿತಿಯನ್ನು ಒಳಗೊಂಡ ಆಸ್ತಿ ತೆರಿಗೆ ಪಾವತಿ ಅವಧಿಯನ್ನು ಇದೀಗ ಮೇ 31ರವರೆಗೆ ವಿಸ್ತಣೆ ಮಾಡಲಾಗಿದೆ. ಈ ಅವಕಾಶವನ್ನು ಸದುಪಯೋಗ ಮಾಡಿಕೊಂಡು ಹೆಚ್ಚಿನ ಸಾರ್ವಜನಿಕರು ಆಸ್ತಿ ತೆರಿಗೆ ಪಾವತಿ ಮಾಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿದ್ದಾರೆ.
ಬಿಬಿಎಂಪಿ ಕಾಯ್ದೆ 2020 ರ ಪ್ರಕರಣ 144 (8) ರಲ್ಲಿ ಸರ್ಕಾರವು ಪಾಲಿಕೆಯ ಶಿಫಾರಸ್ಸಿನ ಮೇರೆಗೆ ಅಧಿಸೂಚನೆ ಮೂಲಕ ಯಾವುದೇ ಹಣಕಾಸು ವರ್ಷಗಳಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಬಹುದೆಂದು ಉಲ್ಲೇಖಿಸಲಾಗಿರುತ್ತದೆ. ಆದುದರಿಂದ 2025-26 ನೇ ಸಾಲಿನ ಆಸ್ತಿತೆರಿಗೆ ಶೇ.5ರಷ್ಟು ರಿಯಾಯಿತಿ ಅವಧಿಯನ್ನು ಮೇ 31ರವರೆಗೆ ವಿಸ್ತರಿಸಲಾಗಿದೆ. 2025-26 ನೇ ಸಾಲಿನ ಆಸ್ತಿತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡುವ ಸಂಬಂಧ ಬಿಬಿಎಂಪಿ ಆಡಳಿತಗಾರರ ನಡವಳಿಗಳಿಗೆ ಸರ್ಕಾರದ ಆದೇಶ ಕೋರಿ ಪ್ರಸ್ತಾವನೆ ಮಂಡಿಸಲಾಗಿತ್ತು. ಸದರಿ ಪ್ರಸ್ತಾವನೆಗೆ ಸರ್ಕಾರದಿಂದ ಆದೇಶ ನೀಡಿ ಅಧಿಸೂಚನೆ ಹೊರಡಿಸಲಾಗಿದೆ.
ಇದನ್ನೂ ಓದಿ: ಒಟಿಎಸ್ ಕೊಟ್ಟರೂ ಗುರಿ ಮುಟ್ಟದ ಬಿಬಿಎಂಪಿ ತೆರಿಗೆ ಸಂಗ್ರಹ ಗುರಿ
ಸರ್ಕಾರದ ನಗರಭಿವೃದ್ಧಿ ಇಲಾಖೆಯ ಆದೇಶದ ಅನ್ವಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2025-26 ನೇ ಸಾಲಿನ ಆಸ್ತಿತೆರಿಗೆ ರಿಯಾಯಿತಿ ಅವಧಿಯನ್ನು ವಿಸ್ತರಿಸಿ, 2025-26 ನೇ ಸಾಲಿನ ಆಸ್ತಿ ತೆರಿಗೆಯನ್ನು ಪೂರ್ಣ ಪ್ರಮಾಣದಲ್ಲಿ ಮೇ 31ರ ಒಳಗಾಗಿ ಪಾವತಿಸುವ ಎಲ್ಲಾ ತೆರಿಗೆದಾರರಿಗೆ ಆಸ್ತಿತೆರಿಗೆಯ ಮೇಲೆ ಶೇ.5 ರಷ್ಟು ರಿಯಾಯಿತಿ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬೆಂಗಳೂರಿನ ನಿವಾಸಿಗಳ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದರು. 2025- 26 ನೇ ಸಾಲಿನ ಬಿಬಿಎಂಪಿ ಬಜೆಟ್ ಕುರಿರು ಮಾ.24ರಂದು ನಡೆಸಲಾಗಿದ್ದ ಪೂರ್ವಭಾವಿ ಸಬೆಯಲ್ಲಿ ಮಾತನಾಡಿದ್ದ ಅವರು, ಬೆಂಗಳೂರಿನಲ್ಲಿ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ. ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ ಮನೆಗಳನ್ನು ತೆರಿಗೆ ವ್ಯಾಪ್ತಿಗೆ ತರಬೇಕಿದೆ. ಆದ ಕಾರಣ ಒಂದು ಬಾರಿ ಪಾವತಿಗೆ ಅವಕಾಶ (ಓ.ಟಿ.ಎಸ್) ಮಾಡಿಕೊಡಲಾಯಿತು. ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ ಇರಲಿಲ್ಲ. ಜೊತೆಗೆ ಕಂದಾಯ ಬಡಾವಣೆಗಳಲ್ಲಿ ಇರುವ ಖಾಸಗಿ ರಸ್ತೆಗಳನ್ನೂ ಸಹ ಸರ್ಕಾರಿ ರಸ್ತೆಗಳು ಎಂದು ಘೋಷಣೆ ಮಾಡಲಾಗುವುದು ಎಂದರು.
ಇದನ್ನೂ ಓದಿ: ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ 608 ಆಸ್ತಿಗಳ ಹರಾಜು
ಇನ್ನು ಮನೆ ಬಾಗಿಲಿಗೆ ಉಚಿತ ಖಾತೆ: ಮನೆ ಬಾಗಿಲಿಗೆ ತೆರಳಿ ಉಚಿತವಾಗಿ ಖಾತೆ ನೀಡುವ ವಿನೂತನ ವ್ಯವಸ್ಥೆಯನ್ನು ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಜಾರಿಗೆ ತರಲಾಗಿದೆ. ಈ ಕಾರ್ಯಕ್ರಮಕ್ಕೆ ಏಪ್ರಿಲ್ ತಿಂಗಳಿನಿಂದ ಚಾಲನೆ ದೊರೆಯಲಿದೆ. ಪ್ರತಿಯೊಂದು ಆಸ್ತಿ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಅಕಸ್ಮಾತ್ ತಪ್ಪಿಹೋಗಿದ್ದಲ್ಲಿ ಅಂತವರು ತಮ್ಮ ದಾಖಲೆಗಳನ್ನು ಮತ್ತೆ ನೀಡಬಹುದು. ಬೆಂಗಳೂರು ನಗರದ ಪ್ರತಿ ಕ್ಷೇತ್ರದ ಶಾಸಕರ ಬಳಿ ಮಾತನಾಡಿ, ಕ್ಷೇತ್ರವಾರು ಕಾರ್ಯಕ್ರಮ ನಡೆಸಿ ಈ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ತಿಳಿಸಿದ್ದರು. ಆದರೆ, ಈವರೆಗೆ ಈ ಯೋಜನೆ ಜಾರಿಗೆ ಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ