ಬೆಂಗಳೂರಲ್ಲಿ ಮಳೆಗಾಲ ಮುಗಿಯುತ್ತಿದ್ದಂತೆ ಘರ್ಜಿಸಲಿವೆ ಜೆಸಿಬಿ: ಇಂಥವರು ಕೂಡಲೇ ಎಚ್ಚೆತ್ತುಕೊಳ್ಳಿ!

Published : Dec 15, 2023, 08:32 PM IST
ಬೆಂಗಳೂರಲ್ಲಿ ಮಳೆಗಾಲ ಮುಗಿಯುತ್ತಿದ್ದಂತೆ ಘರ್ಜಿಸಲಿವೆ ಜೆಸಿಬಿ: ಇಂಥವರು ಕೂಡಲೇ ಎಚ್ಚೆತ್ತುಕೊಳ್ಳಿ!

ಸಾರಾಂಶ

ಬೃಹತ್ ನೀರುಗಾಲುವೆ (ರಾಜಕಾಲುವೆ) ಒತ್ತುವರಿಗಳ ವಿವರ: ರಾಜಕಾಲುವೆ ಒತ್ತುವರಿ- 3,176 ಈವರೆಗೆ ಒತ್ತುವರಿ ತೆರವು- 2,322 ತೆರವು ಬಾಕಿ- 854 ನ್ಯಾಯಾಲಯದಲ್ಲಿರುವ ಪ್ರಕರಣಗಳು- 155 ಒತ್ತುವರಿ ತೆರವಿಗೆ ಆದೇಶ ಹೊರಡಿಸುವ ಹಂತದಲ್ಲಿರುವ ಪ್ರಕರಣ- 487 ತಹಸೀಲ್ದಾರರಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಪ್ರಕರಣ- 162

ಬೆಂಗಳೂರು (ಡಿ.15): ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬೆಂಗಳೂರು ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರದ ಆಸ್ತಿ ಒತ್ತುವರಿ ಮಾಡಿದವರನ್ನು ಎಂದಿಗೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದರು. ಆದರೆ, ಮಳೆಗಾಲ ಇದ್ದಿದ್ದರಿಂದ ಬಿಬಿಎಂಪಿಯ ಜೆಸಿಬಿಗಳು ಸದ್ದು ಮಾಡದೇ ಸುಮ್ಮನಾಗಿದ್ದವು. ಈಗ ಮಳೆಗಾಲ ಮುಕ್ತಾಯ ಆಗುತ್ತಿದ್ದಂತೆ ಮತ್ತೆ ಜೆಸಿಬಿಗಳು ಅಖಾಡಕ್ಕಿಳಿಯಲಿವೆ.

ಹೌದು, ನಾವು ಹೇಳ ಹೊರಟಿರುವುದು ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಹಾಗೂ ಕೆರೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಿಕೊಂಡಿರುವವರ ಬಗ್ಗೆ. ಬೆಂಗಳೂರಿನಲ್ಲಿ ಯಾರೇ ಒತ್ತುವರಿ ಮಾಡಿದ್ದರೂ ಅವರನ್ನು ಮುಲಾಜಿಲ್ಲದೇ ಜೆಸಿಬಿ ಮೂಲಕ ಒತ್ತುವರಿ ತೆರವು ಮಾಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. ಈ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತನ್ನು ಚಾಚೂ ತಪ್ಪದೇ ಪಾಲಿಸಲು ಮುಂದಾಗಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯ ಬಗ್ಗೆ ಅಧಿಕಾರಿಗಳ ಸಭೆಯನ್ನು ನಡೆಸಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಕ್ಕೆ ಕೆಳ ಹಂತದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆಂಪೇಗೌಡ ಅತ್ಯಲ್ಪ ವ್ಯಕ್ತಿ, ಜಾತಿ ಲಾಭಿಯಿಂದಲೇ ಪ್ರಸಿದ್ಧರಾಗಿದ್ದಾರೆ: ಟಿಪ್ಪು ಸುಲ್ತಾನ್ ಐತಿಹಾಸಿಕ ವೀರ ಯೋಧ!

ಬೆಂಗಳೂರಿನಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಬೇಕು. ನಿಗದಿತ ಸಮಯದಲ್ಲಿ ಕೆರೆ ಹಾಗೂ ರಾಜಕಾಲುವೆ ಒತ್ತುವರಿಗಳನ್ನು ಗುರುತಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಒತ್ತುವರಿಗಳನ್ನು ಗುರುತಿಸಿದ ನಂತರ ತಹಶೀಲ್ದಾರ್ ಗಳು ಒತತುವರಿದಾರರಿಗೆ ಆದೇಶಗಳನ್ನು ನೀಡಿದ ಬಳಿಕ ಪಾಲಿಕೆ ಹಾಗೂ ಕಂದಾಯ ಇಲಾಖೆಯು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಿದೆ ಎಂದು ಹೇಳಿದರು.

ಹದಿನೈದು ದಿನದಲ್ಲಿ 75 ಒತ್ತುವರಿಗಳ ತೆರವು: ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆ ಪ್ರಕ್ರಿಯೆ ಸಕ್ರಿಯವಾಗಿ ನಡೆಯುತ್ತಿದ್ದು, ಕಳೆದ 15 ದಿನಗಳಲ್ಲಿ ಮಹದೇವಪುರ ವ್ಯಾಪ್ತಿಯಲ್ಲಿ ಬರುವ ಎಬಿಕೆ, ಗುಂಜೂರು, ಕರಿಯಮ್ಮನ ಅಗ್ರಹಾರ, ಬೆಳ್ಳತ್ತೂರಿನಲ್ಲಿ ಹಾಗೂ ಕೆ.ಆರ್ ಪುರದ ಸರ್ವೇ ಸಂಖ್ಯೆ 69ರಲ್ಲಿ ಬರುವ 3 ಅಂತಸ್ತಿನ ಕಟ್ಟಡದಲ್ಲಿ ಬರುವ 10 ಮಳಿಗೆಗಳು ಸೇರಿದಂತೆ 62 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ. ಇನ್ನು ಯಲಹಂಕ ವಲಯ ವ್ಯಾಪ್ತಿಯಲ್ಲಿ 8 ಒತ್ತುವರಿಗಳು ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 5 ಒತ್ತುವರಿಗಳು ಸೇರಿದಂತೆ ಒತ್ತು 75 ಒತ್ತುವರಿಗಳನ್ನು ತೆರವುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕದ ಕೆಎಸ್‌ಆರ್‌ಟಿಸಿಗೆ ಸಿಕ್ತು ಭರ್ಜರಿ ಜಯ, ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ

ಕೆರೆಗಳ ಒತ್ತುವರಿಗಳ ಸರ್ವೇ ಕಾರ್ಯ ತ್ವರಿತವಾಗಿ ನಡೆಸಿ:  ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು, 159 ಕೆರೆಗಳಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಲಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರಗಳನ್ನು ಬರೆಯಲಾಗಿದೆ. ಈ ಪೈಕಿ 40 ಕೆರೆಗಳ ಸರ್ವೇ ಕಾರ್ಯ ಪೂರ್ಣಗೊಂಡಿದ್ದು, 100 ಕೆರೆಗಳಲ್ಲಿ ಸರ್ವೇ ಕಾರ್ಯ ನಡೆಸಬೇಕಿದೆ. ಉಳಿದ ಕೆರೆಗಳಲ್ಲಿ ಸರ್ವೇಕಾರ್ಯವನ್ನು ತ್ವರಿತವಾಗಿ ನಡೆಸುವಂತೆ ಸೂಚನೆ ನೀಡಿದರು. 

ಬೃಹತ್ ನೀರುಗಾಲುವೆ (ರಾಜಕಾಲುವೆ) ಒತ್ತುವರಿಗಳ ವಿವರ:

  • ರಾಜಕಾಲುವೆ ಒತ್ತುವರಿ- 3,176
  • ಈವರೆಗೆ ಒತ್ತುವರಿ ತೆರವು- 2,322
  • ತೆರವು ಬಾಕಿ- 854
  • ನ್ಯಾಯಾಲಯದಲ್ಲಿರುವ ಪ್ರಕರಣಗಳು- 155
  • ಒತ್ತುವರಿ ತೆರವಿಗೆ ಆದೇಶ ಹೊರಡಿಸುವ ಹಂತದಲ್ಲಿರುವ ಪ್ರಕರಣ- 487
  • ತಹಸೀಲ್ದಾರರಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಪ್ರಕರಣ- 162

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
Karnataka News Live: ಮಧುಗಿರಿ - ಕದ್ದ ಎಟಿಎಂ ಭಾರ ಇದೆ ಎಂದು ರಸ್ತೆಯಲ್ಲೇ ಬಿಟ್ಟು ಹೋದರು