
ಬೆಂಗಳೂರು[ನ.30]: ಬಳ್ಳಾರಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿಕೆ ಪಕ್ಷಕ್ಕೆ ಹಿನ್ನಡೆ ಉಂಟು ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ. ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಶಾಸಕಾಂಗ ಸಭೆ ಮತ್ತು ಕೋರ್ ಕಮಿಟಿ ಸಭೆಗಳಲ್ಲಿ ಉಪಚುನಾವಣೆಯ ಸೋಲಿನ ಕುರಿತು ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಬಳ್ಳಾರಿ ಉಪಚುನಾವಣೆಯಲ್ಲಿ ಇತರ ಹಲವು ಅಂಶಗಳ ಜೊತೆಗೆ ಮಾಜಿ ಸಿದ್ದರಾಮಯ್ಯ ಅವರ ಪುತ್ರನ ಸಾವಿನ ಕುರಿತು ರೆಡ್ಡಿ ಆಡಿದ ಮಾತು ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿತು. ಮುಂದಿನ ದಿನಗಳಲ್ಲಿ ಜನರ ಭಾವನೆಯನ್ನು ಕೆರಳಿಸುವಂಥ ಹೇಳಿಕೆಗಳನ್ನು ನೀಡದಂತೆ ಪಕ್ಷದ ಮುಖಂಡರು ಎಚ್ಚರಿಕೆ ವಹಿಸಬೇಕು ಎಂದರು ಎನ್ನಲಾಗಿದೆ.
ಆಡಳಿತಾರೂಢ ಕಾಂಗ್ರೆಸ್ ಪಕ್ಷ ಸಾಕಷ್ಟು ಹಣ ವ್ಯಯಿಸಿತು. ಜೊತೆಗೆ ಇಡೀ ಮಂತ್ರಿ ಮಂಡಲ ಅಲ್ಲಿ ಬಂದು ಕುಳಿತಿತು. ಮೇಲಾಗಿ ಇದು ಸಾರ್ವತ್ರಿಕ ಚುನಾವಣೆ ಆಗಿಲ್ಲದೇ ಇದ್ದುದರಿಂದ ಜನರು ಕೂಡ ಇಲ್ಲಿನ ಆಡಳಿತಾರೂಢ ಪಕ್ಷದೆಡೆಗೆ ವಾಲಿದರು. ಆದರೆ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಮತ್ತೆ ಬಿಜೆಪಿಯನ್ನು ಗೆಲ್ಲಿಸುವ ವಿಶ್ವಾಸವಿದೆ. ಅಲ್ಲದೆ, ಆ ಕ್ಷೇತ್ರದಲ್ಲಿ ನಿರ್ಣಾಯಕರಾಗಿರುವ ಲಿಂಗಾಯತ ಮತದಾರರನ್ನು ಸೆಳೆಯುವ ಸಂಬಂಧ ಆ ಸಮುದಾಯದ ಮುಖಂಡರನ್ನು ಮುಂಚೂಣಿಗೆ ತರಬೇಕು ಎಂದು ತಿಳಿಸಿದರು.
ಅದೇ ರೀತಿ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ಚಂದ್ರಶೇಖರ್ ಅವರು ಕೊನೆಯ ಕ್ಷಣದಲ್ಲಿ ಮೋಸ ಮಾಡಿ ಕಾಂಗ್ರೆಸ್ಸಿಗೆ ವಾಪಸಾದರು. ಇದನ್ನು ನಿರೀಕ್ಷಿಸಿರಲಿಲ್ಲ ಎಂಎದು ಯಡಿಯೂರಪ್ಪ ಅವರು ಸಭೆಯಲ್ಲಿ ಬೇಸರದಿಂದ ಹೇಳಿದರು ಎಂದು ಮೂಲಗಳು ಮಾಹಿತಿ ನೀಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ