ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿರುವಂತೆ ಅಧಿಕಾರಿಗಳಿಗೆ ಸೂಚನೆ

By Suvarna NewsFirst Published Apr 23, 2021, 10:12 PM IST
Highlights

ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗೆ ಸೂಚನೆ ಕೊಡಲಾಗಿದೆ

ಬೆಂಗಳೂರು, (ಏ.23): ಕೋವಿಡ್-19 ಸೋಂಕಿನ ಪ್ರಮಾಣವನ್ನು ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿರುವ ಸೂಚನೆಯಂತೆ ಬಿಡಿಎ ಅಧ್ಯಕ್ಷರೂ ಆಗಿರುವ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಶುಕ್ರವಾರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಕ್ಷೇತ್ರದ ವ್ಯಾಪ್ತಿಯಲ್ಲಿ ಎಲ್ಲಿಯೂ ಯಾವೊಬ್ಬ ಸೋಂಕಿತನೂ ಸಹ ಚಿಕಿತ್ಸೆ ದೊರೆಯದೇ ನರಳದಂತೆ ಎಚ್ಚರ ವಹಿಸಬೇಕು ಎಂದು ಅಧಿಕಾರಿಗಳು ಸೂಚನೆ ನೀಡಿದರು.

ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ಹಾಸಿಗೆ ಮತ್ತು ಚಿಕಿತ್ಸಾ ಸೌಲಭ್ಯವನ್ನು ಕಲ್ಪಿಸಬೇಕು ಹಾಗೂ ಖಾಸಗಿ ಆಸ್ಪತ್ರೆಗಳು ಸ್ವಯಂಪ್ರೇರಿತವಾಗಿ ಸೋಂಕಿತರಿಗೆ ಸೇವೆಗಳನ್ನು ಒದಗಿಸಬೇಕೆಂದು ಕರೆ ಕೊಟ್ಟರು.

ಸಂಕಷ್ಟಕ್ಕೆ ನೆರವಾದ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್, ಸಚಿವ ಸುಧಾಕರ್ ಧನ್ಯವಾದ! .

.ಒಂದು ವೇಳೆ ಸರ್ಕಾರ ಹೊರಡಿಸಿರುವ ಸೂಚನೆಗಳನ್ನು ಕಡೆಗಣಿಸಿ ಸೋಂಕಿತರಿಗೆ ಚಿಕಿತ್ಸೆಯನ್ನು ನಿರಾಕರಿಸುವಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದ ವಿಶ್ವನಾಥ್ ಅವರು, ಎಲ್ಲಾ ಆಸ್ಪತ್ರೆಗಳು ಮತ್ತು  ಅವುಗಳು ನೀಡುತ್ತಿರುವ ಚಿಕಿತ್ಸಾ ವ್ಯವಸ್ಥೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ಇಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್-19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ರಾಜ್ಯಾದ್ಯಂತ ಕಟ್ಟುನಿಟ್ಟಾಗಿ ಕರ್ಫ್ಯೂವನ್ನು ಜಾರಿಗೊಳಿಸಿದೆ. ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿಯೂ ತೊಂದರೆ ಆಗದ ರೀತಿಯಲ್ಲಿ ಕರ್ಫ್ಯೂವನ್ನು ಜಾರಿಗೊಳಿಸಬೇಕು ಮತ್ತು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಿದರು.

ತುರ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿರಿ
ಇದೇ ವೇಳೆ, ಸೋಂಕಿತರ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಪರಿಸ್ಥಿತಿ ಎದುರಾದರೂ ಅದನ್ನು ಎದುರಿಸಲು ಸನ್ನದ್ಧರಾಗಿರುವಂತೆ ಅಧಿಕಾರಿಗಳಿಗೆ ವಿಶ್ವನಾಥ್ ಸೂಚನೆ ನೀಡಿದರು.

ಪರಿಸ್ಥಿತಿ ತೀರಾ ಸಂಕಷ್ಟಕ್ಕೆ ತಲುಪಿದರೆ ಕಡುಬಡವರಿಗೆ ಆಹಾರ ಪದಾರ್ಥಗಳು ಸೇರಿದಂತೆ ಅಗತ್ಯ ವಸ್ತುಗಳನ್ನು ತಲುಪಿಸಲು ಯೋಜನೆ ರೂಪಿಸಿಟ್ಟುಕೊಂಡಿರಬೇಕು ಎಂದು ಹೇಳಿದರು.

ಮಾನವೀಯತೆ ಇರಲಿ
ಕೋವಿಡ್ -19 ಸೋಂಕಿನಿಂದ ತಮ್ಮವರನ್ನು ಕಳೆದುಕೊಂಡ ದುಃಖದಲ್ಲಿರುವ ಜನರ ಬಳಿ ಶವ ಸುಡಲು ಅಥವಾ ಅಂತ್ಯ ಸಂಸ್ಕಾರ ನಡೆಸಲು ಹಣಕ್ಕೆ ಪೀಡಿಸಬಾರದು. ಕುಟುಂಬ ಸದಸ್ಯರನ್ನು ಕಳೆದುಕೊಂಡವರ ದುಃಖದಲ್ಲಿ ಭಾಗಿಯಾಗಿ ಅಂತ್ಯಕ್ರಿಯೆ ನಡೆಸಿ ಮಾನವೀಯತೆ ಮೆರೆಯಬೇಕು. ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೇ ಕಠಿಣ ಕ್ರಮವನ್ನು ಜರುಗಿಸಬೇಕು ಎಂದು ಅಧಿಕಾರಿಗಳಿಗೆ ಆದೇಶ ನೀಡಿದರು.

click me!