Bengaluru Stampede Case: ಆಸ್ಪತ್ರೆಗೆ ದಾಖಲಾದ ಮತ್ತೊಬ್ಬ ಯುವಕನ ಸ್ಥಿತಿ ಗಂಭೀರ!

Ravi Janekal   | Kannada Prabha
Published : Jun 06, 2025, 06:24 AM ISTUpdated : Jun 06, 2025, 10:12 AM IST
Bengaluru stampede case

ಸಾರಾಂಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತದಲ್ಲಿ ಗಾಯಗೊಂಡ ವಿಶಾಲ್ ಎಂಬ ಯುವಕನ ಸ್ಥಿತಿ ಗಂಭೀರವಾಗಿದೆ. ರೆ.

ಬೆಂಗಳೂರು (ಜೂ.6): ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬುಧವಾರ ಆರ್‌ಸಿಬಿ ಗೆಲುವಿನ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ ಗಾಯಗೊಂಡಿರುವ ಕೆಲವರಿಗೆ ನಗರದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ. ಈ ಮಧ್ಯೆ, ಪೋರ್ಟೀಸ್‌ ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಶಾಲ್‌ ಎಂಬ 18 ವರ್ಷದ ಯುವಕನ ಸ್ಥಿತಿ ಗಂಭೀರವಾಗಿದೆ. ನನ್ನ ಮಗ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ, ಈವರೆಗೂ ಸರ್ಕಾರದ ಯಾವೊಬ್ಬ ಅಧಿಕಾರಿ, ಪ್ರತಿನಿಧಿಗಳೂ ಇತ್ತ ತಿರುಗಿ ನೋಡಿಲ್ಲ ಎಂದು ವಿಶಾಲ್‌ ತಾಯಿ ಲಕ್ಷ್ಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದಿರಾನಗರದ ಮೊಟ್ಟಪ್ಪ ಪಾಳ್ಯದ ನಿವಾಸಿ ವಿಶಾಲ್ ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಮೊದಲ ವರ್ಷದ ಎಂಜಿನಿಯರಿಂಗ್ ಓದುತ್ತಿದ್ದ ವಿಶಾಲ್ ಮನೆಯಲ್ಲೂ ಹೇಳದೆ ಸ್ನೇಹಿತರ ಜೊತೆ ಆರ್‌ಸಿಬಿ ವಿಜಯೋತ್ಸವ ನೋಡಲು ಬಂದಿದ್ದ. ಕಾಲ್ತುಳಿತದಲ್ಲಿ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಆತನನ್ನು ಪೋರ್ಟೀಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

- ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ

ಬೌರಿಂಗ್‌ ಆಸ್ಪತ್ರೆ, ವೈದೇಹಿ ಮಲ್ಯ, ಪೋರ್ಟೀಸ್‌ ಮತ್ತು ಮಣಿಪಾಲ್‌ ಆಸ್ಪತ್ರೆಗಳಲ್ಲಿ ಇನ್ನೂ ಹಲವು ಗಾಯಾಳುಗಳು, ಅಸ್ವಸ್ಥರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಲ್ಲಿ ಕಾಲಿನ ಮೂಳೆ ಮುರಿದಿದ್ದ ಕೆ.ಆರ್‌.ಪುರ ನಿವಾಸಿ ವೇಣು ಎನ್ನುವವರಿಗೆ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯರು ಟಿಬಿಯಾ ಸರ್ಜರಿ ನಡೆಸಿದ್ದಾರೆ. ಇದೇ ತಿಂಗಳಲ್ಲಿ ನ್ಯಾಷನಲ್‌ ಥರ್ಮಲ್‌ ಪವರ್‌ ಕಾರ್ಪೊರೇಷನ್‌ ಪ್ರವೇಶ ಪರೀಕ್ಷೆ(ಎನ್‌ಟಿಬಿಸಿ) ಬರೆಯಬೇಕಿದ್ದ ವೇಣು ಆರ್‌ಸಿಬಿ ವಿಜಯೋತ್ಸವಕ್ಕೆ ಬಂದಿದ್ದ ವೇಳೆ ನೂಕುನುಗ್ಗಲು ಉಂಟಾದಾಗ ಕಾಲಿನ ಮೂಳೆ ಮುರಿದಿತ್ತು ಎಂದು ವೈದ್ಯರು ತಿಳಿಸಿದ್ದಾರೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿರುವ ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಕೆಂಪರಾಜು, ಘಟನೆ ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ 18 ಜನರಲ್ಲಿ ಆರು ಮಂದಿ ಮೃತಪಟ್ಟಿದ್ದರು. ಉಳಿದ 12 ಜನ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗಿದೆ. ಇದರಲ್ಲಿ ಸಣ್ಣಪುಟ್ಟ ಗಾಯಗಳಾಗಿದ್ದ ಒಂದಿಬ್ಬರನ್ನು ಬುಧವಾರವೇ ಮನೆಗೆ ಕಳುಹಿಸಲಾಗಿತ್ತು.

ಇನ್ನು 10 ಜನರಿಗೆ ಚಿಕಿತ್ಸೆ ನೀಡಲಾಗಿತ್ತು. ಇದರಲ್ಲಿ ಮೂವರಿಗೆ ಕಾಲು ಮುರಿತವಾಗಿದೆ. ಅವರಲ್ಲಿ ಒಬ್ಬರು ಬೇರೆ ಆಸ್ಪತ್ರೆಗೆ ಹೋಗಿದ್ದಾರೆ. ಉಳಿದ ಇಬ್ಬರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗುವುದು. 14 ವರ್ಷದ ಬಿಲಾಲ್‌ ಅನ್ನೋ ಹುಡುಗ ಮಕ್ಕಳ ವಿಭಾಗದಲ್ಲಿದ್ದಾನೆ. ಅವನ ಕಣ್ಣಿಗೆ ಸ್ವಲ್ಪ ಸಮಸ್ಯೆ ಆಗಿದೆ. ಸದ್ಯ ಯಾವುದೇ ತೊಂದರೆ ಇಲ್ಲ. ಉಳಿದವರನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ಹೇಳಿದರು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!
ನನಗೂ ಸಿಎಂ ಆಗುವ ಆಸೆ ಇದೆ, ಹೈಕಮಾಂಡ್ ನಿರ್ಧಾರ ಅಂತಿಮ: ದಿನೇಶ್‌ ಗುಂಡೂರಾವ್