
ಬೆಳಗಾವಿ: ಬೆಳಗಾವಿಯ ಬೀಮ್ಸ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದಾಗಿ ಯುವಕನೋರ್ವ ಸಾವನ್ನಪ್ಪಿದ ಆರೋಪ ಕೇಳಿ ಬಂದಿದೆ. ಕಟ್ಟಡಕ್ಕೆ ಬಣ್ಣ ಬಳಿಯುವ ವೇಳೆ ಯುವಕನೋರ್ವ ಆಯತಪ್ಪಿ ಕೆಳಗೆ ಬಿದ್ದ ಪರಿಣಾಮ ಅವರ ಸೊಂಟ ಹಾಗೂ ಕೈಗಳಿಗೆ ತೀವ್ರ ಗಾಯಗಳಾಗಿತ್ತು. ತಕ್ಷಣವೇ ಯುವಕನನ್ನು ಬೆಳಗಾವಿಯ ಬೀಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಸರಿಯಾದ ಸಮಯದಲ್ಲಿ ಯುವಕನಿಗೆ ಬೀಮ್ಸ್ನಲ್ಲಿ ವೈದ್ಯರು ಚಿಕಿತ್ಸೆ ನೀಡದ ಪರಿಣಾಮ ಆತ ಸಾವನ್ನಪ್ಪಿದ್ದಾನೆ ಎಂದು ಯುವಕನ ಕುಟುಂಬದವರು ಆರೋಪ ಮಾಡಿದ್ದಾರೆ.
ಮೃತ ಯುವಕನನ್ನು 22 ವರ್ಷದ ಶಿವು ಕಮ್ಮಾರ ಎಂದು ಗುರುತಿಸಲಾಗಿದೆ. ಈತ ಬೆಳಗಾವಿ ತಾಲೂಕಿನ ಪೀರನವಾಡಿ ಗ್ರಾಮದ ನಿವಾಸಿಯಾಗಿದ್ದ. ಈತ ಗೋಡೆಗೆ ಸುಣ್ಣ ಹೊಡೆಯುವ ಕೆಲಸ ಮಾಡುತ್ತಿದ್ದು, ಬೆಳಗಾವಿಯ ಬ್ರಹ್ಮ ನಗರದಲ್ಲಿ ಕಟ್ಟಡಕ್ಕೆ ಬಣ್ಣ ಬಳಿಯುವಾಗ ಆಯತಪ್ಪಿ ಕಟ್ಟಡದಿಂದ ಕೆಳಗೆ ಬಿದ್ದಿದ್ದ. ಕೆಳಗೆ ಬಿದ್ದ ಪರಿಣಾಮ ಶಿವು ಅವರ ಕೈ ಮತ್ತು ಸೊಂಟದ ಭಾಗಕ್ಕೆ ತೀವ್ರ ಗಾಯವಾಗಿತ್ತು. ಕೂಡಲೇ ಯುವಕನನ್ನು ಬೀಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ರಾತ್ರಿ 11ಗಂಟೆಗೆ ಬೀಮ್ಸ್ ಆಸ್ಪತ್ರೆಗೆ ಶಿವು ಅವರನ್ನು ದಾಖಲಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಯುವಕನಿಗೆ ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಬೀದಿ ಕಾಳಗದ ವೇಳೆ ಅಪ್ಪನ ರಕ್ಷಣೆಗೆ ಗನ್ ಹೊರತೆಗೆದ ಮಗಳು: ವೀಡಿಯೋ ಭಾರಿ ವೈರಲ್
ಆಸ್ಪತ್ರೆಯಲ್ಲಿ ಏಳು ಜನ ವೈದ್ಯರು ಇದ್ದರೂ ಯಾರೂ ಕೂಡ ಯುವಕ ಶಿವುಗೆ ಚಿಕಿತ್ಸೆ ನೀಡುವತ್ತ ಗಮನಹರಿಸದೇ ನಿರ್ಲಕ್ಷ್ಯ ಮಾಡಿದ್ದಾರೆ. ರಾತ್ರಿ ಪಾಳಿಯಲ್ಲಿ ವೈದ್ಯರಿದ್ದರು ಹತ್ತಿರ ಸುಳಿದಿಲ್ಲ. ಇದರಿಂದಲೇ ಶಿವು ಸ್ಥಿತಿ ಹದಗೆಟ್ಟಿದೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡಿದ್ದರೆ ನನ್ನ ಮಗ ಬದುಕುತ್ತಿದ್ದ ಎಂದು ಮೃತನ ಕುಟುಂಬದವರು ಆರೋಪಿಸಿ ಕಣ್ಣೀರಿಟ್ಟಿದ್ದಾರೆ. ಹೀಗಾಗಿ ಸಂಬಂಧಪಟ್ಟ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆರೋಪಿಸಿದ್ದಾರೆ.
ಇದನ್ನೂ ಓದಿ: ಮಗಳ ಮೇಲೆ ಅತ್ಯಾ*ಚಾರವೆಸಗಿದ ವ್ಯಕ್ತಿ ಕೊಲೆ: ತಾಯಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ಹೀಗಾಗಿ ನಿರ್ಲಕ್ಷ್ಯವಹಿಸಿದ್ದ ಸಂಬಂಧಪಟ್ಟ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬದವರು ಆಗ್ರಹಿಸಿದ್ದಾರೆ. ಆದರೆ ಕುಟುಂಬದವರ ಆರೋಪವನ್ನು ಬೀಮ್ಸ್ ಆಡಳಿತ ಮಂಡಳಿ ನಿರಾಕರಿಸಿದ್ದಾರೆ. ವೈದ್ಯರಿಂದ ನಿರ್ಲಕ್ಷ್ಯ ಆಗಿಲ್ಲ, ಅವರು ಘಟನೆ ನಡೆದ ಮೂರು ದಿನಗಳ ಬಳಿಕ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮೊದಲೆ ಕರೆತಂದಿದ್ದರೆ ಬದುಕಿಸಬಹುದಿತ್ತು ಎಂದ ವೈದ್ಯರು ಹೇಳಿದ್ದಾರೆ. ಈ ಬಗ್ಗೆ ಎಪಿಎಂಸಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ